ಅಂಬೇಡ್ಕರ್ ವಿಚಾರಧಾರೆಗಳನ್ನು ಮಾತಿಗೆ ಸೀಮಿತಗೊಳಿಸದೇ ಪರಿಪಾಲಿಸಿ: ಸಚಿವ ಅಂಗಾರ

ಉಡುಪಿ : ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಕೇವಲ ಮಾತನಾಡುವುದಕ್ಕೆ ಸೀಮಿಗೊಳಿಸದೇ, ಅವುಗಳನ್ನು ಪರಿಪಾಲಿಸಬೇಕು. ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳಬೇಕು ಎಂದು ರಾಜ್ಯ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಹೇಳಿದ್ದಾರೆ.
ಅಂಬೇಡ್ಕರ್ ಜಯಂತಿ ಪ್ರಯುಕ್ತ ಗುರುವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ನಂತರ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣ ದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜಕಲ್ಯಾಣ ಇಲಾಖೆ, ನಗರಸಭೆ ಹಾಗೂ ಉಡುಪಿ ಜಿಲ್ಲಾ ಪ.ಜಾತಿ ಮತ್ತು ವರ್ಗಗಳ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ ೧೩೧ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿಅವರು ಮಾತನಾಡುತಿದ್ದರು.
ಡಾ.ಬಿ.ಆರ್.ಅಂಬೇಡ್ಕರ್ ಬಾಲ್ಯದಿಂದ ತಾನು ಅನುಭಸಿದ ಬಡತನ, ಅಸಮಾನತೆಯ ನೋವುಗಳನ್ನು ಅರಿತು, ಸಂವಿಧಾನ ರಚನೆಯ ಸಮಯದಲ್ಲಿ, ದೇಶದಲ್ಲಿ ಎಲ್ಲಾ ಕಾಲಕ್ಕೂ ಪ್ರತಿಯೊಬ್ಬರಿಗೂ ಅನುಕೂಲವಾಗುವಂತಹ ಸೌಲಭ್ಯಗಳು ದೊರೆಯುವ ರೀತಿಯಲ್ಲಿ ಸಂವಿಧಾನದ ರಚನೆ ಮಾಡಿದ್ದಾರೆ ಎಂದರು.
ವಿಶ್ವದ ಅನೇಕ ರಾಷ್ಟ್ರಗಳು ಸಂವಿಧಾನ ರಚನೆ ಮಾಡಿದ್ದರೂ ಸಹ, ಇಡೀ ಜಗತ್ತಿನಲ್ಲೇ ಅತ್ಯಂತ ಶ್ರೇಷ್ಠ ಸಂವಿಧಾನ ಭಾರತದ್ದದಾಗಿದೆ. ಸಂವಿಧಾನ ರಚನೆ ಸಂದರ್ಭದಲ್ಲಿ ಅಂಬೇಡ್ಕರ್, ಯಾವುದೇ ವ್ಯಕ್ತಿ ಅಥವಾ ವೈಯಕ್ತಿಕ ಹಿತಾಸಕ್ತಿ ಇಲ್ಲದೇ ದೇಶದ ಪ್ರತಿ ಪ್ರಜೆಯ ಹಿತವನ್ನು ಗಮನದಲ್ಲಿರಿಸಿ ಸಂವಿಧಾನದ ರಚನೆ ಮಾಡಿದ್ದಾರೆ. ಸಂವಿಧಾನ ನೀಡಿರುವ ಸೌಲಭ್ಯಗಳನ್ನು ಮಾತ್ರ ಅನುಭವಿಸದೇ ಅದರಲ್ಲಿರುವ ನಿಯಮಗಳ ಪರಿಪಾಲನೆ ಮಾಡುವುದು ಅಗತ್ಯ ಎಂದರು.
