ಪರಿಷತ್ ಚುನಾವಣೆ: ಬಿ.ವೈ.ವಿಜಯೇಂದ್ರ ಕಣಕ್ಕಿಳಿಸಲು ಕೋರ್ ಕಮಿಟಿ ನಿರ್ಧಾರ

ಬೆಂಗಳೂರು, ಮೇ 14: ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್ನ ಏಳು ಸ್ಥಾನಗಳಿಗೆ ಜೂನ್ 3ರಂದು ನಡೆಯುವ ಚುನಾವಣೆಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದ್ದು, ವಿಜಯೇಂದ್ರ ಸೇರಿದಂತೆ 15 ಮಂದಿಯ ಹೆಸರನ್ನು ರಾಜ್ಯ ಚುನಾವಣಾ ಸಮಿತಿಯೂ ಕೇಂದ್ರ ಚುನಾವಣಾ ಮಂಡಳಿಗೆ ಶಿಫಾರಸ್ಸು ಮಾಡಲು ನಿರ್ಧರಿಸಿದೆ.
ಶನಿವಾರ ನಗರದ ಮಲ್ಲೇಶ್ವರಂನ ಜಗನ್ನಾಥ ಭವನದಲ್ಲಿ ನಡೆದ ಸಭೆಯಲ್ಲಿ ಅಚ್ಚರಿಯ ಬೆಳವಣಿಗೆಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಹಾಗೂ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ವಿಧಾನಸಭೆಯಿಂದ ವಿಧಾನಪರಿಷತ್ಗೆ ನಡೆಯಲಿರುವ ಚುನಾವಣೆಗೆ ಅಭ್ಯರ್ಥಿಯನ್ನಾಗಿಸಲು ಬಿಜೆಪಿ ಕೋರ್ ಕಮಿಟಿ ಸಭೆ ತೀರ್ಮಾನಿಸಿದೆ.
ವಿಧಾನಸಭೆಯಿಂದ ವಿಧಾನಪರಿಷತ್ಗೆ ನಡೆಯಲಿರುವ ಏಳು ಸ್ಥಾನಗಳ ಪೈಕಿ ಬಿಜೆಪಿಗೆ 4 ಸ್ಥಾನ ಲಭಿಸಲಿದ್ದು, 15 ಹೆಸರುಗಳನ್ನು ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಿಕೊಡಲು ತೀರ್ಮಾನಿಸಲಾಯಿತು. ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ, ಲಕ್ಷ್ಮಣ್ ಸವದಿ, ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಒಬಿಸಿ ಮೋರ್ಚಾ ಅಧ್ಯಕ್ಷ ನೆ.ಲ.ನರೇಂದ್ರ ಬಾಬು, ಎಸ್ಸಿ ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ, ಮಹಿಳಾ ಮೋರ್ಚಾ ಅಧ್ಯಕ್ಷೆ ಗೀತಾ ವಿವೇಕಾನಂದ ಸೇರಿದಂತೆ ಒಟ್ಟು 15 ಹೆಸರುಗಳನ್ನು ಶಿಫಾರಸ್ಸು ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಅಂತಿಮವಾಗಿ ಮೇಲ್ಕಂಡ 15 ಮಂದಿಯ ಹೆಸರನ್ನು ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಿಕೊಡಬೇಕು. ಬಿಜೆಪಿ ವರಿಷ್ಠರು ತೆಗೆದುಕೊಳ್ಳುವ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರಬೇಕೆಂಬ ಒಂದು ಸಾಲಿನ ನಿರ್ಣಯವನ್ನು ಕೋರ್ ಕಮಿಟಿ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ ಎಂದು ಪಕ್ಷದ ಮೂಲಗಳಿಂದ ತಿಳಿದು ಬಂದಿದೆ.
ಸಚಿವ ಸಂಪುಟ ಪುನಾರಚನೆಯಾದರೆ ವಿಜಯೇಂದ್ರ ಅವರನ್ನು ಸಂಪುಟಕ್ಕೆ ತೆಗೆದುಕೊಳ್ಳಬೇಕು ಆರು ತಿಂಗಳೊಳಗೆ ಅವರು ಯಾವುದಾದರೊಂದು ಸದನದ ಸದಸ್ಯರಾಗಬೇಕು. ಹೀಗಾಗಿ ವಿಧಾನಸಭೆಯಿಂದ ವಿಧಾನಪರಿಷತ್ಗೆ ನಡೆಯಲಿರುವ ಚುನಾವಣೆಯಲ್ಲಿ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಬೇಕೆಂಬ ಅಭಿಪ್ರಾಯ ವ್ಯಕ್ತವಾಗಿದೆ ಎಂದು ಗೊತ್ತಾಗಿದೆ.
