ಮಕ್ಕಳ ಪ್ರತಿಭೆ ಅನಾವರಣಕ್ಕೆ ಬೇಸಿಗೆ ಶಿಬಿರ ಉತ್ತಮ ವೇದಿಕೆ: ಶರ್ಮಿಳಾ ಎಸ್.

ಉಡುಪಿ : ಬೇಸಿಗೆ ಶಿಬಿರಗಳು ಮಕ್ಕಳ ಪ್ರತಿಭೆಯ ಅನಾವರಣಕ್ಕೆ ಉತ್ತಮ ವೇದಿಕೆಯಾಗಿದ್ದು, ಅನುಭವಿ ತರಬೇತುದಾರರಿಂದ ಮಕ್ಕಳ ಪ್ರತಿಭೆ ವಿಕಸನಗೊಳ್ಳಲಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್. ಹೇಳಿದ್ದಾರೆ.
ಗುರುವಾರ ಬಾಲಭವನ ಸೊಸೈಟಿ ಬೆಂಗಳೂರು, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ನಡೆದ ಮಕ್ಕಳ ಉಚಿತ ಬೇಸಿಗೆ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.
ಬೇಸಿಗೆ ಶಿಬಿರವು ಮಕ್ಕಳ ಕಲಿಕಾ ಬೆಳವಣಿಗೆಗೆ ಸಹಕಾರಿಯಾಗಿದ್ದು, ಇಲ್ಲಿ ಮಕ್ಕಳ ದೈನಂದಿನ ಕಲಿಕೆಯ ಬದಲಾಗಿ ಆಟ, ಮೈಂಡ್ಗೇಮ್, ಕಲೆ, ಸಂಸ್ಕೃತಿ ಹಾಗೂ ಹೊಸ-ಹೊಸ ವಿಷಯಗಳ ಅರಿವಾಗುತ್ತದೆ.ಇದರಿಂದ ಮಕ್ಕಳಲ್ಲಿ ಹೊಸ ಜವಾಬ್ದಾರಿಯ ಜೊತೆಗೆ ಆತ್ಮವಿಶ್ವಾಸ ಮೂಡಲು ಸಹಕಾರಿಯಾಗುತ್ತದೆ ಎಂದು ಶರ್ಮಿಳಾ ಎಸ್. ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ನಗರಸಭಾ ಅಧ್ಯಕ್ಷೆ ಸುಮಿತ್ರಾ ನಾಯಕ್ ಮಾತನಾಡಿ, ಸಣ್ಣ ವಯಸ್ಸಿನಲ್ಲಿಯೇ ಮಕ್ಕಳ ಆಸಕ್ತಿಯ ವಿಷಯಕ್ಕೆ ಹೆಚ್ಚು ಪ್ರಾಮುಖ್ಯತೆ ಕೊಡುವುದು ಅಗತ್ಯ. ಇಂತಹ ಶಿಬಿರಗಳ ಮೂಲಕ ಮಕ್ಕಳಲ್ಲಿರುವ ಆಸಕ್ತಿ ಗುರುತಿಸಲು ಸಾಧ್ಯ. ಕೋವಿಡ್ ಸಮಸ್ಯೆಯಿಂದ ಕಳೆದ ಎರಡು ವರ್ಷಗಳಲ್ಲಿ ಇಂತಹ ಯಾವುದೇ ಚಟುವಟಿಕೆಗಳು ನಡೆದಿರಲಿಲ್ಲ. ಇದರಿಂದಾಗಿ ಮಕ್ಕಳು ಮೊಬೈಲ್ ಪ್ರಭಾವಕ್ಕೆ ಒಳಗಾಗಿದ್ದಾರೆ. ಮೊಬೈಲ್ನ್ನು ಅವಶ್ಯಕತೆಗೆ ತಕ್ಕಷ್ಟು ಮಾತ್ರ ಬಳಕೆ ಮಾಡಬೇಕು. ಪೋಷಕರು ಮಕ್ಕಳ ಕಲಿಕೆಯ ಮೇಲೆ ಯಾವುದೇ ರೀತಿಯ ಒತ್ತಡ ಹೇರದೆ ಅವರ ಆಸಕ್ತಿಯ ವಿಷಯಕ್ಕೆ ಸಹಕರಿಸುವ ಜೊತೆಗೆ ಸರಿಯಾದ ಮಾರ್ಗದರ್ಶಕರಾಗಬೇಕು ಎಂದರು.
ಕಾರ್ಯಕ್ರಮದಲ್ಲಿ ಶಿರಿಬೀಡು ವಾರ್ಡ್ ನಗರಸಭೆ ಸದಸ್ಯ ಟಿ.ಜಿ.ಹೆಗ್ಡೆ ಸೇರಿದಂತೆ ಹಲವು ಗಣ್ಯರು ಭಾಗವಹಿಸಿ ದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ವೀಣಾ ವಿವೇಕಾನಂದ ಸ್ವಾಗತಿಸಿ, ಜಿಲ್ಲಾ ಮಹಿಳಾ ಶಕ್ತಿ ಕೇಂದ್ರದ ಸಂಯೋಜಕಿ ಶಾರದ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.