‘ಸ್ವರ್ಣ ಸಾಧನಾ ಪ್ರಶಸ್ತಿ’ಗೆ ಶ್ರೀ ಮಹಾಲಿಂಗ ನಾಯ್ಕ ಅಮೈ ಆಯ್ಕೆ
ಮಹಾಲಿಂಗ ನಾಯ್ಕ
ಪುತ್ತೂರು: ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ಸುವರ್ಣ ಮಹೋತ್ಸವದ ನೆನಪಿನಲ್ಲಿ ನೀಡಲಾಗುತ್ತಿ ರುವ ʼಸ್ವರ್ಣ ಸಾಧನಾ ಪ್ರಶಸ್ತಿ'ಗೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಮಹಾಲಿಂಗ ನಾಯ್ಕ ಅಮೈ ಆಯ್ಕೆಯಾಗಿದ್ದಾರೆ.
ಮೇ 28ರಂದು ನಡೆಯಲಿರುವ ಸಂಘದ ಮಹಾಸಭೆಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ಸಾಹಿತ್ಯ, ಶಿಕ್ಷಣ, ಸಾಂಸ್ಕೃತಿಕ, ಸಮಾಜಸೇವೆ, ಕೃಷಿ- ಈ ಐದು ಕ್ಷೇತ್ರಗಳ ಸಾಧಕರನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗುತ್ತಿದ್ದು, ರೂ. 15,000 ನಗದು, ಸ್ಮರಣಿಕೆ, ಶಾಲು ಮತ್ತು ಫಲಕಗಳನ್ನು ಒಳಗೊಂಡಿದೆ.
ಈ ವರ್ಷ ಕೃಷಿ ನೀರಾವರಿ ಕ್ಷೇತ್ರವನ್ನು ಆಯ್ಕೆ ಮಾಡಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಮಹಾಲಿಂಗ ನಾಯ್ಕ್ ಅಮೈ ಯವರನ್ನು ಆಯ್ಕೆ ಮಾಡಲಾಗಿದೆ. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ‘ನಟರಾಜ ವೇದಿಕೆ’ಯಲ್ಲಿ ನಡೆಯಲಿದ್ದು, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳಿಯ ಕೇಶವ ಪ್ರಸಾದ್ ಚಾಲನೆ ನೀಡಲಿದ್ದಾರೆ.
ಶಾಸಕ ಸಂಜೀವ ಮಠಂದೂರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ನಗರಸಭಾ ಅಧ್ಯಕ್ಷ ಕೆ. ಜೀವಂಧರ್ ಜೈನ್, ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಸುವರ್ಣ ಮಹೋತ್ಸವ ಸ್ವಾಗತ ಸಮಿತಿ ಅಧ್ಯಕ್ಷ ಪ್ರೊ. ಎ. ವಿ. ನಾರಾಯಣ ಅವರು ಸಭಾಧ್ಯಕ್ಷತೆ ವಹಿಸಲಿದ್ದಾರೆ ಎಂದು ಸಂಘದ ಅಧ್ಯಕ್ಷ ಬಿ. ಐತ್ತಪ್ಪ ನಾಯ್ಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.