ಬ್ರಹ್ಮಾವರ; ಒಂಟಿ ಮಹಿಳೆಯಿದ್ದ ಮನೆಗೆ ನುಗ್ಗಿ ಚಿನ್ನಾಭರಣ ಕಳವು: 24 ಗಂಟೆಯೊಳಗೆ ಆರೋಪಿ ಸೆರೆ
![ಬ್ರಹ್ಮಾವರ; ಒಂಟಿ ಮಹಿಳೆಯಿದ್ದ ಮನೆಗೆ ನುಗ್ಗಿ ಚಿನ್ನಾಭರಣ ಕಳವು: 24 ಗಂಟೆಯೊಳಗೆ ಆರೋಪಿ ಸೆರೆ ಬ್ರಹ್ಮಾವರ; ಒಂಟಿ ಮಹಿಳೆಯಿದ್ದ ಮನೆಗೆ ನುಗ್ಗಿ ಚಿನ್ನಾಭರಣ ಕಳವು: 24 ಗಂಟೆಯೊಳಗೆ ಆರೋಪಿ ಸೆರೆ](https://www.varthabharati.in/sites/default/files/images/articles/2022/04/3/330410-1649001192.jpg)
ಬ್ರಹ್ಮಾವರ: ಒಂಟಿ ಮಹಿಳೆಯಿದ್ದ ಮನೆಗೆ ನುಗ್ಗಿ ಹಾಡುಹಗಲೇ ಚಿನ್ನಾಭರಣ ಕಳವು ಮಾಡಿದ ಆರೋಪಿಯನ್ನು 24 ಗಂಟೆಯೊಳಗೆ ಬ್ರಹ್ಮಾವರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಂಗಳೂರು ಯಶವಂತಪುರ ಮೋಹನ್ ಕುಮಾರ್ ನಗರ ನಿವಾಸಿ ಸುರೇಶ್ ಯಾನೆ ಸೂರ್ಯ (31) ಬಂಧಿತ ಆರೋಪಿ, ಈತ ಮೂಲತಃ ಬ್ರಹ್ಮಾವರ ತಾಲೂಕಿನ ಪೆಜಮಂಗೂರು ಗ್ರಾಮದ ಪ್ರಗತಿ ನಗರ ನಿವಾಸಿ ಎಂದು ಪೊಲೀಸರು ತಿಳಿಸಿದ್ದಾರೆ.
ಬ್ರಹ್ಮಾವರ ಚೇರ್ಕಾಡಿ ಗ್ರಾಮದ ಕನ್ನಾರು ಎಂಬಲ್ಲಿ ಶನಿವಾರ ಮಧ್ಯಾಹ್ನ ವಾಸು ಪೂಜಾರಿ ಎಂಬವರ ಹೆಂಡತಿ ಪ್ರೇಮ ಮನೆಯಲ್ಲಿ ಒಂಟಿಯಾಗಿದ್ದು, ಅವರು ಮನೆಯ ಹೊರಗಡೆ ಪಾತ್ರೆ ತೊಳೆಯುತ್ತಿದ್ದ ವೇಳೆ ಮನೆ ಹಿಂಬದಿಯ ಬಾಗಿಲಿನ ಚಿಲಕ ಮುರಿದು ಒಳಪ್ರವೇಶಿಸಿದ ಸುರೇಶ್ ಮನೆಯನ್ನು ಜಾಲಾಡಿ ಸುಮಾರು 10 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಅನ್ನು ಕಳವು ಮಾಡಿ ಪರಾರಿಯಾಗಲು ಯತ್ನಿಸಿದ ವೇಳೆ ನೋಡಿದ ಪ್ರೇಮ ತನ್ನ ಪತಿ ಮಾಹಿತಿ ನೀಡಿದ್ದು, ಅವರು ನೀಡಿದ ದೂರಿನಂತೆ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ಬೆನ್ನು ಬಿದ್ದ ಪೊಲೀಸರು ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕ ಅನಂತ ಪದ್ಮನಾಭರವರ ಮಾರ್ಗದರ್ಶನದಂತೆ ಎಸ್ಸೈಗಳಾದ ಗುರುನಾಥ ಬಿ ಹಾದಿಮನಿ ಹಾಗೂ ಮುಕ್ತಾಬಾಯಿ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿದ್ದು ಕೂಡಲೇ ಕಾರ್ಯ ಪ್ರವೃತ್ತರಾದ ಪೊಲೀಸರು ಮಾಹಿತಿ ಸಂಗ್ರಹಿಸಿ, ಆರೋಪಿ ಕಳವು ಮಾಡಿದ ದಿವಸ ಧರಿಸಿದ ಬಟ್ಟೆಯ ಜಾಡನ್ನು ಹಿಡಿದು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯಿಂದ 50 ಸಾವಿರ ರೂ ಬೆಲೆಬಾಳುವ ಚಿನ್ನದ ನೆಕ್ಲೇಸ್ ನ್ನು ವಶಪಡಿಸಿಕೊಂಡಿದ್ದಾರೆ . ಈ ಮೂಲಕ ಪ್ರಕರಣ ದಾಖಲಾಗಿ 24 ಗಂಟೆಯೊಳಗೆ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಈತ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎರಡು ಕಳವು ಪ್ರಕರಣದ ಆರೋಪಿಯಾಗಿದ್ದು, ಪ್ರಸ್ತುತ ಆರೋಪಿ ಬೆಂಗಳೂರಿನ ಬಿಬಿಎಂಪಿಯಲ್ಲಿ ಕಸ ಗುಡಿಸುವ ಕೆಲಸ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ವಿಷ್ಣುವರ್ಧನ ಐಪಿಎಸ್, ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಸಿದ್ದಲಿಂಗಪ್ಪ ಕೆ.ಎಸ್.ಪಿ.ಎಸ್ ರವರ ಮಾರ್ಗದರ್ಶನದಂತೆ ಸುಧಾಕರ ನಾಯ್ಕ, ಪೊಲೀಸ್ ಉಪಾಧೀಕ್ಷಕರು, ಉಡುಪಿ ಉಪವಿಭಾಗ ಹಾಗೂ ಅನಂತ ಪದ್ಮನಾಭ, ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕರ ರವರ ನಿರ್ದೇಶನದಂತೆ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಬ್ರಹ್ಮಾವರ ಪೊಲೀಸ್ ಉಪನಿರೀಕ್ಷಕರಾದ ಗುರುನಾಥ ಬಿ ಹಾದಿಮನಿ ಹಾಗೂ ತನಿಖೆ ಪಿ.ಎಸ್.ಐ ಮುಕ್ತಾಬಾಯಿ ಹಾಗೂ ಪ್ರೊಬೆಷನರಿ ಪಿ.ಎಸ್.ಐ. ಸುಬ್ರಹ್ಮಣ್ಯ ದೇವಾಡಿಗ ಹಾಗೂ ಸಿಬ್ಬಂದಿ ವೆಂಕಟರಮಣ ದೇವಾಡಿಗ, ಪ್ರವೀಣ್ ಶೆಟ್ಟಿಗಾರ್, ರಾಘವೇಂದ್ರ ಕಾರ್ಕಡ, ದಿಲೀಪ್ ಕುಮಾರ್, ಅಜ್ಮಲ್ ಮತ್ತು ಚಾಲಕ ಅಣ್ಣಪ್ಪ ಇವರ ಕಾರ್ಯವನ್ನು ಶ್ಲಾಘಿಸಿರುತ್ತಾರೆ.