ಪತ್ರಕರ್ತ ಮಿಥುನ ಕೊಡೆತ್ತೂರುಗೆ ಪ.ಗೋ.ಪ್ರಶಸ್ತಿ ಪ್ರದಾನ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡಲ್ಪಡುವ ೨೦೨೧ನೆಯ ಸಾಲಿನ ಪ್ರತಿಷ್ಠಿತ ಪ.ಗೋ. ಪ್ರಶಸ್ತಿಯನ್ನು ಹೊಸ ದಿಗಂತ ಪತ್ರಿಕೆಯ ವರದಿಗಾರ ಮಿಥುನ ಕೊಡೆತ್ತೂರು ಅವರಿಗೆ ಪ್ರದಾನಿಸಲಾಯಿತು.
ಮಿಥುನ್ ಅವರ ‘ಈಗ ಕೈ ಮಗ್ಗಗಳತ್ತ ಪದವೀಧರರ ಚಿತ್ತ... ಸೀರೆಗಳಲ್ಲಿ ನೇಕಾರರ ಚಿತ್ರ!’ ವರದಿಗೆ ಪ್ರಶಸ್ತಿ ಲಭಿಸಿದ್ದು, ಪ್ರಶಸ್ತಿಯು ೧೦,೦೦೧ ರೂ.ನಗದು, ಪ್ರಶಸ್ತಿ ಫಲಕ, ಸ್ಮರಣಿಕೆಯನ್ನು ಒಳಗೊಂಡಿದೆ. ಮಂಗಳವಾರ ನಗರದ ಪ್ರೆಸ್ ಕ್ಲಬ್ನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಡಿಸಿಪಿ ಹರಿರಾಮ್ ಶಂಕರ್ ಪ್ರಶಸ್ತಿ ಪ್ರದಾನ ಮಾಡಿದರು.
ಬಳಿಕ ಮಾತನಾಡಿದ ಅವರು, ಗ್ರಾಮೀಣ ಭಾಗದ ಸಮಸ್ಯೆ, ಸವಾಲುಗಳನ್ನು ತಮ್ಮ ಬರಹಗಳ ಮೂಲಕ ಪರಿಚಯಿಸುವುದರೊಂದಿಗೆ ಆಡಳಿತವನ್ನು ಎಚ್ಚರಿಸುವ ಕೆಲಸವನ್ನು ಪತ್ರಕರ್ತರು ಬದ್ಧತೆಯಿಂದ ನಿರ್ವಹಿಸಬೇಕು ಎಂದರು.
ಸಾಧಕ ಪತ್ರಕರ್ತರ ಸ್ಮರಿಸುವ ಕಾರ್ಯವಾಗಲಿ
ಹಿರಿಯ ಪತ್ರಕರ್ತ ಕೆ.ಆನಂದ ಶೆಟ್ಟಿ ಮಾತನಾಡಿ, ಪದ್ಯಾಣ ಗೋಪಾಲಕೃಷ್ಣ ಅವರು ಗ್ರಾಮೀಣ ಭಾಗದ ವರದಿಗಳ ಬಗ್ಗೆ ವಿಶೇಷ ಒಲವು ತೋರುತ್ತಿದ್ದರು. ನೇರ ನುಡಿಯ ಉತ್ತಮ ಪತ್ರಕರ್ತರಾಗಿದ್ದ ಅವರು ಯುವ ಪತ್ರಕರ್ತರಿಗೆ ಮಾದರಿಯಾಗಿದ್ದರು. ಅವರ ಹೆಸರಿನಲ್ಲಿ ಕಳೆದ ೨೩ ವರ್ಷಗಳಿಂದ ಪ.ಗೋ ಪ್ರಶಸ್ತಿ ನೀಡಲಾಗುತ್ತಿದ್ದು, ಇದೊಂದು ಪ್ರತಿಷ್ಠಿತ ಪ್ರಶಸ್ತಿಯಾಗಿ ಗುರುತಿಸಿಕೊಂಡಿದೆ ಎಂದರು.
ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ದ.ಕ. ಅಪರ ಜಿಲ್ಲಾಘಿಕಾರಿ ಕೃಷ್ಣಮೂರ್ತಿ ಶುಭ ಹಾರೈಸಿದರು. ಪ್ರಶಸ್ತಿ ಸ್ವೀಕರಿಸಿದ ಮಿಥುನ ಕೊಡೆತ್ತೂರು ಅನಿಸಿಕೆ ವ್ಯಕ್ತಪಡಿಸಿದರು.
ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್, ಪದ್ಯಾಣ ಗೋಪಾಲಕೃಷ್ಣ ಅವರ ಹಿರಿಯ ಪುತ್ರ ವಿಶ್ವೇಶ್ವರ ಪದ್ಯಾಣ ಉಪಸ್ಥಿತರಿದ್ದರು.
ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು. ಹಿರಿಯ ಪತ್ರಕರ್ತ ಮುಹಮ್ಮದ್ ಆರಿಫ್ ಪಡುಬಿದ್ರೆ ಕಾರ್ಯಕ್ರಮ ನಿರೂಪಿಸಿದರು.