ಶಿವಾನಂದ ತಗಡೂರ್ರ ʼಕೋವಿಡ್ ಕತೆಗಳು‘ ಕೃತಿ ಬಿಡುಗಡೆ
ಮಂಗಳೂರು : ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಬರೆದ "ಕೋವಿಡ್ ಕತೆಗಳು" ಕೃತಿಯನ್ನು ಶನಿವಾರ ನಗರದ ಪ್ರೆಸ್ಕ್ಲಬ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಡುಗಡೆಗೊಳಿಸಲಾಯಿತು.
ಈ ಸಂದರ್ಭ ಮಾತನಾಡಿದ ತಗಡೂರ್ ಕೋವಿಡ್ನಂತಹ ಕ್ಲಿಷ್ಟಕರ ಸನ್ನಿವೇಶದಲ್ಲೂ ಪತ್ರಕರ್ತರು ತಮ್ಮ ವೃತ್ತಿಯನ್ನು ಸ್ಥಗಿತಗೊಳಿಸದೆ ವೃತ್ತಿಪರತೆಯನ್ನು ಮೆರೆದಿದ್ದಾರೆ. ಕೋವಿಡ್ ಸಂದರ್ಭ ಆಸ್ಪತ್ರೆಗಳ ದಂಧೆ, ಜನತೆಯ ನೋವು, ಕಾರ್ಪಣ್ಯಕ್ಕೆ ಸ್ಪಂದನ ಸಹಿತ ಅನೇಕ ವಿಚಾರಗಳನ್ನು ಲೇಖನದಲ್ಲಿ ವಿವರಿಸಲಾಗಿದೆ ಎಂದರು.
ಜಗತ್ತಿನಲ್ಲಿ ನಡೆದ ಮಹಾಯುದ್ಧದಂತೆ ಕೋವಿಡ್ ಕೂಡ ಮಹಾಮಾರಿಯಾಗಿ ಕಾಡಿದೆ. ಆಗ ಸರಕಾರಗಳು ಕೂಡ ಮನೆಯಲ್ಲೇ ಸುರಕ್ಷಿತವಾಗಿರುವಂತೆ ಸೂಚನೆಯನ್ನು ನೀಡಿತ್ತು. ಆದರೂ ಪತ್ರಕರ್ತರು ಆರೋಗ್ಯದ ಅಪಾಯ ವನ್ನೂ ಲೆಕ್ಕಿಸದೆ ಕ್ಷೇತ್ರಕ್ಕೆ ತೆರಳಿ ಕೆಲಸ ಮಾಡಿದ್ದಾರೆ. ಆತಂಕದ ಸವಾಲುಗಳನ್ನು ಸಮರ್ಥವಾಗಿ ಎದುರಿಸಿ ದ್ದಾರೆ. ಕೋವಿಡ್ನಿಂದ ಮೃತಪಟ್ಟ ೫೫ ಪತ್ರಕರ್ತರಿಗೆ ತಲಾ 5 ಲಕ್ಷ ರೂ.ನಂತೆ ಸರಕಾರದಿಂದ ಪರಿಹಾರ ಮೊತ್ತ ತೆಗೆಸಿಕೊಡುವಲ್ಲಿ ಸಂಘ ಯಶಸ್ವಿಯಾಗಿದೆ. ಅಂದಿನ ಸಿಎಂ ಯಡಿಯೂರಪ್ಪ ಅವರ ಕಾಳಜಿ ಅಭಿನಂದನೀಯ ಎಂದರು.
ಕೃತಿಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ಪತ್ರಕರ್ತರ ನೋವುಗಳಿಗೆ ಶಿವಾನಂದ ತಗಡೂರು ಸೂಕ್ತವಾಗಿ ಸ್ಪಂದಿಸಿದ್ದಾರೆ. ಸುದ್ದಿಯ ಜತೆಗೆ ಮಾನವೀಯತೆಯ ಇನ್ನೊಂದು ಮುಖವನ್ನು ಪುಸ್ತಕದಲ್ಲಿ ಅನಾವರಣಗೊಳಿಸಲಾಗಿದೆ ಎಂದರು.
ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮಾಜಿ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು, ನಾಟಕ ಅಕಾಡಮಿಯ ಮಾಜಿ ಅಧ್ಯಕ್ಷ ಶ್ರೀನಿವಾಸ ಕಪ್ಪಣ್ಣ ಮಾತನಾಡಿದರು.
ದ.ಕ.ಜಿಲ್ಲಾ ಕಾರ್ಯನಿರ್ತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ರಾಜ್ಯ ಕಾರ್ಯಕಾರಿಣಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ ಉಪಸ್ಥಿತರಿದ್ದರು.







