ಟೊಮೇಟೊ ಜ್ವರದ ಬಗ್ಗೆ ಎಚ್ಚರಿಕೆ ಅಗತ್ಯ: ಉಡುಪಿ ಡಿಸಿ ಕೂರ್ಮಾರಾವ್

ಉಡುಪಿ : ಕೇರಳ -ತಮಿಳುನಾಡು ಗಡಿಯಲ್ಲಿರುವ ವಾಳಯಾರ್ ನಲ್ಲಿ 5 ಮತ್ತು ಅದಕ್ಕಿಂತ ಕಡಿಮೆ ವಯಸ್ಸಿನ 80ಕ್ಕೂ ಅಧಿಕ ಮಕ್ಕಳಲ್ಲಿ ಈಗಾಗಲೇ ಟೊಮೇಟೊ ಜ್ವರ ಕಂಡುಬಂದಿದ್ದು, ಉಡುಪಿ ಜಿಲ್ಲೆಯಲ್ಲಿ ಈವರೆಗೆ ಈ ರೋಗ ಲಕ್ಷಣ ಯಾರಲ್ಲೂ ಪತ್ತೆಯಾಗಿಲ್ಲ. ಪಕ್ಕದ ಕೇರಳ ರಾಜ್ಯದಲ್ಲಿ ಈ ಜ್ವರವು ಪತ್ತೆಯಾದ ಕಾರಣ ಗಡಿಭಾಗದ ಜಿಲ್ಲೆಗಳು ಈ ಕುರಿತು ಹೆಚ್ಚಿನ ನಿಗಾ ವಹಿಸಬೇಕಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದ್ದಾರೆ.
ಜ್ವರ ಕಾಣಿಸಿಕೊಳ್ಳುವ ಮಕ್ಕಳ ದೇಹದಲ್ಲಿ ಟೊಮೇಟೊ ಆಕಾರದ ಗುಳ್ಳೆಗಳು ಏಳುವುದರಿಂದ ಇದಕ್ಕೆ ಟೊಮೇಟೊ ಜ್ವರ ಎಂದು ಕರೆಯಲಾಗುತ್ತಿದೆ. ಈ ಜ್ವರವು ವೈರಸ್ನಿಂದ ಹರಡುತ್ತಿದ್ದು, ಈ ಜ್ವರಕ್ಕೂ, ಕೊರೋನಾಗೂ ಯಾವುದೇ ಸಂಬಂಧವಿರುವುದಿಲ್ಲ ಎಂದವರು ಸ್ಪಷ್ಟಪಡಿಸಿದ್ದಾರೆ.
ಈ ಜ್ವರವು ಚಿಕೂನ್ಗೂನ್ಯ ರೋಗ ಲಕ್ಷಣವನ್ನು ಹೋಲುತ್ತಿದ್ದು, ಜ್ವರ ಹಾಗೂ ಗುಳ್ಳೆಯ ಜೊತೆಗೆ ಕೆಮ್ಮು, ಶೀತ, ನಿರ್ಜಲೀಕರಣ ಉಂಟಾಗುತ್ತದೆ. ಇದು ಒಬ್ಬರಿಂದ ಇನ್ನೊಬ್ಬರಿಗೆ ಹರಡುವುದರಿಂದ ಸೋಂಕಿತ ಮಕ್ಕಳು ಕ್ವಾರಂಟೈನ್ ಆಗಬೇಕು ಹಾಗೂ ಗುಳ್ಳೆಗಳನ್ನು ಉಜ್ಜಬಾರದು.
ಜಿಲ್ಲೆಯ ವೈದ್ಯಾಧಿಕಾರಿಗಳು, ಆರೋಗ್ಯ ಸಿಬ್ಬಂದಿ ಮೇಲ್ಕಂಡ ಲಕ್ಷಣಗಳಿರುವ ಪ್ರಕರಣಗಳು ಕಂಡುಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು. ಕೇರಳದಿಂದ ಬರುವ ವ್ಯಕ್ತಿಗಳು, ಯಾತ್ರಿಕರು, ಮಕ್ಕಳ ಮೇಲೆ ತೀವ್ರ ನಿಗಾ ವಹಿಸಬೇಕು. ಕೊಲ್ಲೂರು ಮೂಕಾಂಬಿಕಾ ಹಾಗೂ ಜಿಲ್ಲೆಯ ಇತರೆ ಧಾರ್ಮಿಕ ಕೇಂದ್ರ ಹಾಗೂ ಪ್ರವಾಸಿ ತಾಣಗಳಲ್ಲಿಯೂ ಕೂಡ ಈ ರೋಗ ಲಕ್ಷಣ ಹೊಂದಿರುವ ಪ್ರಕರಣಗಳ ಕುರಿತು ಪರೀಕ್ಷೆ ನಡೆಸುವಂತೆ ಸೂಚಿಸಲಾಗಿದೆ. ಖಾಸಗಿ ಆಸ್ಪತ್ರೆಗಳು ಹಾಗೂ ಎಲ್ಲಾ ಮಕ್ಕಳ ತಜ್ಞರು ಈ ಜ್ವರದ ಲಕ್ಷಣಗಳು ಕಂಡುಬಂದಲ್ಲಿ ಪರೀಕ್ಷೆ ನಡೆಸಿ, ತಕ್ಷಣ ಮಾಹಿತಿ ನೀಡಬೇಕು ಎಂದವರು ಸೂಚಿಸಿದ್ದಾರೆ.
"ಸಾರ್ವಜನಿಕರು ರೋಗದ ಬಗ್ಗೆ ಭೀತಿಗೊಳಗಾಗದೇ ಟೊಮೇಟೊ ಜ್ವರದ ಲಕ್ಷಣಗಳ ಬಗ್ಗೆ ಅರಿತು, ಶುದ್ಧತೆಯನ್ನು ಕಾಪಾಡಿಕೊಳ್ಳಬೇಕು ಹಾಗೂ ಮಕ್ಕಳಲ್ಲಿ ನಿರ್ಜಲೀಕರಣವಾಗದಂತೆ ಹೆಚ್ಚಿನ ಗಮನ ಹರಿಸಿ, ಶುದ್ಧ ನೀರು ಸೇವಿಸಬೇಕು"
-ಕೂರ್ಮಾರಾವ್ ಎಂ., ಜಿಲ್ಲಾಧಿಕಾರಿ ಉಡುಪಿ.