ಕೋವಿಡ್ ಸೋಂಕು ಹೆಚ್ಚಳ; ಐದು ರಾಜ್ಯಗಳಿಗೆ ಪತ್ರ ಬರೆದ ಕೇಂದ್ರ ಸರ್ಕಾರ

ಹೊಸದಿಲ್ಲಿ: ಕಳೆದ ವಾರಕ್ಕೆ ಹೋಲಿಸಿದರೆ ಹೊಸ ಕೋವಿಡ್-19 ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಹೆಚ್ಚಿರುವ ಹಿನ್ನೆಲೆಯಲ್ಲಿ, ಅಗತ್ಯ ಎಚ್ಚರಿಕೆ ಮತ್ತು ಸೋಂಕು ಹರಡುವುದನ್ನು ತಡೆಯಲು ಅಗತ್ಯ ಬಿದ್ದರೆ ಪ್ರತಿಬಂಧಕ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಸರ್ಕಾರ ಐದು ರಾಜ್ಯಗಳಿಗೆ ಪತ್ರ ಬರೆದಿದೆ.
ಕೋವಿಡ್-19 ಪ್ರಕರಣಗಳ ಹೆಚ್ಚಳ ಹಿನ್ನೆಲೆಯಲ್ಲಿ ತಮಿಳುನಾಡು, ಕೇರಳ, ತೆಲಂಗಾಣ, ಕರ್ನಾಟಕ ಮತ್ತು ಮಹಾರಾಷ್ಟ್ರಕ್ಕೆ ಪತ್ರ ಬರೆಯಲಾಗಿದೆ.
ದೇಶದಲ್ಲಿ ದೈನಿಕ ಕೋವಿಡ್ ಪ್ರಕರಣಗಳ ಸಂಖ್ಯೆ ನಾಲ್ಕು ಸಾವಿರದ ಗಡಿ ದಾಟಿ 4033ನ್ನು ತಲುಪಿದೆ. ಕಳೆದ ಮೂರು ತಿಂಗಳ ಹಿಂದೆ ಅಂದರೆ ಮಾರ್ಚ್ 10ರಂದು ದೇಶದಲ್ಲಿ ನಾಲ್ಕು ಸಾವಿರಕ್ಕೂ ಅಧಿಕ ಪ್ರಕರಣ ವರದಿಯಾಗಿತ್ತು.
ದೇಶದ ಒಟ್ಟು ಪ್ರಕರಣಗಳ ಸಂಖ್ಯೆಯಲ್ಲಿ ಈ ಐದು ರಾಜ್ಯಗಳ ಕೊಡುಗೆ ಗಣನೀಯ ಪ್ರಮಾಣದಲ್ಲಿದೆ. ಇದು ಸ್ಥಳೀಯವಾಗಿ ಹರಡುವ ಸೋಂಕು ಲಕ್ಷಣಗಳನ್ನು ಬಿಂಬಿಸುತ್ತದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಆರೋಗ್ಯ ಸ್ಪಂದನೆ ನಿಟ್ಟಿನಲ್ಲಿ ಅಪಾಯ ಸಾಧ್ಯತೆ ಮೌಲ್ಯಮಾಪನ ದೃಷ್ಟಿಕೋನವನ್ನು ಅಳವಡಿಸಿಕೊಳ್ಳಬೇಕು. ಸಾಂಕ್ರಾಮಿಕ ವಿರುದ್ಧದ ಹೋರಾಟದಲ್ಲಿ ಈಗ ಸಾಧಿಸಿರುವ ಸಾಧನೆಯ ಪ್ರಯೋಜನಗಳನ್ನು ಕಳೆದು ಕೊಳ್ಳಬಾರದು ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಪತ್ರದಲ್ಲಿ ಸಲಹೆ ಮಾಡಿದ್ದಾರೆ.
ಕಳೆದ ಮೂರು ತಿಂಗಳಲ್ಲಿ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಇಳಿದಿರುವುದನ್ನು ಕೂಡಾ ಉಲ್ಲೇಖಿಸಿದ್ದಾರೆ. ಆದಾಗ್ಯೂ ಅಲ್ಪಮಟ್ಟಿಗೆ ಇದೀಗ ಏರಿಕೆಯಾಗುತ್ತಿದ್ದು, ಸಾಪ್ತಾಹಿಕ ಧನಾತ್ಮಕತೆ ದರ ಕೂಡ ಹೆಚ್ಚುತ್ತಿರುವುದು ಕಂಡುಬರುತ್ತಿದೆ ಎಂದು ವಿವರಿಸಿದ್ದಾರೆ.







