ಕುಂದಾಪುರ: ನಿಯಂತ್ರಣ ತಪ್ಪಿದ ಕಾರು ಡಿವೈಡರ್ ಗೆ ಢಿಕ್ಕಿ; ಯುವಕ ಸ್ಥಳದಲ್ಲೇ ಸಾವು.

ಕುಂದಾಪುರ, ಮಾ.3: ಉತ್ತರ ಕನ್ನಡ ಜಿಲ್ಲೆಯಿಂದ ಬೆಂಗಳೂರಿಗೆ ಸಾಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ದಾರುಣ ಘಟನೆ ಕಿರಿಮಂಜೇಶ್ವರಲ್ಲಿ ಬುಧವಾರ ಸಂಜೆ ನಡೆದಿದೆ.
ಮೃತ ಯುವಕನನ್ನು ಬೆಂಗಳೂರು ಮೂಲದ ಅಕ್ಷಯ್ (23) ಎಂದು ಗುರುತಿಸಲಾಗಿದೆ.
ಬೆಂಗಳೂರು ಮೂಲದ ನಾಲ್ವರು ಯುವಕರು ಪ್ರವಾಸಕ್ಕೆಂದು ಕಾರಿನಲ್ಲಿ ಉತ್ತರ ಕನ್ನಡ ಜಿಲ್ಲೆಯ ಯಾಣಕ್ಕೆ ಆಗಮಿಸಿ ವಾಪಸ್ ಬೆಂಗಳೂರಿಗೆ ತೆರಳುತ್ತಿದ್ದಾಗ ಈ ಅವಘಡ ನಡೆದಿದೆ.
ವೇಗವಾಗಿ ಚಲಿಸುತ್ತಿದ್ದ ಕಾರು ಕಿರಿಮಂಜೇಶ್ವರ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯದ ಡಿವೈಡರ್ ಗೆ ಢಿಕ್ಕಿ ಹೊಡೆದು ರಸ್ತೆಯ ಇನ್ನೊಂದು ಮಗ್ಗುಲಿಗೆ ಹೋಗಿ ಉರುಳಿಬಿದ್ದಿದೆ. ಈ ವೇಳೆ ಕಾರಿನಲ್ಲಿದ್ದ ಅಕ್ಷಯ್ ಸ್ಥಳದಲ್ಲೇ ಮೃತಪಟ್ಟಿದ್ದು, ಇತರ ಮೂವರು ಪ್ರಯಾಣಿಕರಾದ ತೇಜಸ್, ಪವನ್ ಮತ್ತು ಹರ್ಷ ಗಂಭೀರ ಗಾಯಗಳೊಂದಿಗೆ ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
Next Story