ಮೇಕೆದಾಟು ಯೋಜನೆ: ಪರಿಸರ ಇಲಾಖೆ ಅನುಮತಿ ಪಡೆಯಲು ಡಬಲ್ ಇಂಜಿನ್ ಸರಕಾರಕ್ಕೆ ಸಾಧ್ಯವಾಗಿಲ್ಲ ಎಂದ ಸಿದ್ದರಾಮಯ್ಯ

ಹೊಸದಿಲ್ಲಿ, ಫೆ.25: ನಮ್ಮ ಸರಕಾರ ಮೇಕೆದಾಟು ಯೋಜನೆಗೆ 2017 ರಲ್ಲಿ ಡಿಪಿಆರ್ ತಯಾರಿಸಿ, ಕೇಂದ್ರ ಜಲಮಂಡಳಿಗೆ ನೀಡಿತ್ತು. ಅವರು ಕೆಲವು ಮಾಹಿತಿ ಕೇಳಿ ರಾಜ್ಯಕ್ಕೆ ವಾಪಾಸು ಕಳಿಸಿದ್ದರು, ಆಗ ಸಮ್ಮಿಶ್ರ ಸರಕಾರ ಇತ್ತು. ಜಲಸಂಪನ್ಮೂಲ ಸಚಿವರಾಗಿದ್ದ ಡಿ.ಕೆ. ಶಿವಕುಮಾರ್ ಕೇಂದ್ರ ಜಲಮಂಡಳಿ ಕೇಳಿದ್ದ ಹೆಚ್ಚಿನ ಮಾಹಿತಿಯನ್ನು ಒದಗಿಸಿ, ಪರಿಷ್ಕøತ ಡಿಪಿಆರ್ ಮಾಡಿ ಕಳಿಸಿದ್ದರು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ಶುಕ್ರವಾರ ಹೊಸದಿಲ್ಲಿಯಲ್ಲಿ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮೇಕೆದಾಟು ಯೋಜನೆಗೆ ಪರಿಸರ ಇಲಾಖೆಯ ಅನುಮತಿ ಮಾತ್ರ ಬಾಕಿಯಿದೆ. 2019ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂತು, ಯಡಿಯೂರಪ್ಪ ಎರಡು ವರ್ಷ, ಬಸವರಾಜ ಬೊಮ್ಮಾಯಿ ಏಳು ತಿಂಗಳು ಮುಖ್ಯಮಂತ್ರಿ ಆಗಿ ಅಧಿಕಾರ ನಡೆಸಿದ್ದಾರೆ. ಇಷ್ಟು ಸಮಯದಲ್ಲಿ ಒಂದು ಪರಿಸರ ಇಲಾಖೆ ಅನುಮತಿ ಪಡೆಯಲು ಈ ಡಬ್ಬಲ್ ಇಂಜಿನ್ ಸರಕಾರದಿಂದ ಸಾಧ್ಯವಾಗಿಲ್ಲ ಎಂದು ಕಿಡಿಗಾರಿದರು.
ಮಳೆಗಾಲದಲ್ಲಿ ಹರಿದು ಹೋಗಿ ಸಮುದ್ರ ಪಾಲಾಗುವ 67 ಟಿ.ಎಂ.ಸಿ ನೀರನ್ನು ಶೇಖರಿಸಿಟ್ಟು, ಬೆಂಗಳೂರು ಸುತ್ತಮುತ್ತಲಿನ ಜನರಿಗೆ ಕುಡಿಯುವ ನೀರು ಸರಬರಾಜು ಮಾಡುವುದು ಮತ್ತು 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡುವುದು ಯೋಜನೆಯ ಉದ್ದೇಶ. ಈ ಯೋಜನೆ ಜಾರಿಯಾದರೆ ಬೆಂಗಳೂರು ನಗರಕ್ಕೆ ಮುಂದಿನ 50 ವರ್ಷಗಳ ವರೆಗೆ ಕುಡಿಯುವ ನೀರಿನ ಸಮಸ್ಯೆ ಇರಲ್ಲ. 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡುವುದರಿಂದ ಬೆಂಗಳೂರು ಸುತ್ತಮುತ್ತಲಿನ ಕೈಗಾರಿಕೆಗಳಿಗೆ ವಿದ್ಯುತ್ ಸಮಸ್ಯೆ ಆಗಲ್ಲ ಎಂದು ಅವರು ಹೇಳಿದರು.
