ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ 2 ಲಕ್ಷ ಕೋಟಿ ರೂ.ಖರ್ಚು: ಸಿದ್ದರಾಮಯ್ಯ

ಬೆಂಗಳೂರು, ಜೂ.3: ಕೃಷ್ಣ, ಕಾವೇರಿ ಹಾಗೂ ಗೋದಾವರಿ ನದಿ ಸಂಬಂಧಿತ ನನೆಗುದಿಗೆ ಬಿದ್ದಿರುವ ಯೋಜನೆಗಳನ್ನು ಮುಂದಿನ 5 ವರ್ಷಗಳಲ್ಲಿ ಪೂರ್ಣಗೊಳಿಸಲು ವರ್ಷಕ್ಕೆ 40 ಸಾವಿರ ಕೋಟಿಯಂತೆ 5 ವರ್ಷಗಳಲ್ಲಿ 2 ಲಕ್ಷ ಕೋಟಿ ರೂ.ಖರ್ಚು ಮಾಡುತ್ತೇವೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದರು.
ನಗರದ ಹೊರವಲಯದಲ್ಲಿರುವ ಖಾಸಗಿ ರೆಸಾರ್ಟ್ನಲ್ಲಿ ಆಯೋಜಿಸಿದ್ದ ಕೆಪಿಸಿಸಿ ನವ ಸಂಕಲ್ಪ ಶಿಬಿರದ ಸಮಾರೋಪ ಸಮಾರಂಭದ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜೊತೆ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.
ಕೃಷ್ಣ ಮೇಲ್ದಂಡೆ, ಮಹಾದಾಯಿ, ಎತ್ತಿನಹೊಳೆ, ಭದ್ರಾ ಮೇಲ್ದಂಡೆ, ಮೇಕೆದಾಟು, ಸಾರಂಗಾ ಸೇರಿದಂತೆ ಎಲ್ಲ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಿ, ರೈತರಿಗೆ ನೆಮ್ಮದಿಯ ಬದುಕು ಕಲ್ಪಿಸಿಕೊಡುತ್ತೇವೆ. ಈ ಬಗ್ಗೆ ಇಂದು ಚರ್ಚೆ ಮಾಡಿದ್ದೇವೆ. ಉಳಿದ ವಿಚಾರಗಳನ್ನು ನಾವು ಚರ್ಚಿಸಿ, ಅಂತಿಮ ನಿರ್ಣಯ ಕೈಗೊಂಡ ಬಳಿಕ ತಿಳಿಸುತ್ತೇವೆ ಎಂದು ಅವರು ಹೇಳಿದರು.
ಖಾಸಗಿ ಕ್ಷೇತ್ರದಲ್ಲೂ ಮೀಸಲಾತಿ: ಖಾಸಗಿ ಕ್ಷೇತ್ರದಲ್ಲಿ ಕೂಡ ಮೀಸಲಾತಿ ತರಲು ಪಕ್ಷ ಬದ್ಧವಾಗಿದೆ. ಮುಂದೆ ನಾವು ಅಧಿಕಾರಕ್ಕೆ ಬಂದಮೇಲೆ ಪರಿಶಿಷ್ಟ ಜಾತಿ, ಪಂಗಡ ಮತ್ತು ಹಿಂದುಳಿದ ಜಾತಿಗಳ ಬ್ಯಾಕ್ಲಾಗ್ ಹುದ್ದೆಗಳ ಭರ್ತಿ ಹಾಗೂ ಖಾಸಗಿ ಕ್ಷೇತ್ರದಲ್ಲೂ ಮೀಸಲಾತಿ ಜಾರಿಗೆ ತರುತ್ತೇವೆ ಎಂದು ಸಿದ್ದರಾಮಯ್ಯ ತಿಳಿಸಿದರು.
ಹೊರಗುತ್ತಿಗೆ ಆಧಾರದಲ್ಲಿ ಹುದ್ದೆಗಳನ್ನು ಭರ್ತಿ ಮಾಡುವ ಸಂದರ್ಭದಲ್ಲಿಯೂ ಮೀಸಲಾತಿಯನ್ನು ಜಾರಿಗೊಳಿಸಲು ನಾವು ಪ್ರಯತ್ನ ಮಾಡುತ್ತೇವೆ, ಜೊತೆಗೆ ಹೊರಗುತ್ತಿಗೆ ಹುದ್ದೆಗಳ ಭರ್ತಿ ಕಾರ್ಯವನ್ನು ನಾವು ಆರಂಭಿಸುತ್ತೇವೆ ಎಂದು ಅವರು ಹೇಳಿದರು.
