ಉಕ್ರೇನ್ನಲ್ಲಿ ಭಾರತೀಯರ ಅಸಹಾಯಕ ಸ್ಥಿತಿಗೆ ಕೇಂದ್ರ ಕಾರಣ: ಸಿದ್ದರಾಮಯ್ಯ
ಪ್ರಹ್ಲಾದ್ ಜೋಷಿ ಹೇಳಿಕೆ ಬೇಜವಾಬ್ದಾರಿತನದ್ದಾಗಿದೆ ಎಂದ ವಿಪಕ್ಷ ನಾಯಕ

ಸಿದ್ದರಾಮಯ್ಯ
ಬೆಂಗಳೂರು, ಮಾ.2: ಯುದ್ಧಗ್ರಸ್ತ ಉಕ್ರೇನ್ನಲ್ಲಿ ಸಂಕಷ್ಟಕ್ಕೆ ಈಡಾಗಿರುವ ಭಾರತೀಯರು ಮುಖ್ಯವಾಗಿ ವಿದ್ಯಾರ್ಥಿಗಳು ಸಾವು-ಬದುಕಿನ ಹೋರಾಟ ನಡೆಸುತ್ತಿರುವಂತಹ ಅಸಹಾಯಕ ಸ್ಥಿತಿಗೆ ತಲುಪಲು ಕೇಂದ್ರ ಸರಕಾರದ ಅನಿಶ್ಚಿತ ಮತ್ತು ಬೇಜವಾಬ್ದಾರಿ ನೀತಿ-ನಿಲುವುಗಳೂ ಕಾರಣ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಕಳೆದ ಕೆಲವು ತಿಂಗಳುಗಳಿಂದ ಯುಕ್ರೇನ್ ಮತ್ತು ರಶ್ಯ ನಡುವೆ ಯಾವುದೇ ಕ್ಷಣದಲ್ಲಿ ಯುದ್ಧ ಸ್ಫೋಟವಾಗಬಹುದೆಂಬ ವರದಿಗಳ ಹಿನ್ನೆಲೆಯಲ್ಲಿ ವಿಶ್ವದ ಹಲವಾರು ದೇಶಗಳು ಅಲ್ಲಿರುವ ತಮ್ಮ ಪ್ರಜೆಗಳನ್ನು ಸುರಕ್ಷಿತವಾಗಿ ವಾಪಸು ಕರೆಸಿಕೊಳ್ಳುವ ಪ್ರಯತ್ನ ಪ್ರಾರಂಭಿಸಿತ್ತು. ಆದರೆ ಭಾರತ ಮಾತ್ರ ಯುದ್ಧ ಶುರುವಾಗುವವರೆಗೆ ಭಾರತೀಯರ ಸುರಕ್ಷತೆ ಬಗ್ಗೆ ತಲೆ ಕೆಡಿಸಿಕೊಂಡಿರಲಿಲ್ಲ ಎಂದು ಅವರು ಕಿಡಿಗಾರಿದ್ದಾರೆ.
ತನ್ನನ್ನು ವಿಶ್ವಗುರು ಎಂದು ಕೊಂಡಾಡುತ್ತಾ ಭಕ್ತರು ನಡೆಸುತ್ತಿರುವ ಬೋಪರಾಕ್ ಭಜನೆಗೆ ಪ್ರಧಾನಿ ತಲೆ ತೂಗುತ್ತಾ ಕಾಲಹರಣ ಮಾಡಿದರೇ ವಿನಹ ಯುದ್ಧಗ್ರಸ್ತ ಯುಕ್ರೇನ್ನಲ್ಲಿರುವ ಸಾವಿರಾರು ಭಾರತೀಯರ ಸುರಕ್ಷತೆ ಬಗ್ಗೆ ಗಮನ ನೀಡಲೇ ಇಲ್ಲ. ಕೇಂದ್ರ ಸರಕಾರದ ಈ ನಿರ್ಲಕ್ಷ್ಯದಿಂದಾಗಿಯೇ ಕರ್ನಾಟಕದ ಯುವ ವಿದ್ಯಾರ್ಥಿ ನವೀನ್ ಪ್ರಾಣ ಕಳೆದುಕೊಂಡು ಆತನ ಹೆತ್ತವರು ಕಣ್ಣೀರಿನಲ್ಲಿ ಕೈತೊಳೆಯುವಂತಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಆ ವಿದ್ಯಾರ್ಥಿಯ ಸಹಪಾಠಿಗಳು ಮತ್ತು ಹೆತ್ತವರ ಹೇಳಿಕೆಗಳೇ ಕೇಂದ್ರ ಸರಕಾರದ ವೈಫಲ್ಯಕ್ಕೆ ಸಾಕ್ಷಿಯಾಗಿವೆ. ಪ್ರಧಾನಿ ನರೇಂದ್ರ ಮೋದಿ ಮತ್ತು ವಿದೇಶಾಂಗ ವ್ಯವಹಾರ ಸಚಿವರು ಸಕಾಲದಲ್ಲಿ ಈ ವಿದ್ಯಾರ್ಥಿಗಳ ನೆರವಿಗೆ ಧಾವಿಸಿ ಅವರನ್ನು ಭಾರತಕ್ಕೆ ಕರೆತಂದಿದ್ದರೆ ಅಮೂಲ್ಯವಾದ ಜೀವವೊಂದು ಉಳಿಯುತ್ತಿತ್ತು ಎಂದು ಅವರು ಹೇಳಿದ್ದಾರೆ.