ಇಂಥದ್ದೊಂದು ಜನಪರ ಯೋಜನೆ ಜಾರಿಯಾಗಬೇಕೆಂದು ನಾವು ಪಾದಯಾತ್ರೆ ಮಾಡುತ್ತಿದ್ದೇವೆ. ಇದು ರಾಜಕೀಯ ಪಾದಯಾತ್ರೆ ಅಲ್ಲ, ಅದಕ್ಕಾಗಿ ಎಲ್ಲಾ ಸಂಘ ಸಂಸ್ಥೆಗಳು, ಕಾರ್ಮಿಕ ಸಂಘಗಳು, ರೈತರು, ಕೂಲಿ ಕಾರ್ಮಿಕರು ಭಾಗವಹಿಸಬೇಕು ಎಂದು ಮನವಿ ಮಾಡಿದ್ದೇವೆ. ಕಾಂಗ್ರೆಸ್ ಪಕ್ಷ ನೇತ್ರತ್ವ ವಹಿಸಿದ್ದು ಬಿಟ್ಟರೆ ಇದು ಎಲ್ಲರ ಹೋರಾಟ ಎಂದು ಸಿದ್ದರಾಮಯ್ಯ ಹೇಳಿದರು.
ಜನವರಿ 9 ರಿಂದ ಪಾದಯಾತ್ರೆ ಆರಂಭಿಸಿ ನಾಲ್ಕು ದಿನ ನಡೆದಿದ್ದೆವು, ಆ ವೇಳೆಗೆ ಕೊರೋನ ಮೂರನೇ ಅಲೆ ಆರಂಭವಾಗಿತ್ತು, ನ್ಯಾಯಾಲಯದ ಆದೇಶವನ್ನು ಗೌರವಿಸಬೇಕು ಎಂಬ ಉದ್ದೇಶದಿಂದ ರಾಮನಗರ ತಲುಪಿದ ಮೇಲೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದೆವು. ಬಜೆಟ್ ಅಧಿವೇಶನ ಮಾರ್ಚ್ನಲ್ಲಿ ಆರಂಭವಾಗುತ್ತಿದೆ. ಆದುದರಿಂದ, ಫೆ.27ರಿಂದ ಪಾದಯಾತ್ರೆ ಮಾಡುತ್ತೇವೆ. ಬೆಂಗಳೂರು ನಗರದಲ್ಲಿ 5 ದಿನದ ಬದಲು 3 ದಿನ ಪಾದಯಾತ್ರೆ ಮಾಡುತ್ತೇವೆ. ಮಾ.3ರಂದು ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಸಭೆ ನಡೆಸಿ ಪಾದಯಾತ್ರೆ ಮುಕ್ತಾಯ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಮಾಹಿತಿ ನೀಡಿದರು.
ಈ ಯೋಜನೆಯಿಂದ ಅಂತರ್ಜಲ ಮಟ್ಟ ಹೆಚ್ಚಾಗುತ್ತೆ, ಕುಡಿಯುವ ನೀರು ಮತ್ತು ವಿದ್ಯುತ್ ಸಿಗುತ್ತದೆ, ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಕಬಿನಿ, ಕೆಆರ್ಎಸ್, ಹೇಮಾವತಿ, ಹಾರಂಗಿ ಮೇಲಿನ ಒತ್ತಡ ಕಡಿಮೆಯಾಗುತ್ತೆ. ಬೇಸಿಗೆಯಲ್ಲಿ ಈ ಅಣೆಕಟ್ಟಿನಲ್ಲಿ ನೀರು ಕಡಿಮೆಯಾದಾಗ ಮೇಕೆದಾಟು ಇಂದ ಬಿಡಬಹುದು ಎಂದು ಅವರು ತಿಳಿಸಿದರು.