ಸಾಂಸ್ಕ್ರತಿಕ ದೌರ್ಜನ್ಯಗಳು, ಸಾಂಸ್ಕ್ರತಿಕ ಭಯೋತ್ಪಾದನೆ ವಿರುದ್ಧ ಪಕ್ಷ ಹೋರಾಟ ಮಾಡಲಿದೆ. ಮುಸ್ಲಿಮ್ ಹಾಗೂ ಕ್ರಿಶ್ಚಿಯನ್ನರ ಮೇಲೆ ಸುಳ್ಳು ಮೊಕದ್ದಮೆ ದಾಖಲಿಸುವುದನ್ನು ನಾವು ಖಂಡಿಸುತ್ತೇವೆ ಮತ್ತು ಆ ಜನರೊಂದಿಗೆ ದೃಢವಾಗಿ ನಿಲ್ಲುತ್ತೇವೆ. ಸರ್ವರಿಗೂ ರಕ್ಷಣೆ ಕೊಡುವ ಕೆಲಸವನ್ನು ನಾವು ಮಾಡಲಿದ್ದೇವೆ ಎಂದು ಸಿದ್ದರಾಮಯ್ಯ ತಿಳಿಸಿದರು.
ಅಗತ್ಯವಸ್ತುಗಳ ಬೆಲೆ ಗಗನಕ್ಕೇರಿದೆ. ಪೆಟ್ರೋಲ್, ಡೀಸೆಲ್, ಗ್ಯಾಸ್, ಅಡುಗೆ ಎಣ್ಣೆ, ಸಿಮೆಂಟ್, ಕಬ್ಬಿಣ, ಗೊಬ್ಬರದ ಬೆಲೆ ಮಿತಿಮೀರಿದೆ. ಇದರಿಂದ ಜನಜೀವನ ಹಾಳಾಗಿದೆ. ನಾವು ಅಧಿಕಾರಕ್ಕೆ ಬಂದ ನಂತರ ಬೆಲೆ ನಿಯಂತ್ರಣ ಕೆಲಸವನ್ನು ಮಾಡುತ್ತೇವೆ ಹಾಗೂ ಈಗಿನ ಸರಕಾರದ ಮೇಲೂ ಬೆಲೆ ನಿಯಂತ್ರಿಸುವಂತೆ ಒತ್ತಡ ಹಾಕುತ್ತೇವೆ. ಇದರ ವಿರುದ್ಧ ನಿರಂತರವಾಗಿ ಹೋರಾಟ ಮಾಡುತ್ತೇವೆ ಎಂದು ಅವರು ತಿಳಿಸಿದರು.
ಎಸ್.ಸಿ.ಪಿ/ಟಿ.ಎಸ್.ಪಿ ಯೋಜನೆಯ ಹಣ ಕಳೆದೆರಡು ವರ್ಷದಿಂದ ಸಮರ್ಪಕವಾಗಿ ಖರ್ಚಾಗುತ್ತಿಲ್ಲ. ಈ ಯೋಜನೆಗೆ ಸಂಬಂಧಿಸಿದ ಸೆಕ್ಷನ್ 7(ಡಿ) ಅನ್ನು ತೆಗೆದು ಹಾಕಬೇಕು ಎಂದು ದಲಿತ ಸಂಘಟನೆಗಳು ಒತ್ತಾಯ ಮಾಡಿವೆ, ಇದನ್ನು ತೆಗೆಯಬೇಕು ಎಂದು ನಾವು ಸರಕಾರವನ್ನು ಒತ್ತಾಯ ಮಾಡುತ್ತೇವೆ, ಇದು ಆಗದಿದ್ದರೆ ನಾವು ಮುಂದೆ ಅಧಿಕಾರಕ್ಕೆ ಬಂದಾಗ ತೆಗೆದು ಹಾಕುತ್ತೇವೆ ಎಂದು ಸಿದ್ದರಾಮಯ್ಯ ಭರವಸೆ ನೀಡಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿ, ರಾಜ್ಯದಲ್ಲಿ ಎಲ್ಲ ವರ್ಗದ ಜನರಿಗೆ ರಕ್ಷಣೆ, ನಮ್ಮ ಸಂಸ್ಕøತಿ, ಪರಂಪರೆ, ಇತಿಹಾಸಕ್ಕೆ ಆಗುತ್ತಿರುವ ಧಕ್ಕೆಯನ್ನು ಹಾಗೂ ಅಂತರ್ರಾಷ್ಟ್ರೀಯ ಮಟ್ಟದಲ್ಲಿ ರಾಜ್ಯ ಹಾಗೂ ಬೆಂಗಳೂರಿನ ಹೆಸರು ಹಾಳಾಗುತ್ತಿರುವುದನ್ನು ತಡೆಯಲು ಕಾರ್ಯಕ್ರಮ ರೂಪಿಸುತ್ತೇವೆ ಎಂದರು.
