ಉಡುಪಿ: ಮಲೇರಿಯಾ ನಿಯಂತ್ರಣ ಜನಜಾಗೃತಿ ಜಾಥಾಕ್ಕೆ ಚಾಲನೆ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಇಲಾಖೆ ಮತ್ತು ಪೌರಾಡಳಿತದ ಸಹಯೋಗದಲ್ಲಿ ವಿಶ್ವ ಮಲೇರಿಯಾ ದಿನದ ಪ್ರಯುಕ್ತ ಮದರ್ ಆಫ್ ಸಾರೋಸ್ ಚರ್ಚ್ ಆವರಣದಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಛೇರಿ ಆವರಣದವರೆಗೆ ನಡೆದ ಜಾಗೃತಿ ಜಾಥಾಕ್ಕೆ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್.ನಾಯಕ್ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್, ಮಧರ್ ಆಫ್ ಸಾರೋಸ್ ಚರ್ಚ್ನ ಫಾದರ್, ಜಿಲ್ಲಾ ರೋಗವಾಹಕ ನಿಯಂತ್ರಣಾಧಿಕಾರಿ, ಆರೋಗ್ಯ ಇಲಾಖೆಯ ಎಂಟಮೋಲೋಜಿಸ್ಟ, ನ್ಯೂಸಿಟಿ, ಧನ್ವಂತರಿ, ಸಿಎಸ್ಐ ಲೊಂಬಾರ್ಡ ನರ್ಸಿಂಗ್ ಸಂಸ್ಥೆಯ ವಿದ್ಯಾರ್ಥಿಗಳು ಮತ್ತು ಪ್ರಾಧ್ಯಾಪಕರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ನಗರಸಭಾ ಅಧ್ಯಕ್ಷರು ಮಾತನಾಡಿ, ಮಳೆಗಾಲದಲ್ಲಿ ಸೊಳ್ಳೆಗಳು ಸಂತಾನೋತ್ಪತ್ತಿಗಳನ್ನು ಮಳೆ ನೀರಿನಲ್ಲಿ ಕೈಗೊಳ್ಳುವುದರಿಂದ ಅವುಗಳ ಸಂಖ್ಯೆ ಹೆಚ್ಚಾಗಿ, ಸಾಂಕ್ರಾಮಿಕ ರೋಗಗಳಾದ ಮಲೇರಿಯ , ಡೆಂಗಿ, ಚಿಕನ್ ಗುನ್ಯಾ ಹಾಗೂ ಮೆದುಳು ಜ್ವರದ ರೋಗಗಳು ಹೆಚ್ಚಾಗುವ ಸಾಧ್ಯತೆಗಳಿವೆ. ಇವುಗಳ ನಿಯಂತ್ರಣಕ್ಕೆ ಸ್ಥಳೀಯ ಸಂಸ್ಥೆಗಳು ಸೇರಿದಂತೆ ಸಾರ್ವಜನಿಕರು ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸಿ, ಉತ್ತಮ ಆರೋಗ್ಯವನ್ನು ಹೊಂದಬೇಕು ಎಂದರು.
ಜಿಲ್ಲಾಧಿಕಾರಿ ಮಾತನಾಡಿ, ಸಾಂಕ್ರಾಮಿಕ ರೋಗಗಳ ತಡೆಗೆ ವಿಶೇಷ ಒತ್ತುಗಳನ್ನು ನೀಡಬೇಕು. ಸಾಂಕ್ರಾಮಿಕ ರೋಗಗಳ ಪತ್ತೆ, ಸಂಪೂರ್ಣ ಚಿಕಿತ್ಸೆ ಹಾಗೂ ನಿಯಂತ್ರಣಾ ಕ್ರಮಗಳ ಬಗ್ಗೆ ಜನರಲ್ಲಿ ಆರೋಗ್ಯ ಶಿಕ್ಷಣವನ್ನು ನೀಡಿ, ರೋಗಗಳು ಹರಡದಂತೆ ನೋಡಿಕೊಳ್ಳಬೇಕು ಎಂದರು.
ಸೊಳ್ಳೆಗಳ ಸಂತಾನೋತ್ಪತ್ತಿ ತಾಣಗಳನ್ನು ಪತ್ತೆ ಹಚ್ಚಿ ಅವುಗಳ ನಿಯಂತ್ರಣಕ್ಕೆ ಮುಂದಾಗಬೇಕು. ಈ ಕಾರ್ಯವನ್ನು ಪ್ರತಿ 15 ದಿನಗಳಿಗೊಮ್ಮೆ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿಗಳ ಮೂಲಕ ಆಗಬೇಕು ಎಂದರು.
ಜಿಲ್ಲಾ ಪಂಚಾಯತ್ ಸಿಇಓ ಮಾತನಾಡಿ, ಪ್ರತಿಯೊಬ್ಬರೂ ತಮ್ಮ ಮನೆಯ ಸುತ್ತಮುತ್ತಲಿನ ಪರಿಸರವನ್ನು ಉತ್ತಮವಾಗಿ ಇಟ್ಟುಕೊಂಡಾಗ ಮಾತ್ರ ಉತ್ತಮ ಆರೋಗ್ಯವನ್ನು ಹೊಂದಲು ಸಾಧ್ಯ ಎಂದರು.








