ನೌಕರರು ತಂಡವಾಗಿ ಕೆಲಸ ನಿರ್ವಹಿಸಿದರೆ ಉತ್ತಮ ಸೇವೆ ನೀಡಲು ಸಾಧ್ಯ: ಡಾ. ನವೀನ್ ಭಟ್

ಉಡುಪಿ : ಸರಕಾರದ ಯೋಜನೆ, ಕಾರ್ಯಕ್ರಮಗಳು ಹಾಗೂ ನಿಯಮಗಳನ್ನು ಅನುಷ್ಠಾನಗೊಳಿಸಲು ಎಲ್ಲಾ ಇಲಾಖೆಗಳ ಅಧಿಕಾರಿಗಳು ಒಂದು ತಂಡವಾಗಿ ಕೂಡಿ ಕೆಲಸಮಾಡಿದಾಗ ಸಾರ್ವಜನಿಕರಿಗೆ ಉತ್ತಮ ಸೇವೆ ಯನ್ನು ಒದಗಿಸಲು ಸಾಧ್ಯ ಎಂದು ಜಿಲ್ಲಾ ಪಂಚಾಯತ್ನ ನಿರ್ಗಮನ ಮುಖ್ಯ ಕಾರ್ಯನಿರ್ವಹಕಾಧಿಕಾರಿ ಡಾ. ನವೀನ್ ಭಟ್ ಹೇಳಿದ್ದಾರೆ.
ಬುಧವಾರ ಮಣಿಪಾಲದ ಜಿಲ್ಲಾ ಪಂಚಾಯತ್ನ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ನಡೆದ ತಮ್ಮ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು.
ಸರಕಾರಿ ಕೆಲಸಗಳಲ್ಲಿ ವರ್ಗಾವಣೆ ಎಂಬುವುದು ಸಹಜ. ಕಳೆದ ಒಂದೂವರೆ ವರ್ಷಕ್ಕಿಂತ ಹೆಚ್ಚು ಅವಧಿಯಲ್ಲಿ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಯಶಸ್ಸು ಹೊಂದಲು ಎಲ್ಲಾ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಕೊಡುಗೆ ಅಪಾರ ಎಂದರು.
ಒಬ್ಬ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಉತ್ತಮವಾಗಿ ಕಾರ್ಯ ನಿರ್ವಹಿಸಬೇಕೆಂದರೆ ಅದಕ್ಕೆ ಕಂದಾಯ ಇಲಾಖೆ ಮತ್ತು ಜಿಲ್ಲಾಧಿಕಾರಿಯವರ ಸಹಕಾರ ಬಹಳ ಮುಖ್ಯ. ನನ್ನೆಲ್ಲಾ ಕೆಲಸಗಳಿಗೂ ಬೆನ್ನೆಲುಬಾಗಿ ನಿಂತು ಅಭಿವೃದ್ಧಿಗೆ ಇವರು ಸಹಕರಿಸಿದ್ದಾರೆ ಎಂದರು.
ಸಂಜೀವಿನಿ ಸಂಘ, ಎಸ್.ಎಲ್.ಆರ್.ಎಮ್ ಸಂಘ ಹಾಗೂ ಎಸ್ಬಿಎಮ್ ಸಂಘಗಳು ಪರಿಣಾಮಕಾರಿಯಾಗಿ ಕೆಲಸಗಳನ್ನು ಮಾಡಬೇಕು. ನಿಮ್ಮೆಲ್ಲಾ ಬೇಡಿಕೆಗಳನ್ನು ಕೇಳಿ ಪಡೆದುಕೊಳ್ಳಿ ಎಂದರು.
ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಮಾತನಾಡಿ, ಎಲ್ಲಾ ಕಾರ್ಯಕ್ರಮ ಗಳಲ್ಲಿಯೂ ನಾವು ಜೊತೆ ಜೊತೆಯಾಗಿ ಭಾಗವಹಿಸುತ್ತಿದ್ದೆವು. ಅಕ್ಕಪಕ್ಕದಲ್ಲಿಯೇ ಕುಳಿತುಕೊಳ್ಳುತ್ತಿದ್ದೆವು. ನಮ್ಮಿಬ್ಬರಲ್ಲಿ ಸೋದರ ಭಾಂದವ್ಯವಿತ್ತು. ಯಾವುದೇ ಅಭಿವೃದ್ಧಿ ಕಾರ್ಯಗಳಲ್ಲಿ ಸಮಸ್ಯೆ ಇದ್ದರೂ ಕೂಡ ಅದನ್ನು ಮಾತುಕತೆಯ ಮೂಲಕ ತಕ್ಷಣ ಬಗೆಹರಿಸಿಕೊಳ್ಳುತ್ತಿದ್ದೆವು ಎಂದರು.
ನವೀನ್ ಭಟ್ ಎಲ್ಲಾ ಅಧಿಕಾರಿಗಳನ್ನು ಪ್ರೋತ್ಸಾಹಿಸುತ್ತಾ ಕೆಲಸ ಮಾಡಿಸು ತ್ತಿದ್ದರು. ಕೊರೋನಾ ಸಂದರ್ಭ ದಲ್ಲಿಯೂ ಮುಂಚೂಣಿಯಲ್ಲಿ ನಿಂತು ಕೆಲಸ ಮಾಡಿದ್ದಾರೆ. ಉತ್ತಮ ನಾಯಕತ್ವದ ಗುಣಗಳನ್ನು ಹೊಂದಿ ಜವಾಬ್ದಾರಿ ಯುತವಾಗಿ ಕಾರ್ಯನಿರ್ವಹಿಸಿದ್ದಾರೆ ಎಂದರು.
ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್ ಮಾತನಾಡಿ, ಸಾರ್ವಜನಿಕ ಸ್ಥಳಗಳಲ್ಲಿ ಸೇವೆ ಸಲ್ಲಿಸುವವರು ಬುದ್ಧಿವಂತರೇ ಆಗಿರುತ್ತಾರೆ. ಆದರೆ ಬುದ್ಧಿವಂತಿಕೆಯ ಜೊತೆಗೆ ಹೃದಯವಂತಿಕೆಯಲ್ಲಿ ಕೆಲಸ ಮಾಡುವವರಲ್ಲಿ ನವೀನ್ ಭಟ್ ಕೂಡ ಒಬ್ಬರು. ಎಲ್ಲರನ್ನು ಒಗ್ಗೂಡಿಸಿ ಉತ್ತಮ ರೀತಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುತ್ತಿದ್ದರು ಎಂದರು.
ಕಾರ್ಯಕ್ರಮದಲ್ಲಿ ನೂತನ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ, ಜಿಪಂ ಉಪಕಾರ್ಯದರ್ಶಿ ಕಿರಣ್ ಪಡ್ನೇಕರ್, ಮುಖ್ಯ ಯೋಜನಾ ಧಿಕಾರಿ ಶ್ರೀನಿವಾಸ ರಾವ್, ಜಿಪಂನ ಮುಖ್ಯ ಲೆಕ್ಕಾಧಿಕಾರಿ ಪ್ರಸನ್ನ ಭಟ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
