ಧರ್ಮ, ಶಿಕ್ಷಣ ಇವೆರಡು ಅರಿತು ವಿದ್ಯಾರ್ಥಿಗಳು ಮುನ್ನಡೆಯಲಿ: ಬಸವಜಯ ಮೃತ್ಯುಂಜಯ ಶ್ರೀ

ಬಸವಜಯ ಮೃತ್ಯುಂಜಯ ಶ್ರೀ
ವಿಜಯಪುರ, ಎ.7: 'ಧರ್ಮ ಭಾವನಾತ್ಮಕ ವಿಕಾಸಕ್ಕಾಗಿ ಹಾಗೂ ಶಿಕ್ಷಣ ಬದುಕು ಕಟ್ಟಿಕೊಳ್ಳಲು ಇದೆ ಎಂಬುದನ್ನು ಅರಿತು ವಿದ್ಯಾರ್ಥಿಗಳು ಮುನ್ನಡೆಯಬೇಕೆಂದು' ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದ್ದಾರೆ.
ಗುರುವಾರ ವಿಜಯಪುರ ನಗರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಹಿಜಾಬ್, ಹಲಾಲ್, ಅಝಾನ್ ವಿಷಯಕ್ಕೆ ಸಂಬಂಧಿಸಿದಂತೆ ಮುಸ್ಲಿಮ್ ಸಮಾಜದವರು ಕಾನೂನು ಗೌರವಿಸಿ, ಆ ಪ್ರಕಾರ ನಡೆದುಕೊಳ್ಳಬೇಕು. ಜತೆಗೆ ಧರ್ಮ, ಶಿಕ್ಷಣ ಈ ಎರಡು ಕುರಿತಂತೆ ವಿದ್ಯಾರ್ಥಿಗಳು ಅರಿತು ಮುನ್ನಡೆಯಬೇಕೆಂದು ತಿಳಿಸಿದರು.
ದಿನಂಪ್ರತಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ. ಈಗಾಗಲೇ ಎರಡು ವರ್ಷಗಳಿಂದ ಕೊರೋನದಿಂದ ಜನರು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಶ್ರೀಸಾಮಾನ್ಯರಿಗೆ ಹೊರೆಯಾಗದಂತೆ ಸರಕಾರ ಬೆಲೆ ಏರಿಕೆಗೆ ಕಡಿವಾಣ ಹಾಕಬೇಕು ಎಂದು ಶ್ರೀಗಳು ಆಗ್ರಹಿಸಿದರು.
ಎ.10ರಂದು ಹಕ್ಕೊತ್ತಾಯ ಸಭೆ: ಪಂಚಮಸಾಲಿ ಸಮಾಜದ ಮೀಸಲಾತಿಗೆ ಆಗ್ರಹಿಸಿ ನೀಡಿರುವ ಕೊನೆಯ ಗಡುವನ್ನು ನೆನಪಿಸಲು ಹಾಗೂ ಮುಖ್ಯಮಂತ್ರಿ ಮೇಲೆ ಒತ್ತಡ ತರುವ ಉದ್ದೇಶದಿಂದ ಎ.10ರಂದು ವಿಜಯಪುರ ಜಿಲ್ಲೆ ಚಡಚಣದಲ್ಲಿ ಪಂಚಮಸಾಲಿಗಳ ಹಕ್ಕೊತ್ತಾಯ ಸಭೆ ನಡೆಯಲಿದೆ ಎಂದು ಹೇಳಿದರು. ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ತಪ್ಪಿಸುವ ಹುನ್ನಾರ ನಡೆಸಿರುವವರಿಗೆ ಸಮಾಜವೇ ತಕ್ಕ ಪಾಠ ಕಲಿಸಲಿದೆ ಎಂದು ಎಚ್ಚರಿಕೆ ನೀಡಿದರು.
ಪಂಚಮಸಾಲಿಗಳಿಗೆ ಮೀಸಲಾತಿ ನೀಡುವ ವಿಷಯದಲ್ಲಿ ರಾಜ್ಯದಲ್ಲಿ ಬೇರಾವ ಸಮಾಜಗಳಿಂದಲೂ ವಿರೋಧವಿಲ್ಲ ಎಂದು ಹೇಳಿದರು.
ಸಿಎಂಗೆ ಎ.14 ಕೊನೆಯ ಗಡುವು
ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿ ನೀಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಎ.14 ಕೊನೆಯ ಗಡುವು ನೀಡಲಾಗಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದ್ದಾರೆ.







