ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ತರಿಗೆ 10 ಕೋಟಿ ರೂ. ಮೀಸಲು: ಹೈಕೋರ್ಟ್ ಗೆ ಮಾಹಿತಿ

ಬೆಂಗಳೂರು, ಎ.5: ಅತ್ಯಾಚಾರ, ಆ್ಯಸಿಡ್ ದಾಳಿಯಂತಹ ಅಪರಾಧ ಕೃತ್ಯಗಳ ಸಂತ್ರಸ್ತರಿಗೆ ‘ಸಂತ್ರಸ್ತರ ಪರಿಹಾರ ಯೋಜನೆ’ ಅಡಿ ಪರಿಹಾರ ವಿತರಿಸಲು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ(ಕೆಎಸ್ಎಲ್ಎಸ್ಎ) 2022-2023ನೆ ಸಾಲಿನ ಬಜೆಟ್ನಲ್ಲಿ 10 ಕೋಟಿ ರೂ.ಗಳನ್ನು ಮೀಸಲಿರಿಸಲಾಗಿದೆ ಎಂದು ಹೈಕೋರ್ಟ್ಗೆ ಸರಕಾರ ಮಾಹಿತಿ ನೀಡಿದೆ.
ಅತ್ಯಾಚಾರ ಸಂತ್ರಸ್ತರಿಗೆ ಪರಿಹಾರ ಕಲ್ಪಿಸಲು ಸೂಕ್ತ ಮಾರ್ಗಸೂಚಿ ರಚಿಸಲು ಸರಕಾರಕ್ಕೆ ನಿರ್ದೇಶಿಸುವಂತೆ ಕೋರಿ ಪೀಪಲ್ಸ್ ಮೂವ್ಮೆಂಟ್ ಅಗೆನೆಸ್ಟ್ ಸೆಕ್ಪ್ಯುಯಲ್ ಅಸಾಲ್ಟ್(ಪಿಎಂಎಎಸ್ಎ) ಎಂಬ ಸಂಘಟನೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಸರಕಾರದ ಪರ ವಕೀಲರು ವಸ್ತುಸ್ಥಿತಿ ವರದಿ ಸಲ್ಲಿಸಿ, 2022-2023ನೆ ಸಾಲಿನಲ್ಲಿ ಸಂತ್ರಸ್ತರ ಪರಿಹಾರ ಯೋಜನೆ ಜಾರಿಗೆ ಕೆಎಸ್ಎಲ್ಎಸ್ಎಗೆ ನೀಡಲು ಬಜೆಟ್ನಲ್ಲಿ 10 ಕೋಟಿ ರೂ.ಮೀಸಲಿಡಲಾಗಿದೆ. ಪ್ರಾಧಿಕಾರದಿಂದ ಪ್ರಸ್ತಾವನೆ ಬಂದರೆ ಹಣ ಬಿಡುಗಡೆ ಮಾಡಲಾಗುವುದು ಎಂದು ನ್ಯಾಯಪೀಠಕ್ಕೆ ತಿಳಿಸಿದರು.
ಅದನ್ನು ಪರಿಗಣಿಸಿದ ನ್ಯಾಯಪೀಠ, ಕೆಎಸ್ಎಲ್ಎಸ್ಎ ಹಣ ಬಿಡುಗಡೆಗಾಗಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು. ಪ್ರಸ್ತಾವನೆ ಸಲ್ಲಿಕೆಯಾದರೆ, ಅದನ್ನು ಪರಿಗಣಿಸಿ ಕೂಡಲೇ ಹಣ ಬಿಡುಗಡೆ ಮಾಡಬೇಕು ಎಂದು ಸರಕಾರಕ್ಕೆ ನಿರ್ದೇಶಿಸಿ ವಿಚಾರಣೆ ಮುಂದೂಡಿತು.







