ಆಸ್ಪತ್ರೆಗಳಲ್ಲಿ ಅಗ್ನಿ ಸುರಕ್ಷತಾ ಕ್ರಮ ವಹಿಸಿ: ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು, ಮೇ 8: ಸರಕಾರಿ ಆಸ್ಪತ್ರೆಗಳಲ್ಲಿ, ವೈದ್ಯಕೀಯ ಕಾಲೇಜುಗಳಲ್ಲಿ ಅಗ್ನಿ ಅವಘಢದಂತಹ ಘಟನೆಗಳನ್ನು ತಡೆಯಲು ಮುನ್ನೆಚ್ಚರಿಕಾ ಕ್ರಮ ವಹಿಸುವಂತೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸೂಚನೆ ನೀಡಿದ್ದಾರೆ.
ರವಿವಾರ ಪ್ರಕಟನೆ ಹೊರಡಿಸಿರುವ ಅವರು, ಪ್ರಧಾನಿಗಳ ಸೂಚನೆ ಮೇರೆಗೆ ರಾಜ್ಯದ ಆಸ್ಪತ್ರೆಗಳು ಮತ್ತು ವೈದ್ಯಕೀಯ ಕಾಲೇಜುಗಳಿಗೆ ಫೈರ್ ಸೇಪ್ಟಿ ಆಡಿಟ್ಗೆ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟವರಿಗೆ ಲಿಖಿತ ಸೂಚನೆ ನೀಡಲಾಗಿದೆ. ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ, 166 ಆಸ್ಪತ್ರೆಗಳಿಗೆ ಅಗ್ನಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ತಲಾ 50ಸಾವಿರ ರೂಪಾಯಿಗಳನ್ನು ನೀಡಲಾಗುತ್ತಿದೆ ಎಂದು ಉಲ್ಲೇಖಿಸಿದ್ದಾರೆ.
ಅಗ್ನಿ ಸುರಕ್ಷತಾ ಕ್ರಮಗಳ ಅಳವಡಿಕೆ ನಂತರ ಅಗ್ನಿ ಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಮೂಲಕ ಎಲ್ಲಾ ಆಸ್ಪತ್ರೆಗಳು ನಿರಪೇಕ್ಷಣಾ ಪತ್ರ ಪಡೆಯಬೇಕಿದೆ. ಮೇ 21ರ ತನಕ ಕಾಲಮಿತಿಯನ್ನು ಕೂಡ ನೀಡಲಾಗಿದೆ. 16 ಜಿಲ್ಲಾ ಆಸ್ಪತ್ರೆಗಳು, 150 ತಾಲೂಕು ಆಸ್ಪತ್ರೆಗಳಿಗೆ ಈಗಾಗಲೇ ಈ ಬಗ್ಗೆ ಸೂಚನೆಯನ್ನು ನೀಡಲಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.





