ಈಜಿಪುರ ಮೇಲ್ಸೇತುವೆ ಯೋಜನೆ ಡಿ.31ರೊಳಗೆ ಪೂರ್ಣಗೊಳಿಸುವ ಕುರಿತಂತೆ ಪ್ರಮಾಣ ಪತ್ರ ಸಲ್ಲಿಸಿ: ಹೈಕೋರ್ಟ್

ಬೆಂಗಳೂರು, ಮಾ.29: ನಗರದ ಈಜಿಪುರ ಹಾಗೂ ಕೋರಮಂಗಲ ನಡುವಿನ ಮೇಲ್ಸೇತುವೆ ನಿರ್ಮಾಣ ಯೋಜನೆಯನ್ನು 2022ರ ಡಿ.31ರೊಳಗೆ ಪೂರ್ಣಗೊಳಿಸುವ ಕುರಿತಂತೆ ಪ್ರಮಾಣ ಪತ್ರವನ್ನು ಸಲ್ಲಿಸಲು ಸಿಂಪ್ಲೆಕ್ಸ್ ಇನ್ಫ್ರಾಸ್ಟ್ರಕ್ಚರ್ಸ್ ಲಿಮಿಟೆಡ್ಗೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಈ ಕುರಿತು ಕೋರಮಂಗಲ ನಿವಾಸಿ ಆದಿನಾರಾಯಣ ಶೆಟ್ಟಿ ಎಂಬುವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮಂಗಳವಾರ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಸಿಂಪ್ಲೆಕ್ಸ್ ಇನ್ಫ್ರಾಸ್ಟ್ರಕ್ಚರ್ಸ್ ಲಿಮಿಟೆಡ್ ಪರ ವಾದಿಸಿದ ವಕೀಲರು, ನಗರದ ಈಜಿಪುರ ಮೇಲ್ಸೇತುವೆನಿರ್ಮಾಣ ಯೋಜನೆಯನ್ನು ಸಿಂಪ್ಲೆಕ್ಸ್ ಇನ್ಫ್ರಾಸ್ಟ್ರಕ್ಚರ್ಸ್ ಲಿಮಿಟೆಡ್ನವರು ಪೂರ್ಣಗೊಳಿಸಲು ಸಿದ್ಧರಿದ್ದಾರೆ ಎಂದು ಪೀಠಕ್ಕೆ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಯೋಜನೆ ಪೂರ್ಣಗೊಳಿಸುವ ಕುರಿತಂತೆ ಪ್ರಮಾಣ ಪತ್ರವನ್ನು ಸಲ್ಲಿಸಲು ಸೂಚಿಸಿ ವಿಚಾರಣೆಯನ್ನು ಮುಂದೂಡಿತು.
ಅರ್ಜಿದಾರರ ಮನವಿ ಏನು: ಟ್ರಾಫಿಕ್ ಸಮಸ್ಯೆ ತಪ್ಪಿಸಲು ಬಿಬಿಎಂಪಿ ನಗರದ ಈಜಿಪುರ ಜಂಕ್ಷನ್ ನಿಂದ ಕೋರಮಂಗಲದ ಕೇಂದ್ರೀಯ ಸದನದವರೆಗಿನ 2.5 ಕಿ.ಮೀ ಮೇಲ್ಸೇತುವೆ ನಿರ್ಮಿಸಲು ಯೋಜನೆ ರೂಪಿಸಿದೆ.
ಕೇಂದ್ರ ಸರಕಾರ, ರಾಜ್ಯ ಸರಕಾರ ಹಾಗೂ ಬಿಬಿಎಂಪಿ ಸಹಭಾಗಿತ್ವದಲ್ಲಿ ಯೋಜನೆ ಜಾರಿ ಮಾಡಲು 157.66 ಕೋಟಿ ವೆಚ್ಚದ ಮೇಲ್ಸೇತುವೆ ಕಾಮಗಾರಿಗೆ ಬಿಬಿಎಂಪಿ 2014ರಲ್ಲಿ ಟೆಂಟರ್ ಕರೆದಿತ್ತು. ಬಳಿಕ ಈ ಟೆಂಡರ್ ಮೊತ್ತವನ್ನು 203.20 ಕೋಟಿ ರೂ.ಗೆ ಹೆಚ್ಚಿಸಿ ಸಿಂಪ್ಲೆಕ್ಸ್ ಇನ್ಫ್ರಾಸ್ಟ್ರಕ್ಚರ್ಸ್ ಲಿಮಿಟೆಡ್ಗೆ ಗುತ್ತಿಗೆ ನೀಡಿತ್ತು. 2017ರ ಮೇ 4ರ ಬಿಬಿಎಂಪಿ ಹಾಗೂ ಸಿಂಪ್ಲೆಕ್ಸ್ ಇನ್ಫ್ರಾಸ್ಟ್ರಕ್ಚರ್ಸ್ ಲಿಮಿಟೆಡ್ ನಡುವಿನ ಗುತ್ತಿಗೆ ಒಪ್ಪಂದದ ಪ್ರಕಾರ 2019ರ ನವೆಂಬರ್ 4ಕ್ಕೆ ಮೇಲ್ಸೇತುವೆ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳಬೇಕಿತ್ತು.
