ಬಾಲ ಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಲು ಕ್ರಿಯಾ ಯೋಜನೆ: ಉಡುಪಿ ಡಿಸಿ ಕೂರ್ಮಾರಾವ್

ಉಡುಪಿ : ಉಡುಪಿ ಜಿಲ್ಲೆಯನ್ನು ಬಾಲ ಕಾರ್ಮಿಕ ಮುಕ್ತ ಮಾದರಿ ಜಿಲ್ಲೆಯನ್ನಾಗಿಸಲು ಸಂಬಂಧಪಟ್ಟ ಎಲ್ಲಾ ಇಲಾಖೆಗಳು ತಮ್ಮ ವ್ಯಾಪ್ತಿಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಕ್ರಿಯಾ ಯೋಜನೆ ರೂಪಿಸಿ, ಕಾರ್ಯ ನಿರ್ವ ಹಿಸಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದ್ದಾರೆ.
ಕುಂದಾಪುರ ಕನ್ಸ್ರ್ನ್ ಫಾರ್ ವರ್ಕಿಂಗ್ ಚಿಲ್ಡ್ರನ್ ಮತ್ತು ವಿವಿಧ ಇಲಾಖೆ ಗಳ ಸಹಯೋಗದಲ್ಲಿ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ಮಕ್ಕಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮಕ್ಕಳೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತಿದ್ದರು.
ಜಿಲ್ಲೆಯಲ್ಲಿ ಬಾಲ ಕಾರ್ಮಿಕ ಪದ್ಧತಿಯ ಸಂಪೂರ್ಣ ನಿರ್ಮೂಲನಕ್ಕಾಗಿ, ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಮೂಲಕ ಅತ್ಯಂತ ವ್ಯವಸ್ಥಿತ ರೀತಿಯಲ್ಲಿ ಬಾಲ ಕಾರ್ಮಿಕರ ಸಮೀಕ್ಷೆಯನ್ನು ನಡೆಸಲಾಗುತ್ತಿದೆ. ಪತ್ತೆಯಾಗುವ ಬಾಲಕಾರ್ಮಿಕ ರಿಗೆ ಪುನರ್ವಸತಿ, ವಿದ್ಯಾಭ್ಯಾಸ, ರಕ್ಷಣೆ ನೀಡುವ ಕುರಿತಂತೆ ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಕ್ರಿಯಾ ಯೋಜನೆಯನ್ನು ರೂಪಿಸಿ ಕೊಂಡು ಕಾರ್ಯನಿರ್ವ ಹಿಸಬೇಕು. ಜಿಲ್ಲೆಯ ಎಲ್ಲಾ ಕೈಗಾರಿಗೋದ್ಯಮಿಗಳಿಗೆ ಸಹ ಈಗಾಗಲೇ ಅರಿವು ಕಾರ್ಯಕ್ರಮಗಳನ್ನು ಆಯೋಜಿಸಿ, ಬಾಲ ಕಾರ್ಮಿಕರ ನೇಮಕ ಮಾಡಿಕೊಳ್ಳ ದಂತೆ ಮತ್ತು ಈ ಬಗ್ಗೆ ಇರುವ ಕಾನೂನಿನ ಪಾಲನೆ ಮಾಡುವ ಕುರಿತು ತಿಳಿಸಲಾಗಿದೆ ಎಂದರು.
ಬಾಲ್ಯ ವಿವಾಹ ಪದ್ಧತಿ ಜಿಲ್ಲೆಯಲ್ಲಿ ನಡೆಯದಂತೆ ಕಟ್ಟುನಿಟ್ಟಿನ ಎಚ್ಚರ ವಹಿಸು ವಂತೆ ಅಧಿಕಾರಿಗಳಿಗೆ ತಿಳಿಸಿದ ಜಿಲ್ಲಾಧಿಕಾರಿ, ಜಿಲ್ಲೆಯಲ್ಲಿ ಬಾಲ ಕಾರ್ಮಿಕರ ಸಂಖ್ಯೆಯನ್ನು ಶೂನ್ಯಕ್ಕೆ ತರುವ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳು ತಳಮಟ್ಟದಿಂದ ಕಾರ್ಯನಿರ್ವಹಿಸುವಂತೆ ಸೂಚನೆ ನೀಡಿದರು.
ಮಕ್ಕಳೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ, ಮಕ್ಕಳ ಹಿನ್ನೆಲೆ, ಪೋಷಕರ ಆರ್ಥಿಕ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧಿಕಾರಿ, ಉತ್ತಮ ರೀತಿಯಲ್ಲಿ ವಿದ್ಯಾಭ್ಯಾಸವನ್ನು ಮುಂದುವರೆಸುವಂತೆ ಮಕ್ಕಳಿಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಎಲ್ಲಾ ಇಲಾಖೆ ಅಧಿಕಾರಿಗಳು ಮಕ್ಕಳೊಂದಿಗೆ ಬೆರೆತು, ತಮ್ಮ ಇಲಾಖೆಯಲ್ಲಿ ಮಕ್ಕಳ ಅಭಿವೃದ್ಧಿಗೆ ಇರುವ ವಿವಿಧ ಯೋಜನೆ ಮತ್ತು ಕಾರ್ಯಕ್ರಮಗಳ ಕುರಿತ ಮಾಹಿತಿಯನ್ನು ಮಕ್ಕಳಿಗೆ ನೀಡಿ, ಅದರ ಪ್ರಯೋಜನಗಳನ್ನು ಒದಗಿಸುವಂತೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಮರಾವ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ವೀಣಾ, ಕಾರ್ಮಿಕ ನಿರೀಕ್ಷಕ ಪ್ರವೀಣ್ ಕುಮಾರ್, ವಿವಿಧ ಅಧಿಕಾರಿಗಳು ಮೊದಲಾದವರು ಉಪಸ್ಥಿತರಿದ್ದರು.