ನಮ್ಮೊಳಗಿನ ರಾಜಕೀಯ ಭಿನ್ನಾಭಿಪ್ರಾಯಗಳು, ಸೈದ್ಧಾಂತಿಕ ವ್ಯತ್ಯಾಸಗಳು ಏನೇ ಇದ್ದರೂ ಅಂತರ್ರಾಷ್ಟ್ರೀಯ ಮಟ್ಟದಲ್ಲಿ ನಡೆಯುತ್ತಿರುವ ಬೆಳವಣಿಗೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರಕಾರ ಕೈಗೊಳ್ಳುವ ನಿರ್ಧಾರವನ್ನು ಬೆಂಬಲಿಸುವುದು ನಮ್ಮ ಕರ್ತವ್ಯವಾಗಿದೆ. ಈ ಕರ್ತವ್ಯ ಪ್ರಜ್ಞೆಯಿಂದಾಗಿ ಕೇಂದ್ರ ಸರಕಾರದ ವೈಫಲ್ಯಗಳ ಪಟ್ಟಿಯನ್ನು ಪೂರ್ಣವಾಗಿ ನೀಡಲು ನಾನು ಬಯಸುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
ಯುಕ್ರೇನ್ ಮತ್ತು ರಶ್ಯ ನಡುವಿನ ಈಗಿನ ಯುದ್ಧಕ್ಕೆ ಸಂಬಂಧಿಸಿದಂತೆ ಭಾರತ ಸರಕಾರ ಕೈಗೊಳ್ಳುವ ನಿರ್ಧಾರಕ್ಕೆ ನಾವೆಲ್ಲ ಬದ್ಧರಾಗಲೇ ಬೇಕಾಗುತ್ತದೆ. ಯುಕ್ರೇನ್ನಲ್ಲಿರುವ ಭಾರತೀಯ ವಿದ್ಯಾರ್ಥಿಗಳು ಯುಕ್ರೇನ್ ಮತ್ತು ರಶ್ಯ ದೇಶಗಳೆರಡರ ವೈಷಮ್ಯದ ನಡುವೆ ಸಿಕ್ಕಿಹಾಕಿಕೊಂಡು ಸಾವು-ಬದುಕಿನ ಹೋರಾಟ ನಡೆಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.
ಯುಕ್ರೇನ್ನ ಬಹಳಷ್ಟು ಪ್ರದೇಶಗಳಲ್ಲಿ ಆ ದೇಶದ ಜನ ಮತ್ತು ಸೈನಿಕರು ಭಾರತೀಯ ವಿದ್ಯಾರ್ಥಿಗಳ ಮೇಲೆ ಹಲ್ಲೆ-ದೌರ್ಜನ್ಯಗಳನ್ನು ನಡೆಸುತ್ತಿರುವುದು ಮಾತ್ರವಲ್ಲ, ಅಪಹರಿಸಿಕೊಂಡು ಹೋಗಿರುವ ಘಟನೆಗಳು ಕೂಡಾ ವರದಿಯಾಗಿವೆ. ಇದು ಅತ್ಯಂತ ಕಳವಳಕಾರಿ ಸಂಗತಿಯಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಯುದ್ಧಗ್ರಸ್ತ ದೇಶದಿಂದ ಭಾರತೀಯರನ್ನು ಸುರಕ್ಷಿತವಾಗಿ ಕರೆತರುವ ಕಾರ್ಯಾಚರಣೆ ಭಾರತಕ್ಕೆ ಹೊಸದೇನಲ್ಲ. ಹಿಂದೆಯೂ ಗಲ್ಫ್ ಯುದ್ಧ ನಡೆಯುತ್ತಿದ್ದಾಗ ಸುಮಾರು ಒಂದೂವರೆ ಲಕ್ಷ ಭಾರತೀಯರನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರಲಾಗಿತ್ತು. ಲಿಬಿಯಾದ ಯುದ್ಧದ ಸಮಯದಲ್ಲಿ ಸುಮಾರು 15,000 ಮತ್ತು ಯೆಮನ್ ಯುದ್ಧ ಕಾಲದಲ್ಲಿ ಅಂದಾಜು 5,000 ಭಾರತೀಯರನ್ನು ಆಗಿನ ಕಾಂಗ್ರೆಸ್ ಸರಕಾರ ಭಾರತಕ್ಕೆ ಕರೆತಂದಿತ್ತು ಎಂದು ಅವರು ಸ್ಮರಿಸಿದ್ದಾರೆ.
