ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಪಾರದರ್ಶಕ ಪರೀಕ್ಷೆ: ಡಾ.ಅಶ್ವತ್ಥ ನಾರಾಯಣ

ಬೆಂಗಳೂರು, ಮಾ. 12: ‘ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಇರುವ 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆ ನೇಮಕಾತಿಯ ಭಾಗವಾಗಿ ಶನಿವಾರದಿಂದ ಆರಂಭವಾಗಿರುವ ಸ್ಪರ್ಧಾತ್ಮಕ ಪರೀಕ್ಷೆ ಅತ್ಯಂತ ಪಾರದರ್ಶಕವಾಗಿ ಮತ್ತು ಯಾವುದೇ ಅಕ್ರಮಗಳಿಲ್ಲದೆ ಕಟ್ಟುನಿಟ್ಟಾಗಿ ನಡೆಯುತ್ತಿದೆ' ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.
ಶನಿವಾರ ಮಲ್ಲೇಶ್ವರಂ 13ನೆ ಅಡ್ಡರಸ್ತೆಯಲ್ಲಿರುವ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜು ಪರೀಕ್ಷಾ ಕೇಂದಕ್ಕೆ ಮೊದಲ ದಿನವಾದ ಶನಿವಾರ ಭೇಟಿ ನೀಡಿ, ಪರೀಕ್ಷಾ ಪ್ರಕ್ರಿಯೆಯನ್ನು ವೀಕ್ಷಿಸಿದ ನಂತರ ಅವರು ಮಾತನಾಡಿದ ಅವರು, ‘ಬೋಧನಾ ವೃತ್ತಿಗೆ ಇವತ್ತು ಆಕರ್ಷಕ ವೇತನ ಇದ್ದು, ಇಲ್ಲಿಗೆ ಅರ್ಹರನ್ನು ತರಬೇಕಾಗಿದೆ' ಎಂದರು.
‘ಅದರಲ್ಲೂ ಉನ್ನತ ಶಿಕ್ಷಣದಲ್ಲಿ ಗುಣಮಟ್ಟದ ಬೋಧಕರ ಅಗತ್ಯ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ದಕ್ಷವಾಗಿ ಕಾರ್ಯನಿರ್ವಹಿಸುತ್ತಿದ್ದು, ದೇಶದ ಉಳಿದ ರಾಜ್ಯಗಳಿಗೆ ಮಾದರಿಯಾಗಿದೆ. ರಾಜ್ಯದ ಎಲ್ಲ ಕೇಂದ್ರಗಳಲ್ಲೂ ಪರೀಕ್ಷೆ ಸುಗಮವಾಗಿ ನಡೆದಿದೆ. ಯಾವುದೇ ಗೊಂದಲಗಳಿಗೆ ಆಸ್ಪದ ಇಲ್ಲದಂತೆ ಕ್ರಮವಹಿಸಲಾಗಿದೆ' ಎಂದು ಅವರು ತಿಳಿಸಿದರು.





