ಕುಂದಾಪುರ: ಡೆಂಗ್ ಬಾಧಿತರನ್ನು ಭೇಟಿ ಮಾಡಿದ ಮಾಜಿ ಶಾಸಕರು

ಕುಂದಾಪುರ : ಜನಪ್ರತಿನಿಧಿಯಾದವರು ಗುದ್ದಲಿ ಪೂಜೆ ಯಾವತ್ತೂ ಮಾಡಬಹುದು. ಆದರೆ ಮುದೂರು ಗ್ರಾಮ ದಲ್ಲಿ ಡೆಂಗಿ ವ್ಯಾಪಿಸಿದ್ದು, ಸ್ಥಳಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ. ನಿಮ್ಮೊಂದಿಗೆ ನಾವಿದ್ದೇವೆ ಎಂದು ಧೈರ್ಯ ಹೇಳುವುದು ಗುದ್ದಲಿ ಪೂಜೆಗಿಂತ ಆಧ್ಯತೆಯ ಕೆಲಸ. ಜನಪ್ರತಿನಿಧಿಗಳು ಜನರ ಆರೋಗ್ಯ ಸಮಸ್ಯೆಗೆ ಸ್ಪಂದಿಸದೆ ಇರುವುದು ಸರಿಯಲ್ಲ ಎಂದು ಬೈಂದೂರು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಹೇಳಿದ್ದಾರೆ.
ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಗುರುವಾರ ಭೇಟಿ ನೀಡಿ, ಡೆಂಗಿ ಬಾಧಿತರ ಯೋಗಕ್ಷೇಮ ವಿಚಾರಿಸಿದ ಬಳಿಕ ಅವರು ಸುದ್ದಿಗಾರರ ಜೊತೆ ಮಾತನಾಡಿದರು.
ಅಭಿವೃದ್ಧಿ ಕೆಲಸ ಎಷ್ಟು ಮುಖ್ಯವೋ ಅಷ್ಟೇ ಜನರ ಆರೋಗ್ಯ ಕೂಡಾ ಮುಖ್ಯವಾಗಿದೆ. ಡೆಂಗಿ ಪೀಡಿತ ಗ್ರಾಮದ ಸಮೀಪಕ್ಕೆ ಬಂದರೂ ಕೂಡ ಅಲ್ಲಿ ಸ್ಥಳೀಯ ಶಾಸಕರು, ಸಂಸದರು ಬೇರೆ ಕಾರಣಕ್ಕೆ ಸುದ್ದಿಗೋಷ್ಠಿ ನಡೆಸಿ ತಮ್ಮ ಅಭಿವೃದ್ಧಿ ಕಾರ್ಯಕ್ರಮದ ಬಗ್ಗೆ ಮಾತನಾಡಿದ್ದಾರೆ ಹೊರತು ಮುದೂರು ಗ್ರಾಮಸ್ಥರ ಆರೋಗ್ಯ ಸಮಸ್ಯೆಗೆ ಸ್ಪಂದಿಸುವ ಬಗ್ಗೆ ಸ್ವಲ್ಪವೂ ಗಮನಹರಿಸಿಲ್ಲ, ಆ ಬಗ್ಗೆ ಮಾತನಾಡಿಲ್ಲ ಎಂದವರು ದೂರಿದರು.
ಜಿಲ್ಲಾ ಉಸ್ತುವಾರಿ ಸಚಿವ ಅಂಗಾರ ಅವರು ಡೆಂಗಿ ಪೀಡಿತರ ಪ್ರದೇಶಕ್ಕೆ ಹಾಗೂ ಆಸ್ಪತ್ರೆಯಲ್ಲಿ ದಾಖಲಾದ ಡೆಂಗಿ ಭಾದಿತರ ಆರೋಗ್ಯ ವಿಚಾರಿಸ ಬೇಕಿತ್ತು. ಸ್ಥಳೀಯ ಜನಪ್ರತಿನಿಧಿಗಳು ಸಚಿವರಿಗೆ ಸಮಸ್ಯೆಯ ಗಂಭೀರತೆಯನ್ನು ಮನದಟ್ಟು ಮಾಡಲು ವಿಫಲವಾಗಿರುವುದರಿಂದ ಉಸ್ತುವಾರಿ ಸಚಿವರು ಭೇಟಿ ನೀಡಿಲ್ಲ ಎಂದು ಅರಿವಾಗುತ್ತಿದೆ. ಜಿಲ್ಲಾ ಉಸ್ತುವಾರಿ ಸಚಿವರು ತಕ್ಷಣ ಡೆಂಗಿ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿ, ಆಸ್ಪತ್ರೆಯಲ್ಲಿ ದಾಖಲಾದವರು ಯೋಗಕ್ಷೇಮ ವಿಚಾರಿಬೇಕು ಎಂದು ಗೋಪಾಲ ಪೂಜಾರಿ ಒತ್ತಾಯಿಸಿದರು.
ಡೆಂಗಿ ಪೀಡಿತರಿಗೆ ಸರಕಾರಿ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ದೊರೆಯುತ್ತಿದ್ದರೂ ಖಾಸಗಿ ಆಸ್ಪತ್ರೆಯಲ್ಲಿ ಅವರು ಹಣ ಕಟ್ಟಬೇಕಾಗುತ್ತದೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುವಂತೆ ಒತ್ತಾಯಿಸಿದ ಅವರು, ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ನಾಗಭೂಷಣ ಉಡುಪ ಅವರ ಜೊತೆ ದೂರವಾಣಿಯಲ್ಲಿ ಮಾತನಾಡಿ, ಡೆಂಗಿ ಕರೋನಾದಂತೆ ಹರಡಲು ಬಿಡದೆ ನಿಯಂತ್ರಣಕ್ಕೆ ಎಲ್ಲಾ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದರು.
ಕುಂದಾಪುರ ತಾಲೂಕು ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ರಾಬರ್ಟ್ ರೆಬೆಲ್ಲೊ ಅವರು ಈವರೆಗೆ ಆಸ್ಪತ್ರೆಗೆ ದಾಖಲಾದ ಡೆಂಗಿ ಪೀಡಿತರ ಹಾಗೂ ಬಿಡುಗಡೆ ಆದವರ ಮಾಹಿತಿ ನೀಡಿ, ಡೆಂಗಿ ಬಾಧಿತರ ಚಿಕಿತ್ಸೆಗೆ ಮಾಡುಕೊಂಡ ವ್ಯವಸ್ಥೆ ಬಗ್ಗೆ ಮಾಹಿತಿ ನೀಡಿದರು.