ಆಗಿನ ಕಾಂಗ್ರೆಸ್ ಸರಕಾರ ಇಲ್ಲವೇ ಕಾಂಗ್ರೆಸ್ ಪಕ್ಷ ಆ ಕಾರ್ಯಾಚರಣೆ ಬಗ್ಗೆ ನರೇಂದ್ರ ಮೋದಿ ಸರಕಾರದಂತೆ ಪ್ರಚಾರ ಮಾಡಿ ಅದನ್ನು ರಾಜಕೀಯವಾಗಿ ಬಳಸಿಕೊಳ್ಳುವ ಪ್ರಯತ್ನ ಮಾಡಿರಲಿಲ್ಲ. ಆದರೆ ನರೇಂದ್ರ ಮೋದಿ ಸರಕಾರ ಯುಕ್ರೇನ್ನಿಂದ ಭಾರತೀಯರನ್ನು ಕರೆತರುವ ಕಾರ್ಯಾಚರಣೆಗೂ ಗಂಗಾ ನದಿಯ ಹೆಸರು ಕೊಟ್ಟು ಅದನ್ನು ಉತ್ತರ ಪ್ರದೇಶದ ಚುನಾವಣೆಯ ಪ್ರಚಾರದಲ್ಲಿ ಬಳಸಲು ಹೊರಟಿದೆ. ಇದು ಭಾರತೀಯ ಜನತಾ ಪಕ್ಷದ ಕ್ಷುಲ್ಲಕ ರಾಜಕೀಯದ ದುರ್ಬುದ್ಧಿಗೆ ಸಾಕ್ಷಿ ಎಂದು ಅವರು ಟೀಕಿಸಿದ್ದಾರೆ.
ರಾಜ್ಯದಲ್ಲಿರುವ ಬಿಜೆಪಿ ಸರಕಾರ ಕೇಂದ್ರ ಸರಕಾರದ ಜೊತೆ ನಿರಂತರ ಸಂಪರ್ಕವಿಟ್ಟುಕೊಂಡು ಯುಕ್ರೇನ್ನಲ್ಲಿ ಸಂಕಷ್ಟದಲ್ಲಿರುವ ಭಾರತೀಯರನ್ನು ವಾಪಸು ಕರೆತರುವ ಪ್ರಯತ್ನವನ್ನು ಮಾಡಬೇಕು. ಇದೇ ವೇಳೆ ಕೇಂದ್ರ ಸರಕಾರ ಯುಕ್ರೇನ್ ಮತ್ತು ರಶ್ಯ ದೇಶಗಳ ಜೊತೆ ಮಾತುಕತೆ ನಡೆಸಿ ಭಾರತೀಯರ ಸುರಕ್ಷತೆಯನ್ನು ಖಾತರಿ ಪಡಿಸಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಕೇಂದ್ರದ ನರೇಂದ್ರ ಮೋದಿ ಸರಕಾರ ಏಕರೂಪದ ಪರೀಕ್ಷೆಯ ನೆಪದಲ್ಲಿ ನೀಟ್ ಪರೀಕ್ಷೆಯನ್ನು ಗೊಂದಲಮಯವಾಗಿ ಮಾಡಿರುವ ಕಾರಣದಿಂದ ಆಗಿರುವ ಅನಾಹುತಗಳ ಬಗ್ಗೆ ಚರ್ಚಿಸಲು ಇದು ಸರಿಯಾದ ಕಾಲ ಅಲ್ಲ ಎಂದು ಸಿದ್ದರಾಮಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೇಜವಾಬ್ದಾರಿ ಮಂತ್ರಿ ಜೋಷಿ
ವಿದೇಶದಲ್ಲಿ ವೈದ್ಯಕೀಯ ಪದವಿ ಪಡೆದು ಬರುವವರು ಇಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಲು ಅಗತ್ಯ ಇರುವ ಪರೀಕ್ಷೆಯಲ್ಲಿ ಪಾಸಾಗುವುದಿಲ್ಲ ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರ ಹೇಳಿಕೆ ಅತ್ಯಂತ ಬೇಜವಾಬ್ದಾರಿತನದ್ದಾಗಿದೆ. ಸಚಿವರು ಇಂತಹ ಉಡಾಫೆ ಹೇಳಿಕೆಗಳಿಂದ ಕಾಲಹರಣ ಮಾಡುವ ಬದಲಿಗೆ ಯುಕ್ರೇನ್ನಲ್ಲಿ ಸಂಕಷ್ಟದಲ್ಲಿರುವ ವಿದ್ಯಾರ್ಥಿಗಳ ಸುರಕ್ಷತೆ ಕಡೆ ಗಮನ ಹರಿಸಲಿ.
-ಸಿದ್ದರಾಮಯ್ಯ, ವಿಪಕ್ಷ ನಾಯಕ