ಈ ಯೋಜನೆಯಿಂದ ತಮಿಳುನಾಡಿಗೆ ಏನೇನೂ ತೊಂದರೆಯಾಗಲ್ಲ, ರಾಜಕೀಯ ಕಾರಣಕ್ಕೆ ಅವರು ತಕರಾರು ಮಾಡುತ್ತಿದ್ದಾರೆ. ವಿದ್ಯುತ್ ಉತ್ಪಾದನೆಗೆ ಬಳಕೆಯಾದ ನೀರು ಕೂಡ ತಮಿಳುನಾಡಿಗೆ ಹೋಗುತ್ತೆ. ಎರಡೂ ರಾಜ್ಯಗಳಿಗೆ ಇದರಿಂದ ಅನುಕೂಲ ಇದೆ. ಪರಿಸರ ಅನುಮತಿ ಪತ್ರ ಪಡೆಯಲು ಎರಡೂವರೆ ವರ್ಷ ಬೇಕಾ? ಇದೊಂದು ಜನಪರವಾದ ಯೋಜನೆ, ಹಾಗಾಗಿ ನಾವು ಪಾದಯಾತ್ರೆ ಮಾಡುತ್ತಿದ್ದೇವೆ ಎಂದು ಸಿದ್ದರಾಮಯ್ಯ ಪುನರುಚ್ಚರಿಸಿದರು.
ಬಿಜೆಪಿಯವರು ಪಾದಯಾತ್ರೆಯನ್ನು ರಾಜಕೀಯ ದುರ್ಬಿನ್ ಮೂಲಕ ನೋಡುತ್ತಾರೆ. ಪಾದಯಾತ್ರೆ ಆರಂಭ ಮಾಡಿದ ಕೂಡಲೇ ಜಾಹೀರಾತು ಕೊಡುತ್ತಾರೆ, ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಏನೂ ಮಾಡಿಲ್ಲ ಎಂದು ಸುಳ್ಳು ಹೇಳುತ್ತಾರೆ. ಸರಿ ಕಾಂಗ್ರೆಸ್ ಪಕ್ಷ ವಿಸ್ತೃತ ಯೋಜನಾ ವರದಿ ಮಾಡಿ ಕಳಿಸಿಕೊಟ್ಟಿದ್ದೆ, ಕಳೆದ ಎರಡೂವರೆ ವರ್ಷಗಳಲ್ಲಿ ನೀವೇನು ಮಾಡಿದ್ದೀರ ಎಂದು ಪ್ರಶ್ನೆ ಕೇಳಿದ್ರೆ ಅದಕ್ಕೆ ಉತ್ತರವೇ ಇಲ್ಲ ಎಂದು ಅವರು ಟೀಕಿಸಿದರು.
ಪಾದಯಾತ್ರೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮತ್ತು ಪೆÇಲೀಸ್ ಇಲಾಖೆಗೆ ಮಾಹಿತಿ ನೀಡಿದ್ದೇವೆ. ತಮಿಳುನಾಡಿಗೆ ಅವರ ಪಾಲಿನ ನೀರು ಕೊಡುವುದಾಗಿ ಒಪ್ಪಿಕೊಂಡಿದ್ದೇವೆ, ಎಷ್ಟು ಅರಣ್ಯ ಮುಳುಗಡೆ ಆಗುತ್ತದೋ ಅμÉ್ಟೀ ಪ್ರಮಾಣದ ಜಮೀನನ್ನು ನೀಡಲು ಒಪ್ಪಿಕೊಂಡಿದ್ದೇವೆ. ಮೇಧಾ ಪಾಟ್ಕರ್ ಅವರಿಗೆ ಈ ಬಗ್ಗೆ ಮಾಹಿತಿ ಇಲ್ಲ ಅನ್ನಿಸುತ್ತೆ. ತಮಿಳುನಾಡಿಗೆ ಯೋಜನೆ ಬಗ್ಗೆ ತಕರಾರು ಮಾಡಲು ಯಾವುದೇ ಕಾನೂನಾತ್ಮಕ ಹಕ್ಕಿಲ್ಲ. ಕಾವೇರಿ ವಿವಾದವನ್ನು ಜೀವಂತವಾಗಿಡಲು ತಮಿಳುನಾಡಿನ ಪಕ್ಷಗಳು ಪ್ರಯತ್ನ ಮಾಡುತ್ತಿವೆ ಎಂದು ಸಿದ್ದರಾಮಯ್ಯ ಹೇಳಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿ, ನಾನು ಜಲ ಸಂಪನ್ಮೂಲ ಸಚಿವನಾಗಿದ್ದ ಸಮಯದಲ್ಲಿ ಮೇಕೆದಾಟು ಯೋಜನೆಯ ಡಿಪಿಆರ್ ಸಲ್ಲಿಸಿ, ಅದಕ್ಕೆ ಕೇಂದ್ರ ಸರಕಾರ ಅನುಮೋದನೆ ನೀಡಿದೆ. ತದನಂತರ ಸಂಸತ್ತಿನ ಉಭಯ ಸದನಗಳಲ್ಲಿ ತಮಿಳುನಾಡಿನ ಸಂಸದರು ಪ್ರತಿಭಟನೆ ಮಾಡಿದ್ದರು. ನಾನು ದಿಲ್ಲಿಗೆ ಬಂದು ಬಿಜೆಪಿಯ ಕೇಂದ್ರ ಸಚಿವರನ್ನು ಭೇಟಿ ಮಾಡಿದ್ದೆ ಎಂದರು.
ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ನಾವು ದಿಲ್ಲಿಯಲ್ಲಿ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ಮಾಡಿದೆವು. ಆಗ ಬಿಜೆಪಿಯ ನಳೀನ್ ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ ಹಾಗೂ ಇತರ ನಾಯಕರ ಜೊತೆ ಮಾತನಾಡಿದ್ದೆವು. ಆಗ ಅವರು ಕೂಡ ನಮ್ಮ ಜತೆ ಪ್ರತಿಭಟನೆ ಮಾಡಿದ್ದರು. ನಾನು ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದೆ ಎಂದು ಅವರು ಹೇಳಿದರು.
ಅಂದು ನಮ್ಮ ಜತೆ ಹೋರಾಟ ಮಾಡಿದವರು ಇಂದು ಯೋಜನೆ ಜಾರಿ ವಿಚಾರದಲ್ಲಿ ಮೌನವಾಗಿರುವುದೇಕೆ? ಈವರೆಗೂ ಯಾಕೆ ಕಾರ್ಯರೂಪಕ್ಕೆ ತರಲು ಸಾಧ್ಯವಾಗಿಲ್ಲ. ಕುಡಿಯುವ ನೀರಿನ ಯೋಜನೆಗೆ ಯಾವುದೇ ಅನ್ಯರಾಜ್ಯಗಳ ಅನುಮತಿ ಬೇಕಾಗಿಲ್ಲ ಎಂದು ಸುಪ್ರೀಂಕೋರ್ಟ್ ಆದೇಶವಿದೆ. ಇದನ್ನು ಮುಖ್ಯಮಂತ್ರಿ ಒಪ್ಪಿಕೊಂಡಿದ್ದಾರೆ. ಹೀಗಿದ್ದರೂ ವಿಳಂಬ ಏಕೆ ಎಂದು ಅರ್ಥವಾಗುತ್ತಿಲ್ಲ ಎಂದು ಶಿವಕುಮಾರ್ ಪ್ರಶ್ನಿಸಿದರು.
ಉಕ್ರೇನ್ನಿಂದ ರಾಜ್ಯದ ಮತ್ತು ದೇಶದ ಎಲ್ಲ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರುವುದು ಕೇಂದ್ರ ಸರಕಾರದ ಹೊಣೆ. ಈ ಬಗ್ಗೆ ನಾನು ಮುಖ್ಯಮಂತ್ರಿ ಮತ್ತು ರಾಹುಲ್ ಗಾಂಧಿ ಜೊತೆ ಮಾತನಾಡುತ್ತೇನೆ. ಯುಕ್ರೇನ್ನಲ್ಲಿರುವ ರಾಯಭಾರ ಕಚೇರಿಯನ್ನು ಸಂಪರ್ಕಿಸಿ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರುವ ಕೆಲಸ ಕೇಂದ್ರದ್ದು. ರಾಜ್ಯಗಳು ಈ ಕಾರ್ಯಾಚರಣೆಗೆ ಆರ್ಥಿಕ ಸಹಾಯ ಮಾಡಬಹುದು ಅಷ್ಟೇ
ಸಿದ್ದರಾಮಯ್ಯ, ವಿರೋಧ ಪಕ್ಷದ ನಾಯಕ







