ಬಜೆಟ್ ಘೋಷಣೆಗಳ ಶೀಘ್ರ ಅನುಷ್ಠಾನಕ್ಕೆ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚನೆ: ಬೊಮ್ಮಾಯಿ

ಹುಬ್ಬಳ್ಳಿ, ಮಾ.26: ಬಜೆಟ್ ಘೋಷಣೆಗಳ ಅನುಷ್ಠಾನಕ್ಕೆ ಕಾರ್ಯಾದೇಶಗಳನ್ನು ಹೊರಡಿಸಿ ಘೋಷಿತ ಯೋಜನೆಗಳ ಪರಿಷಾಮಕಾರಿ ಅನುಷ್ಠಾನಕ್ಕಾಗಿ ರಾಜ್ಯದಲ್ಲಿ ಪ್ರಥಮ ಬಾರಿಗೆ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.
ಎಲ್ಲಾ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಆರ್ಥಿಕ ಇಲಾಖೆಯ ಸಹಯೋಗದಲ್ಲಿ ಬಜೆಟ್ ನ ಪ್ರಮುಖ ಘೋಷಿತ ಯೋಜನೆಗಳಿಗೆ ಕಾರ್ಯಾದೇಶವನ್ನು ನೀಡುವುದು ಹಾಗೂ ಅನುಷ್ಠಾನದ ಸಂಪೂರ್ಣ ಮೇಲ್ವಿಚಾರಣೆಯನ್ನು ಈ ಸಮಿತಿ ಮಾಡಲಿದೆ. ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ದೊರಕಿಸುವುದು ಹಾಗೂ ಒಂದೇ ಬಾರಿಗೆ ಎಲ್ಲ ಯೋಜನೆಗಳಿಗೆ ಅನುಮೋದನೆ ನೀಡುವ ಉದ್ದೇಶದಿಂದ ಈ ಸಮಿತಿ ರಚಿಸಲಾಗಿದೆ ಎಂದರು.
ಬಜೆಟ್ ನಲ್ಲಿ ಘೋಷಿಸಿರುವ ಹೊಸ ಯೋಜನೆಗಳನ್ನು ತೀವ್ರಗತಿಯಲ್ಲಿ ಅನುಷ್ಠಾನಗೊಳಿಸಲು ಈಗಾಗಲೇ ಸಂಬಂಧಿಸಿದ ಇಲಾಖೆಗಳಿಗೆ ಸೂಚನೆಯನ್ನೂ ನೀಡಲಾಗಿದೆ ಎಂದು ತಿಳಿಸಿದರು.
ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಪೂರ್ವಭಾವಿ ಸಿದ್ಧತೆ
ಸರಕಾರ ಕೈಗಾರಿಕೋದ್ಯಮಕ್ಕೆ ಮಹತ್ವ ನೀಡಿದೆ. ನವೆಂಬರ್ ನಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಯುವ ಹಿನ್ನೆಲೆಯಲ್ಲಿ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ನೇತೃತ್ವದಲ್ಲಿ ಎಲ್ಲಾ ಪೂರ್ವಭಾವಿ ಸಿದ್ಧತೆಗಳು ನಡೆಯುತ್ತಿವೆ. ದೊಡ್ಡ ಪ್ರಮಾಣದ ಬಂಡವಾಳ ಹೂಡಿಕೆಗೆ ಆಕರ್ಷಿಸುವ ಗುರಿಯನ್ನು ಹೊಂದಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಕಳೆದ ಮೂರು ತ್ರೈ ಮಾಸಿಕಗಳಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ದೇಶದಲ್ಲಿಯೇ ಮೊದಲ ಸ್ಥಾನದಲ್ಲಿದೆ. ಇದು ವಿದೇಶಿ ಹೂಡಿಕೆದಾರರಿಗೆ ನಮ್ಮ ರಾಜ್ಯದ ಮೇಲಿರುವ ವಿಶ್ವಾಸವನ್ನು ತೋರಿಸುತ್ತದೆ ಎಂದು ಮುಖ್ಯಮಂತ್ರಿ ಹರ್ಷ ವ್ಯಕ್ತಪಡಿಸಿದರು.







