ಲಿಂಗಾನುಪಾತ ಸಮಾನತೆಗೆ ಆದ್ಯತೆ ಅಗತ್ಯ: ನ್ಯಾ.ಕೃಷ್ಣ ಭಟ್

ಉಡುಪಿ : ಗಂಡು ಮತ್ತು ಹೆಣ್ಣು ಮಕ್ಕಳ ಲಿಂಗಾನುಪಾತ ಪ್ರಮಾಣ ಸರಿ ಸಮಾನವಾಗಿರಬೇಕು. ಆದುದರಿಂದ ಹೆಣ್ಣು ಮಕ್ಕಳ ಅನುಪಾತ ಕಡಿಮೆ ಯಾಗಬಾರದು. ಈ ನಿಟ್ಟಿನಲ್ಲಿ ಲಿಂಗಾನುಪಾತ ಸಮಾನತೆಗೆ ಆದ್ಯತೆ ನೀಡಬೇಕು ಎಂದು ಹೈಕೋರ್ಟ್ ನ್ಯಾಯಮೂರ್ತಿ ಪಿ.ಕೃಷ್ಣ ಭಟ್ ಹೇಳಿದ್ದಾರೆ.
ಉಡುಪಿ ವಕೀಲರ ಸಂಘದ ವತಿಯಿಂದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸಹಯೋಗದಲ್ಲಿ ಶನಿವಾರ ಕೋರ್ಟ್ ಆವರಣದಲ್ಲಿ ಆಯೋಜಿಸ ಲಾದ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಹೆಣ್ಣು ಮಗು ಹುಟ್ಟಿತು ಎಂಬ ಕಾರಣಕ್ಕೆ ಮಹಿಳೆ ಮೇಲೆ ನಡೆಯುವ ಕೌಟುಂಬಿಕ ದೌರ್ಜನ್ಯಗಳು ಸಂಪೂರ್ಣ ನಿಲ್ಲಬೇಕು. ನಮ್ಮ ನಾಗರಿಕ ವ್ಯವಸ್ಥೆ ಯಲ್ಲಿ ಮದುವೆಗೆ ಸಾಕಷ್ಟು ಪ್ರಾಮುಖ್ಯತೆ ಇದೆ. ಪತಿ-ಪತ್ನಿ ಸಂಬಂಧಕ್ಕೆ ಮಹತ್ವದ ಅರ್ಥಗಳಿವೆ. ಸಾಮಾಜಿಕ ವ್ಯವಸ್ಥೆ ಇದನ್ನು ಸರಿಯಾಗಿ ಅರ್ಥೈಸಿಕೊಳ್ಳಬೇಕು. ಲಿಂಗ ಅಸಮಾನತೆ ಸಂಪೂರ್ಣ ನಿಲ್ಲಬೇಕು ಎಂದರು.
ಜಿಲ್ಲಾ ಸತ್ರ ಮತ್ತು ಪ್ರಧಾನ ನ್ಯಾಯಧೀಶ ಸುಬ್ರಹ್ಮಣ್ಯ ಜೆ.ಎನ್ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ರಾಜ್ಯ ಸಾರಿಗೆ ಇಲಾಖೆ ಜಂಟಿ ಆಯುಕ್ತೆ ಎಂ.ಪಿ ಓಂಕಾರೇಶ್ವರಿ, ಪೋಕ್ಸೊ ನ್ಯಾಯಾಲಯದ ನ್ಯಾಯಧೀಶೆ ಎರ್ಮಾಳ್ ಕಲ್ಪನಾ, ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ದಿನೇಶ್ ಹೆಗ್ಡೆ ಉಪಸ್ಥಿತರಿದ್ದರು.
ಜಿಲ್ಲಾ ಕಾನೂನು ಸೇವೆ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ನ್ಯಾಯಧೀಶೆ ಶರ್ಮಿಳಾ ಎಸ್. ಪ್ರಾಸ್ತಾವಿಕವಾಗಿ ಮಾತನಾಡಿದರು. ವಕೀಲರ ಸಂಘದ ಅಧ್ಯಕ್ಷ ಬಿ. ನಾಗರಾಜ್ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ರೆನೋಲ್ಡ್ ಪ್ರವೀಣ್ ಕುಮಾರ್ ವಂದಿಸಿದರು.