ಪ್ರಮೋದ್ ಮುತಾಲಿಕ್, ಚೈತ್ರಾ ಕುಂದಾಪುರಗೆ ಕಲಬುರಗಿ ಜಿಲ್ಲೆ ಪ್ರವೇಶ ನಿರ್ಬಂಧ: ಡಿ.ಸಿ ಆದೇಶ
ಕೋಮು ಸೌಹಾರ್ದತೆಗೆ ಧಕ್ಕೆ ಸಾಧ್ಯತೆ ಹಿನ್ನೆಲೆ
ಚೈತ್ರಾ ಕುಂದಾಪುರ | ಪ್ರಮೋದ್ ಮುತಾಲಿಕ್
ಕಲಬುರಗಿ: ಜಿಲ್ಲೆಯಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಫೆ.27 ರಿಂದ ಮಾ.3ರ ವರೆಗೆ ಶ್ರೀರಾಮ ಸೇನೆಯ ರಾಜ್ಯಾಧ್ಯಕ್ಷ ಪ್ರಮೋದ್ ಮುತಾಲಿಕ್, ಚೈತ್ರಾ ಕುಂದಾಪುರ ಅವರನ್ನು ಕಲಬುರಗಿ ಜಿಲ್ಲೆ ಪ್ರವೇಶಿಸದಂತೆ ಸಿ.ಆರ್.ಪಿ.ಸಿ ಕಾಯ್ದೆ-1973ರ ಕಲಂ-132, 143, 144 ಹಾಗೂ 144ಎರನ್ವಯ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಅವರು ಶುಕ್ರವಾರ ಆದೇಶ ಹೊರಡಿಸಿದ್ದಾರೆ.
ಇದಲ್ಲದೆ ಜೇವರ್ಗಿ ತಾಲೂಕಿನ ಆಂದೋಲದ ಕರುಣೇಶ್ವರ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರನ್ನು ಸಹ ಫೆ. 27 ರಿಂದ ಮಾ.3ರ ವರೆಗೆ ಆಳಂದ ತಾಲೂಕು ಪ್ರವೇಶಿಸದಂತೆ ನಿರ್ಬಂಧ ವಿಧಿಸಲಾಗಿದೆ.
ಆಳಂದ ಪಟ್ಟಣದ ಲಾಡ್ಲೆ ಮಶಾಕ್ ದರ್ಗಾದಲ್ಲಿ ಮಾರ್ಚ್ 1 ರಂದು ಸಂದಲ್ ಮತ್ತು ಶಬ್-ಏ-ಬರಾತ್ ಕಾರ್ಯಕ್ರಮ ಇದ್ದು, ಅದೇ ದಿನ ಮಹಾಶಿವರಾತ್ರಿ ಇರುವುದರಿಂದ ದರ್ಗಾದಲ್ಲಿರುವ ಶಿವಲಿಂಗದ ಶುದ್ಧೀಕರಣ ಕಾರ್ಯಕ್ರಮಕ್ಕೆ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರು ಕರೆ ನೀಡಿದಲ್ಲದೆ ಫೆ.27ಕ್ಕೆ ಆಳಂದ ಚಲೋ ಕಾರ್ಯಕ್ರಮಕ್ಕೆ ಕರೆ ನೀಡಿರುವ ಕಾರಣ ಪಟ್ಟಣದಲ್ಲಿ ಶಾಂತಿ ಸುವ್ಯವಸ್ಥೆ ಮತ್ತು ಕೋಮು ಸೌಹಾರ್ದತೆ ಧಕ್ಕೆ ಉಂಟಾಗುವ ಸಾಧ್ಯತೆಯಿರುವ ಕಾರಣ ಪ್ರಮೋದ್ ಮುತಾಲಿಕ್ , ಚೈತ್ರಾ ಕುಂದಾಪುರ ಅವರನ್ನು ಕಲಬುರಗಿ ಜಿಲ್ಲೆ ಪ್ರವೇಶಿಸದಂತೆ ಮತ್ತು ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರನ್ನು ಆಳಂದ ತಾಲೂಕು ಪ್ರವೇಶಿಸದಂತೆ ನಿರ್ಬಂಧ ವಿಧಿಸಬೇಕೆಂಬ ಜಿಲ್ಲಾ ಪೊಲೀಸ್ ಅಧೀಕ್ಷಕರ ವರದಿಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಈ ಆದೇಶ ಹೊರಡಿಸಿದ್ದಾರೆ.