ಅಂಬೇಡ್ಕರ್ಗೆ ಸಂಬಂಧಿಸಿದ ಪಂಚಕ್ಷೇತ್ರಗಳನ್ನು ಕೇಂದ್ರ ಸರ್ಕಾರ ಈಗಾಗಲೇ ಅಭಿವೃದ್ದಿ ಪಡಿಸಿದ್ದು, ಅದೇ ಮಾದರಿಯಲ್ಲಿ ರಾಜ್ಯದಲ್ಲೂ ಸಹ ಅಂಬೇಡ್ಕರ್ ಅವರು ರಾಜ್ಯಕ್ಕೆ ಭೇಟಿ ನೀಡಿದ ವಿವಿಧ ಸ್ಥಳಗಳನ್ನು ಅಭಿವೃದ್ಧಿ ಮಾಡುತ್ತಿದ್ದು, ಅಂಬೇಡ್ಕರ್ ನೆನಪುಗಳನ್ನು ಮುಂದಿನ ಪೀಳಿಗೆಯೂ ಸ್ಮರಿಸುವಂತೆ ಮಾಡುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಅವರ ಜೀವನ ಮತ್ತು ಸಾಧನೆ ಕುರಿತು ಉಪನ್ಯಾಸ ನೀಡಿದ ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಗಣನಾಥ ಎಕ್ಕಾರು ಮಾತನಾಡಿ, ಭಾರತದ ಸಂಸ್ಕೃತಿಯನ್ನು ಅಂತರ್ಗತ ಮಾಡಿಕೊಂಡಿದ್ದ ಅಂಬೇಡ್ಕರ್, ಅದನ್ನು ಸಂವಿಧಾನ ರಚನೆ ಸಂದರ್ಭದಲ್ಲಿ ಬಳಸಿಕೊಂಡಿದ್ದರು. ಅವರ ರಚನೆಯ ಸಂವಿಧಾನ ಇದುವರೆಗೂ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಸದೃಢಗೊಳಿಸಿದೆ. ಅಪಾರ ಜ್ಞಾನ, ಪಾಂಡಿತ್ಯ ಗಳಿಸಿದ್ದರೂ ಅಸ್ಪಶ್ಯತೆಯ ನೋವನ್ನು ತೀವ್ರವಾಗಿ ಅನುಭಸಿದ್ದರು. ಇಡೀ ದೇಶದ ಸಮಸ್ಯೆ ಅರಿತಿದ್ದ ಅಂಬೇಡ್ಕರ್, ದಲಿತ ಮತ್ತು ಬಡ ಜನರ ಶ್ರೇಯೋಭಿವೃಧ್ದಿಗಾಗಿ ಜಾರಿಗೆ ತಂದ ಮೀಸಲಾತಿಯಿಂದ ಅಸಮಾನತೆಯಿಂದ ಬಳಲುತ್ತಿದ್ದ ಲಕ್ಷಾಂತರ ಮಂದಿ ಇಂದು ಮುಖ್ಯವಾಹಿನಿಗೆ ಬರಲು ಸಾಧ್ಯವಾಗಿದೆ ಎಂದರು.
ಉಡುಪಿ ಶಾಸಕ ರಘುಪತಿ ಭಟ್ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ವೈ, ಎಸ್ಪಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ವೀಣಾ, ನಗರ ಸಭೆ ಆಯುಕ್ತ ಡಾ.ಉದಯ ಶೆಟ್ಟಿ ಹಾಗೂ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ದ್ವಿತೀಯ ಪಿಯುಸಿಯಲ್ಲಿ ಶೇ.೧೦೦ ಅಂಕ ಗಳಿಸಿದ ಕೀರ್ತಿ ಹಾಗೂ ಎಸೆಸೆಲ್ಸಿಯಲ್ಲಿ ಶೇ.೯೮.೭೨ ಅಂಕ ಪಡೆದ ಅನುಪಮಾ ಅವರನ್ನು ಸನ್ಮಾನಿಸಲಾಯಿತು. ಪ.ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆ, ಅಂತರ್ಜಾತಿ ವಿವಾಹವಾದವರಿಗೆ ಪ್ರೋತ್ಸಾಹ ಧನ, ಆಟೋರಿಕ್ಷಾ ಮಂಜೂರಾತಿ ಮತ್ತು ಅಂಬೇಡ್ಕರ್ ಜಯಂತಿ ಪ್ರಯುಕ್ತ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆ ಮತ್ತು ಪೋಸ್ಟರ್ ರಚನಾ ಸ್ಪರ್ಧೆಯ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಅನಿತಾ ಮಡ್ಲೂರ ಸ್ವಾಗತಿಸಿ, ತಾಲೂಕು ಸಮಾಜ ಕಲ್ಯಾಣಾಧಿಕಾರಿ ರಮೇಶ್ ವಂದಿಸಿದರು. ಪ್ರಶಾಂತ್ ಶೆಟ್ಟಿ ಹಾವಂಜೆ ಕಾರ್ಯಕ್ರಮ ನಿರೂಪಿಸಿದರು.