ಕೈಗಾರಿಕೆ ಸ್ಥಾಪನೆ ಮಾಡುವವರಿಗೆ 24 ಗಂಟೆಯೊಳಗೆ ಸೌಲಭ್ಯ: ಸಚಿವ ಮುರುಗೇಶ್ ನಿರಾಣಿ

ಬೆಂಗಳೂರು,ಮಾ. 18: ‘ರಾಜ್ಯದ ಯಾವುದೇ ಭಾಗಗಳಲ್ಲಿ ಕೈಗಾರಿಕೆ ಸ್ಥಾಪನೆ ಮಾಡಲು ಉದ್ಯಮಿಗಳು ಮುಂದೆ ಬಂದರೆ, ಅವರಿಗೆ 24 ಗಂಟೆಯೊಳಗೆ ಜಮೀನು ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲು ಸರಕಾರ ಬದ್ಧವಾಗಿದೆ' ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.
ಶುಕ್ರವಾರ ವಿಧಾನಸಭೆ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯ ಯಶವಂತರಾಯಗೌಡ ಪಾಟೀಲ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ರಾಜ್ಯದಲ್ಲಿ ಕೈಗಾರಿಕೆಗಳನ್ನ ಸಮಗ್ರವಾಗಿ ಅಭಿವೃದ್ದಿಪಡಿಸಲು ಸರಕಾರ ಬದ್ಧ. ರಾಜ್ಯದಲ್ಲಿ ಯಾವುದೇ ಭಾಗದಲ್ಲಿ ಬಂಡವಾಳ ಹೂಡಿಕೆ ಮತ್ತು ಕೈಗಾರಿಕೆ ಸ್ಥಾಪನೆ ಮಾಡಲು ಮುಂದೆ ಬಂದರೆ ಎಲ್ಲ ರೀತಿಯ ಸೌಕರ್ಯವನ್ನು ಕಲ್ಪಿಸಿಕೊಡಲು ಸಿದ್ಧ' ಎಂದು ಹೇಳಿದರು.
‘ಸಮಗ್ರ ಕೈಗಾರಿಕೆ ಅಭಿವೃದ್ದಿಗಾಗಿ ಪ್ರತಿ ಜಿಲ್ಲೆಯಲ್ಲೂ ಸಾವಿರ ಎಕರೆ ಹಾಗೂ ತಾಲೂಕು ಮಟ್ಟದಲ್ಲಿ 100 ಎಕರೆ ಜಮೀನುಗಳನ್ನು ಕೈಗಾರಿಕೆಗಳಿಗಾಗಿಯೇ ಮೀಸಲಿಡಲು ತೀರ್ಮಾನಿಸಿದ್ದೇವೆ ಎಂದು ಅವರು ಸ್ಪಷ್ಟಪಡಿಸಿದರು. ‘ರಾಮನಗರ ಜಿಲ್ಲೆ ಮಾಗಡಿ ನಗರದಲ್ಲಿ ಕೆಐಎಡಿಬಿ ವತಿಯಿಂದ ಕೈಗಾರಿಕಾ ವಲಯ ಸ್ಥಾಪನೆ ಮಾಡಲು ಒಂದು ವಾರದೊಳಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಸಚಿವ ನಿರಾಣಿ, ಜೆಡಿಎಸ್ ಸದಸ್ಯ ಮಂಜುನಾಥ್ ಪ್ರಶ್ನೆಗೆ ಉತ್ತರಿಸಿದರು.
ಸ್ಥಳೀಯರಿಗೆ ಶೇ.70ರಷ್ಟು ಉದ್ಯೋಗ: ‘ಡಾ.ಸರೋಜಿನಿ ಮಹಿಷಿ ವರದಿಯಂತೆ ರಾಜ್ಯದಲ್ಲಿ ಪ್ರಾರಂಭವಾಗುವ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಶೇ.70ರಷ್ಟು ಉದ್ಯೋಗ ಕೊಡಬೇಕೆಂಬ ನಿಯಮದಲ್ಲಿ ನಾವು ಯಾವುದೇ ರಾಜಿಯಾಗುವ ಪ್ರಶ್ನೆಯೇ ಇಲ್ಲ' ಎಂದು ಸಚಿವ ಮುರುಗೇಶ್ ನಿರಾಣಿ, ಬಿಜೆಪಿ ಸದಸ್ಯ ರೂಪಾಲಿ ನಾಯ್ಕ್ ಪ್ರಶ್ನೆಗೆ ಉತ್ತರಿಸಿದರು.
ರೂಪಾಲಿ ನಾಯ್ಕ್ ಪರವಾಗಿ ಬಿಜೆಪಿಯ ಸಿದ್ದು ಸವದಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ರಾಜ್ಯದ ಯಾವುದೇ ಭಾಗದಲ್ಲೂ ಹೊಸದಾಗಿ ಕೈಗಾರಿಕೆ ಸ್ಥಾಪನೆ ಮಾಡಿದರೆ ಕನ್ನಡಿಗರಿಗೆ ಶೇ.70ರಷ್ಟು ಉದ್ಯೋಗಗಳನ್ನು ನೀಡಲೇಬೇಕು. ಇದು ನಮ್ಮ ಸರಕಾರದ ಬದ್ಧತೆ. ವಿಶೇಷವಾಗಿ ಯುವಕರಿಗೆ ಹೆಚ್ಚಿನ ಪ್ರೋತ್ಸಾಹ, ಆದ್ಯತೆ ನೀಡಲಿದ್ದೇವೆ' ಎಂದು ಸ್ಪಷ್ಟಪಡಿಸಿದರು.







