ಪರಿಶಿಷ್ಟರಿಗೆ ಇಲಾಖೆಯಿಂದಲೇ ಗೃಹ ನಿರ್ಮಾಣಕ್ಕೆ ಅನುದಾನ ಬಿಡುಗಡೆ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಸರಕಾರ ಪರಿಶಿಷ್ಟ ಜಾತಿ ಮತ್ತು ಪಂಗಡದವರ ಕಲ್ಯಾಣ ಅಭಿವೃದ್ಧಿಗೆ ಅನೇಕ ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಇದನ್ನು ಅರ್ಹ ಫಲಾನುಭವಿಗಳಿಗೆ ನಿಗದಿತ ಕಾಲಾವಧಿಯೊಳಗೆ ತಲುಪಿಸ ಬೇಕು ಎಂದು ರಾಜ್ಯ ಹಿಂದುಳಿದ ವರ್ಗಗಳ ಹಾಗೂ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಸೋಮವಾರ ಮಣಿಪಾಲದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಎಸ್ಸಿಎಸ್ಪಿ ಮತ್ತು ಟಿಎಸ್ಪಿ, ಹಿಂದುಳಿದ ವರ್ಗಹಾಗೂ ಸಮಾಜ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸರಕಾರ ಪ್ರಸ್ತುತ ಸಾಲಿನಲ್ಲಿ ಆಯವ್ಯಯದಲ್ಲಿ ಪ.ಜಾತಿ ಮತ್ತು ಪ. ಪಂಗಡದ ಜನಸಂಖ್ಯೆ ಆಧಾರದ ಮೇಲೆ ಶೇ.೨೪.೧೦ರಷ್ಟು ಅನುದಾನವನ್ನು ಮೀಸಲಿಟ್ಟು, ಕಾಲೋನಿಗಳ ಮೂಲಭೂತ ಸೌಕರ್ಯವನ್ನು ಒದಗಿಸುವು ದರ ಜೊತೆಗೆ ಹಾಗೂ ವಿವಿಧ ಯೋಜನೆಗಳ ಅಡಿಯಲ್ಲಿ ಫಲಾನುಭವಿಗಳನ್ನು ಆಯ್ಕೆ ಮಾಡಿ ಆರ್ಥಿಕ ಸಹಾಯ ವನ್ನು ಕಲ್ಪಿಸಲು ಮುಂದಾಗಿದೆ. ಇವು ಸಮರ್ಪಕ ಅನುಷ್ಠಾನ ಗೊಳ್ಳಬೇಕು ಎಂದವರು ನುಡಿದರು.
ಇಲಾಖೆಯಿಂದ ಅನುದಾನ: ಜಿಲ್ಲೆಯ ಪ.ಜಾತಿ ಹಾಗೂ ಪ. ಪಂಗಡದವರ ನಿವೇಶನ ರಹಿತ, ವಸತಿ ರಹಿತರ ಪಟ್ಟಿಯನ್ನು ಮಾಡಿ ಅದಕ್ಕನುಗುಣವಾಗಿ ಲಭ್ಯವಿರುವ ಅನುದಾನವನ್ನು ಬಳಕೆ ಮಾಡಿ ಸೌಲಭ್ಯಗಳನ್ನು ಕಲ್ಪಿಸಬೇಕು. ರಾಜೀವ್ ಗಾಂಧಿ ನಿಗಮದಿಂದ ವಸತಿ ಸೌಲಭ್ಯ ಕಲ್ಪಿಸಲಾಗುತ್ತಿದ್ದು, ಕೆಲ ವೊಂದು ಷರತ್ತಿನಿಂದಾಗಿ ಅದು ಸಮರ್ಪಕವಾಗಿ ಅನುಷ್ಠಾನವಾಗುತ್ತಿಲ್ಲ. ಈ ಹಿನ್ನಲೆಯಲ್ಲಿ ಇಲಾಖೆಯ ವತಿಯಿಂದಲೇ ನೇರವಾಗಿ ಗೃಹ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕೆಂದು ಸೂಚನೆ ನೀಡಿದರು.
ಪೌರ ಕಾರ್ಮಿಕರ ಅಭಿವೃದ್ಧಿಯ ಅನುದಾನವನ್ನು ಅರ್ಹ ಫಲಾನುಭವಿ ಗಳಿಗೆ ತಲುಪಿಸಬೇಕು ಎಂದ ಅವರು, ಜಿಲ್ಲೆಯಲ್ಲಿ ೩೬೮ ಪೌರ ಕಾರ್ಮಿಕರ ಹುದ್ದೆಗಳಿದ್ದು, ಇದರಲ್ಲಿ ೧೩೦ ಖಾಯಂ ಇದ್ದರೆ, ೧೬೪ ಮಂದಿ ಗುತ್ತಿಗೆ ಹಾಗೂ ಹೊರ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರುಗಳನ್ನು ಖಾಯಂಗೊಳಿಸಲು ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಿ ಕೊಡಲು ಸಚಿವರು ಸೂಚನೆ ನೀಡಿದರು.
ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಪ.ಜಾತಿ ಹಾಗೂ ಪ.ಪಂಗಡದ ರೈತರುಗಳ ಅಂಕಿ-ಸಂಖ್ಯೆಗಳನ್ನು ಕ್ರೂಢೀಕರಿಸುವ ಜೊತೆಗೆ ಸಣ್ಣ- ಅತಿ ಸಣ್ಣ ರೈತರುಗಳ ಮಾಹಿತಿಗಳನ್ನು ಸಂಗ್ರಹಿಸಿ ಅವರ ಸಂಖ್ಯೆಗೆ ಅನುಗುಣವಾಗಿ ಅನುದಾನವನ್ನು ಸರ್ಕಾರದಿಂದ ಪಡೆದು ಆರ್ಥಿಕ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದರು.
ಸಮುದಾಯದವರು ಹೆಚ್ಚಿನ ಸಹಕಾರ ಸಂಘಗಳನ್ನು ಪ್ರಾರಂಭಿಸಲು ಅವಕಾಶ ಮಾಡಿಕೊಡಬೇಕು. ಹೆಚ್ಚು ಜನರು ಸಹಕಾರ ಸಂಘದ ಸದಸ್ಯರಾಗಲು ಷೇರು ಬಂಡವಾಳವನ್ನು ಒದಗಿಸಬೇಕು. ಪ್ರತಿಯೊಬ್ಬ ಸದಸ್ಯರು ಯಶಸ್ವಿನಿ ಯೋಜನೆಯ ವ್ಯಾಪ್ತಿಯಲ್ಲಿ ಬರುವ ಹಾಗೆ ಕ್ರಮ ವಹಿಸಬೇಕು ಎಂದರು.
ಹೊಸಬರಿಗೆ ಉದ್ಯೋಗಾವಕಾಶ ಕಲ್ಪಿಸಬೇಕು ಎಂಬ ಉದ್ದೇಶದಿಂದ ಬಜೆಟ್ ನಲ್ಲಿ ಆಳ ಸಮುದ್ರ ಮೀನುಗಾರಿಕೆ, ೧೦೦ ಹೊಸ ಬೋಟ್ಗಳನ್ನು ಖರೀದಿಸಲು, ಮೀನು ಮಾರಾಟ ಮಾಡಲು ಅನುಕೂಲವಾಗುವಂತೆ ಮಹಿಳೆಯರಿಗೆ ೧೦೦ ದ್ವಿಚಕ್ರ ವಾಹನವನ್ನು ಖರೀದಿಸಲು ಆರ್ಥಿಕ ಸೌಲಭ್ಯ ಕಲ್ಪಿಸಲಾಗಿದೆ ಎಂದರು.
ವಾರಾಹಿ ಯೋಜನೆಗೆ ಬಿಡುಗಡೆ ಮಾಡಲಾಗಿರುವ ಒಟ್ಟು ಅನುದಾನದಲ್ಲಿ ಶೇ.೨೪.೧೦ರಷ್ಟು ಹಣವನ್ನು ಪ.ಜಾತಿ,ಪ.ಪಂಗಡದವರ ಅಭಿವೃದ್ಧಿ ಕಾರ್ಯಗಳಿಗೆ ಬಳಕೆ ಮಾಡಬೇಕು. ಗಂಗಾ ಕಲ್ಯಾಣ ಯೋಜನೆಯ ಫಲಾನುಭವಿಗಳು ಯೋಜನೆಯ ಲಾಭವನ್ನು ಶೀಘ್ರವೇ ಪಡೆಯುವಂತಾಗಲಿ ಎಂದರು.
ಕೊರಗ ಸಮುದಾಯದವರ ಆರೋಗ್ಯ ತಪಾಸಣೆ ಕಾರ್ಯವು ಆಗಿಂದ್ದಾಗೆ ಕೈಗೊಳ್ಳಬೇಕು. ಆಯುಷ್ಮಾನ್ ಆರೋಗ್ಯ ಕರ್ನಾಟಕದ ಯೋಜನೆ ಅಡಿ ತೀವ್ರ ತರಹದ ಕಾಯಿಲೆ ಹೊಂದಿದವರಿಗೆ ಸರಿಯಾದ ಚಿಕಿತ್ಸೆ ನೀಡುತ್ತಿಲ್ಲ ಎಂಬ ದೂರು ಕೇಳಿ ಬರುತ್ತಿದೆ ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರ ಹಾಗೂ ಜನಪ್ರತಿನಿಧಿಗಳ ಸಭೆ ಕರೆದು ಅದನ್ನು ಸರಿಪಡಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಆಯುಕ್ತ ರಾಕೇಶ್ ಕುಮಾರ್ ಕೆ, ಜಿಲ್ಲಾಧಿಕಾರಿ ಕೂರ್ಮರಾವ್ ಎಂ, ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಸನ್ನ ಎಚ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶೀಷ್ ರೆಡ್ಡಿ, ರಾಜ್ಯ ಎಸ್ಸಿಎಸ್ಪಿ ಮತ್ತು ಟಿಎಸ್ಪಿ ನಿರ್ದೇಶಕಿ ಊರ್ಮಿಳಾ, ಡಾ. ಬಾಬು ಜಗಜ್ಜೀವನ್ರಾವ್ ಸಂಶೋಧನಾ ಸಂಸ್ಥೆಯ ನಿರ್ದೇಶಕ ಅರುಣ್ ಫುಟಾರ್ಡೋ ಹಾಗೂ ಜಿಲ್ಲಾಮಟ್ಟದ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.