ಬುದ್ಧಿಮಾಂದ್ಯ ಮಕ್ಕಳು ಹುಟ್ಟಿದ್ದಕ್ಕೆ ಪತ್ನಿಗೆ ಕಿರುಕುಳ: ಪತಿ ಸೇರಿ ಮೂವರಿಗೆ ಜೈಲು ಶಿಕ್ಷೆ ವಿಧಿಸಿದ ಹೈಕೋರ್ಟ್

ಬೆಂಗಳೂರು, ಎ.27: ಬುದ್ಧಿಮಾಂದ್ಯ ಹೆಣ್ಣು ಮಕ್ಕಳು ಹುಟ್ಟಿದವೆಂಬ ಕಾರಣಕ್ಕೆ ಪತ್ನಿಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಿದ್ದಲ್ಲದೆ, ಬೆಂಕಿ ಹಚ್ಚಿ ಕೊಲೆ ಮಾಡಿದ್ದ ಪ್ರಕರಣದಲ್ಲಿ ಪತಿ, ಆತನ ತಾಯಿ ಮತ್ತು ಸೋದರಿಗೆ ಹೈಕೋರ್ಟ್ 1 ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ಆದೇಶ ಹೊರಡಿಸಿದೆ.
ಪ್ರಕರಣದಲ್ಲಿ ಆರೋಪಿಗಳನ್ನು ಖುಲಾಸೆ ಮಾಡಿದ ಮಂಡ್ಯ ಜಿಲ್ಲಾ ನ್ಯಾಯಾಲಯದ ಆದೇಶ ರದ್ದುಗೊಳಿಸಿ ಶಿಕ್ಷೆ ವಿಧಿಸುವಂತೆ ಕೋರಿ ಮಳವಳ್ಳಿ ತಾಲೂಕಿನ ಕಿರುಗಾವಲು ಠಾಣೆ ಪೊಲೀಸರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಬಿ.ವೀರಪ್ಪ ಹಾಗೂ ನ್ಯಾ.ಎಸ್.ರಾಚಯ್ಯ ಅವರಿದ್ದ ವಿಭಾಗೀಯ ಪೀಠ ಅರ್ಜಿಯನ್ನು ಭಾಗಶಃ ಪುರಸ್ಕರಿಸಿದ್ದು, ಆರೋಪಿಗಳಿಗೆ ಶಿಕ್ಷೆ ವಿಧಿಸಿದೆ.
ಪೀಠ ತನ್ನ ತೀರ್ಪಿನಲ್ಲಿ, ಮೃತ ಹೇಮಲತಾ ಇಬ್ಬರು ಬುದ್ಧಿಮಾಂದ್ಯ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದರೆಂಬ ಕಾರಣಕ್ಕೆ ಪತಿ, ಅತ್ತೆ ಹಾಗೂ ನಾದಿನಿ ನಿರಂತರವಾಗಿ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡಿದರು ಎಂಬುದು ಪ್ರಾಸಿಕ್ಯೂಷನ್ ಸಾಕ್ಷ್ಯಗಳಿಂದ ರುಜುವಾತಾಗಿದೆ.
ಪತ್ನಿಯನ್ನು ರಕ್ಷಿಸಬೇಕಾದ ಜವಾಬ್ದಾರಿ ಹೊಂದಿರುವ ಪತಿ ಮಾದೇಶ, ಹಲ್ಲೆ ನಡೆಸಿದ್ದಾನೆ ಎಂದು ಅಭಿಪ್ರಾಯಪಟ್ಟಿದೆ. ಅಲ್ಲದೇ, ಕಿರುಕುಳ ನೀಡಿದ ಅಪರಾಧಕ್ಕೆ ಆರೋಪಿಗಳಿಗೆ ತಲಾ ಒಂದು ವರ್ಷ ಜೈಲು ಹಾಗೂ 20 ಸಾವಿರ ದಂಡ ವಿಧಿಸಿದೆ. ಅಲ್ಲದೇ, ದಂಡದ ಮೊತ್ತವನ್ನು ಮಕ್ಕಳ ಹೆಸರಿನಲ್ಲಿ ರಾಷ್ಟ್ರೀಕೃತ ಬ್ಯಾಂಕ್ನಲ್ಲಿ ಠೇವಣಿ ಇರಿಸುವಂತೆ ಆದೇಶಿಸಿದೆ.
ಪ್ರಕರಣದ ಹಿನ್ನೆಲೆ: 2012ರ ನವೆಂಬರ್ 28ರ ಸಂಜೆ ಪತಿಯಿಂದ ಮನೆ ಖರ್ಚಿಗೆ ಹಣ ಕೇಳಿದ್ದಕ್ಕೆ ಗಲಾಟೆ ಮಾಡಿದ್ದ ಪತಿ ಮಾದೇಶ ಪತ್ನಿ ಹೇಮಲತಾ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ್ದ.
ಅತ್ತೆ ಹಾಗೂ ನಾದಿನಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹೇಮಲತಾ ಮೇಲೆ ಸೀಮೆ ಎಣ್ಣೆ ಎರಚಿ ಬೆಂಕಿ ಹಚ್ಚಿದ್ದರು. ನಂತರ ಪತಿ ಬೆಂಕಿ ಆರಿಸಿ ಆಸ್ಪತ್ರೆಗೆ ಸೇರಿಸುವ ಪ್ರಯತ್ನ ಮಾಡಿದ್ದನಾದರೂ, ಚಿಕಿತ್ಸೆ ಫಲಿಸದೆ ಹೇಮಲತಾ ಮೃತಪಟ್ಟರೆಂದು ಪೊಲೀಸರು ಆರೋಪಿಸಿದ್ದರು. ಹೈಕೋರ್ಟ್ ಸಾವಿಗೆ ಸಾಕ್ಷ್ಯಗಳು ಸ್ಪಷ್ಟವಿಲ್ಲದಿದ್ದರೂ, ಕಿರುಕುಳ ನೀಡಿರುವುದು ಸ್ಪಷ್ಟ ಎಂದು ಅಭಿಪ್ರಾಯಪಟ್ಟು ಆರೋಪಿಗಳಿಗೆ ಶಿಕ್ಷೆ ವಿಧಿಸಿದೆ.