ಆದರೆ, ಗುತ್ತಿಗೆ ಪಡೆದ ಸಂಸ್ಥೆ ಕಾಮಗಾರಿ ಪೂರ್ಣಗೊಳಿಸದೆ, 2019ರಲ್ಲಿ ಮತ್ತೆ ಕಾಲಾವಕಾಶ ಕೇಳಿತ್ತು. ಅದನ್ನು ಪರಿಗಣಿಸಿ ಪಾಲಿಕೆ 2020ರ ಡಿಸೆಂಬರ್ 31ರವರೆಗೆ ಕಾಲಾವಕಾಶ ನೀಡಿತ್ತು. ಹೆಚ್ಚುವರಿ ಕಾಲಾವಕಾಶ ನೀಡಿದರೂ ಕಾಮಗಾರಿ ಪೂರ್ಣಗೊಳಿಸದ ಸಿಂಪ್ಲೆಕ್ಸ್ ಇನ್ಫ್ರಾಸ್ಟ್ರಕ್ಚರ್ಸ್ ಲಿಮಿಟೆಡ್ ಮೇಲ್ಸೇತುವೆ ನಿರ್ಮಾಣಕ್ಕೆ ಕೇವಲ ಪಿಲ್ಲರ್ ಗಳನ್ನಷ್ಟೇ ನಿರ್ಮಿಸಿದ್ದು, ಪ್ರಸ್ತುತ ಕಾಮಗಾರಿ ಸ್ಥಗಿತಗೊಂಡಿದೆ, ಇದರಿಂದಾಗಿ ವಾಹನಗಳ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಕಾಮಗಾರಿ ಪರಿಣಾಮ ಇಲ್ಲಿನ ವಾತಾವರಣವೂ ಕಲುಷಿತಗೊಂಡಿದೆ.
ಹೀಗಾಗಿ, ಕಾಮಗಾರಿಯನ್ನು ನಡೆಸಲು ಬೇರೊಂದು ಟೆಂಡರ್ ಕರೆದು ತ್ವರಿತವಾಗಿ ಮೇಲ್ಸೇತುವೆ ನಿರ್ಮಾಣವನ್ನು ಪೂರ್ಣಗೊಳಿಸಲು ಸರಕಾರ ಹಾಗೂ ಪಾಲಿಕೆಗೆ ನಿರ್ದೇಶಿಸಬೇಕು. ಈಗಿನ ಟೆಂಡರ್ನ ವಿವರಗಳನ್ನು ನ್ಯಾಯಾಲಯ ಪರಿಶೀಲಿಸಬೇಕು. ಕಾಮಗಾರಿ ತಡವಾಗಿರುವುದರಿಂದ ನಿರ್ಮಾಣ ವೆಚ್ಚವೂ ಹೆಚ್ಚಾಗಲಿದ್ದು, ಸಾರ್ವಜನಿಕರ ತೆರಿಗೆ ಪೋಲಾಗಲಿದೆ. ಹೀಗಾಗಿ, ನಿರ್ಮಾಣ ವೆಚ್ಚ ಹೆಚ್ಚಾಗಲು ಕಾರಣವಾಗಿರುವ ಸಂಸ್ಥೆಯಿಂದ ನಷ್ಟವನ್ನು ಅಂದಾಜು ಮಾಡಿ ವಸೂಲಿ ಮಾಡಲು ತಜ್ಞರ ಸಮಿತಿ ರಚಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.