ಬಿ.ವೈ.ವಿಜಯೇಂದ್ರ ಸಂಪುಟಕ್ಕೆ ಬಂದರೆ ಹಳೇ ಮೈಸೂರು ಸೇರಿದಂತೆ ಲಿಂಗಾಯಿತರ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಪಕ್ಷದ ಸಂಘಟನೆಗೆ ಅನುಕೂಲವಾಗಲಿದೆ. ಈ ಹಿಂದೆ ರಾಜ್ಯದ ವಿವಿಧೆಡೆ ನಡೆದ ಉಪಚುನಾವಣೆಯಲ್ಲಿ ಕೆಲವು ಕಡೆ ಅವರ ವೈಯಕ್ತಿಕ ವರ್ಚಿಸ್ಸಿನಿಂದಲೇ ಪಕ್ಷದ ಗೆಲುವಿಗೆ ಅನುಕೂಲವಾಗಿದೆ ಎಂಬ ಹಿನ್ನೆಲೆಯಲ್ಲಿ ಮೇಲ್ಕಂಡ ತೀರ್ಮಾನ ಮಾಡಲಾಗಿದೆ ಎಂದು ಹೇಳಲಾಗಿದೆ.
ಬಿಜೆಪಿ ಪ್ರಾಬಲ್ಯವೇ ಇಲ್ಲದ ಇಲ್ಲದ ಕೆ.ಆರ್.ಪೇಟೆ, ಶಿರಾ ಸೇರಿದಂತೆ ಮತ್ತಿತರ ಕಡೆ ಬಿಜೆಪಿ ಗೆಲ್ಲಲು ವಿಜಯೇಂದ್ರ ಅವರ ವರ್ಚಸ್ಸೇ ಕಾರಣ. ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಕೆಳಗಿಳಿಸಿರುವ ಕಾರಣ ಪಕ್ಷದ ಬೆನ್ನೆಲುಬಾಗಿ ನಿಂತಿರುವ ವೀರಶೈವ ಲಿಂಗಾಯತ ಸಮುದಾಯ ಕೈಬಿಟ್ಟು ಹೋಗದಂತೆ ವಿಜಯೇಂದ್ರ ಅವರಿಗೆ ಮಣೆ ಹಾಕಲು ಪಕ್ಷದ ವರಿಷ್ಠರು ಲೆಕ್ಕಾಚಾರ ಹಾಕಿದ್ದಾರೆಂದು ಗೊತ್ತಾಗಿದೆ.
ಬಿಜೆಪಿ ಸಂಖ್ಯಾಬಲವನ್ನು ಆಧರಿಸಿ ನಾಲ್ಕು ಸ್ಥಾನಗಳನ್ನು ಅನಾಯಾಸವಾಗಿ ಗೆಲ್ಲಬಹುದು. ಪ್ರತಿಪಕ್ಷ ಕಾಂಗ್ರೆಸ್ ಎರಡು ಹಾಗೂ ಜೆಡಿಎಸ್ ಒಂದು ಸ್ಥಾನವನ್ನು ಗೆಲ್ಲಿಸಿಕೊಳ್ಳುವ ಸಾಧ್ಯತೆ ಇದೆ. ಅಂತಿಮವಾಗಿ ಯಾರ ವಿರೋಧವೂ ಇಲ್ಲದಿದ್ದರೆ ವಿಜಯೇಂದ್ರ ಮೇಲ್ಮನೆಗೆ ಆಯ್ಕೆ ಆಗುವುದು ನಿಶ್ಚಿತ. ಆದರೆ, ಈ ಹಿಂದೆ ಕೋರ್ ಕಮಿಟಿ ಸಭೆಯು ದಿಲ್ಲಿಗೆ ಕಳುಹಿಸಿದ್ದ ಪಟ್ಟಿಯನ್ನೇ ಸಂಪೂರ್ಣವಾಗಿ ತಿರಸ್ಕರಿಸಿ ಅಚ್ಚರಿಯ ಅಭ್ಯರ್ಥಿಗಳನ್ನು ವರಿಷ್ಠರು ಕೊನೆಯ ಕ್ಷಣದಲ್ಲಿ ಆಯ್ಕೆ ಮಾಡಿದ್ದರು.
ಸಭೆಯಲ್ಲಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಿಎಂಗಳಾದ ಬಿ.ಎಸ್.ಯಡಿಯೂರಪ್ಪ, ಜಗದೀಶ ಶೆಟ್ಟರ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಸಚಿವರಾದ ಆರ್.ಅಶೋಕ, ಗೋವಿಂದ ಕಾರಜೋಳ, ಡಾ.ಅಶ್ವತ್ಥ ನಾರಾಯಣ, ಬಿ.ಶ್ರೀರಾಮುಲು, ಶಾಸಕ ಕೆ.ಎಸ್.ಈಶ್ವರಪ್ಪ ಸೇರಿದಂತೆ ಪದಾಧಿಕಾರಿಗಳು ಪಾಲ್ಗೊಂಡಿದ್ದರು.