ಬಿಜೆಪಿ ಸರಕಾರ ಬಂದ ನಂತರ ಮುಸ್ಲಿಮರು ಮತ್ತು ಕ್ರೈಸ್ತರ ಮೇಲೆ ನಿರಂತರವಾಗಿ ದೌರ್ಜನ್ಯ ಹಾಗೂ ಸುಳ್ಳು ಮೊಕದ್ದಮೆಗಳನ್ನು ಹೂಡಲಾಗುತ್ತಿದೆ. ಅದನ್ನು ಪಕ್ಷ ತೀವ್ರವಾಗಿ ಖಂಡಿಸುತ್ತದೆ. ಕೇಂದ್ರ ಸರಕಾರ ಹಿಂಪಡೆದಿರುವ ಕೃಷಿ ಕಾಯ್ದೆಗಳನ್ನು ರಾಜ್ಯದಲ್ಲಿಯೂ ಹಿಂಪಡೆಯುವಂತೆ ನಿರಂತರ ಹೋರಾಟ ನಡೆಸುತ್ತೇವೆ ಎಂದು ಅವರು ಹೇಳಿದರು.
ಬೂತ್ ಮಟ್ಟದಿಂದ ರಾಜ್ಯಮಟ್ಟದ ವರೆಗೆ ಪಕ್ಷದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುತ್ತೇವೆ. ಜೂ.25ರೊಳಗೆ ಪಕ್ಷದ ಎಲ್ಲ ಸಾಂಸ್ಥಿಕ ಚುನಾವಣೆಗಳನ್ನು ನಡೆಸಲಾಗುವುದು. ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಹಾಗೂ ಪಕ್ಷದ ಪದಾಧಿಕಾರಿಗಳ ಹುದ್ದೆಗಳಲ್ಲಿ 50 ವರ್ಷದೊಳಗಿನವರಿಗೆ ಶೇ.50ರಷ್ಟು ಮೀಸಲಾತಿ ನೀಡಲಾಗುವುದು ಎಂದು ಶಿವಕುಮಾರ್ ತಿಳಿಸಿದರು.
ಕಮಿಷನ್, ಲಂಚದ ಹಾವಳಿಗೆ ಶಾಶ್ವತ ತಡೆ: ಸರಕಾರಿ ನೇಮಕಾತಿಗಳಲ್ಲಿ ಕಮಿಷನ್ ಹಾಗೂ ಲಂಚದ ಹಾವಳಿಯನ್ನು ಶಾಶ್ವತವಾಗಿ ನಿಲ್ಲಿಸಲು ಪಾರದರ್ಶಕ ವ್ಯವಸ್ಥೆ ಜಾರಿ ಮಾಡಲಾಗುವುದು. ಕರಾವಳಿ, ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ, ಬಯಲು ಸೀಮೆ ಹಾಗೂ ಬೆಂಗಳೂರು ನಗರಕ್ಕೆ ಪ್ರತ್ಯೇಕ ಪ್ರಣಾಳಿಕೆ ರಚನೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ವಲಸೆಯನ್ನು ತಡೆಗಟ್ಟಲು ಪ್ರವಾಸೋದ್ಯಮ ಬೆಳೆಸಿ, ಉದ್ಯೋಗಾವಕಾಶ ಸೃಷ್ಟಿಸಲು ಕೇರಳ ಹಾಗೂ ಗೋವಾ ಮಾದರಿಯಲ್ಲಿ ಯೋಜನೆ ರೂಪಿಸಲಾಗುವುದು ಎಂದು ಶಿವಕುಮಾರ್ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೇಂದ್ರದ ಮಾಜಿ ಸಚಿವ ಡಾ.ಕೆ.ರಹ್ಮಾನ್ ಖಾನ್, ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ಡಾ.ಎಂ.ಬಿ.ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರು ಸೇರಿದಂತೆ ಇನ್ನಿತರ ಮುಖಂಡರು ಉಪಸ್ಥಿತರಿದ್ದರು.







