ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಸರಕಾರ ಒತ್ತು ನೀಡುತ್ತಿದೆ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್

ಬೆಂಗಳೂರು, ಜೂ. 5: ಸರಕಾರಿ ಶಾಲೆಗಳ ಶಿಕ್ಷಣ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಮೂಲಸೌಕರ್ಯ ಅಭಿವೃದ್ಧಿ ಮತ್ತು ಸುಧಾರಣೆಗೆ ಶಿಕ್ಷಣ ಇಲಾಖೆ ಒತ್ತು ನೀಡುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು.
ರವಿವಾರ ‘ವಿ.ಸೋಮಣ್ಣ ಪ್ರತಿಷ್ಠಾನ’ದ ವತಿಯಿಂದ ವಿಜಯನಗರದ ಡಾ.ಬಾಲಗಂಗಾಧರನಾಥ ಸ್ವಾಮೀಜಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ‘ವಿಶ್ವ ಪರಿಸರ ದಿನ’ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಳೆದ ವರ್ಷ ಕೋವಿಡ್-19 ಭೀತಿಯ ಕಾರಣ ದೇಶದ ಹಲವು ರಾಜ್ಯಗಳಲ್ಲಿ ಶಾಲೆಗಳ ಪುನರಾರಂಭಕ್ಕೆ ಹಿಂಜರಿಕೆ ಇತ್ತು. ಇಂತಹ ಸನ್ನಿವೇಶದಲ್ಲಿ ಮಕ್ಕಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ರಾಜ್ಯದಲ್ಲಿ ಶಾಲೆಗಳನ್ನು ಪುನರಾರಂಭಿಸಲಾಯಿತು. ಶಿಕ್ಷಕರು, ಪಾಲಕರ ಸಹಕಾರದಿಂದ ತರಗತಿಗಳು ನಡೆದವು. ಶಾಲಾ ಶಿಕ್ಷಣದಲ್ಲಿ ಮಹತ್ವದ ಘಟ್ಟವಾಗಿರುವ ಎಸೆಸೆಲ್ಸಿ ಪರೀಕ್ಷೆ ಸುಸೂತ್ರವಾಗಿ ನಡೆದು, ಉತ್ತಮ ಫಲಿತಾಂಶವು ಹೊರಬಂದಿದೆ. ಮಕ್ಕಳು ಮುಂದಿನ ಶೈಕ್ಷಣಿಕ ಜೀವನಕ್ಕೆ ಅಣಿಯಾಗುತ್ತಿದ್ದಾರೆ’ ಎಂದು ಅವರು ಹೇಳಿದರು.
‘ರಾಜ್ಯದ ಸರಕಾರಿ ಶಾಲೆಗಳಲ್ಲಿ 7 ಸಾವಿರ ಕೊಠಡಿಗಳನ್ನು ನಿರ್ಮಿಸಲು ಸರಕಾರ ಕ್ರಮ ಕೈಗೊಂಡಿದೆ. ಶಿಥಿಲಗೊಂಡಿರುವ ಕೊಠಡಿಗಳನ್ನು ಆದ್ಯತೆ ಮೇರೆಗೆ ರಿಪೇರಿ ಮಾಡಲು ಮರು ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗಿದೆ. 15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಪರೀಕ್ಷೆ ಮುಗಿದು, ಈಗಾಗಲೇ ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ’ ಎಂದು ಅವರು ಮಾಹಿತಿ ನೀಡಿದರು.
‘ಶಿಕ್ಷಕರ ಕೊರತೆ ಇರುವ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ಸೇವೆ ಪಡೆದುಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ. ಶಾಲೆ ಆರಂಭದ ದಿನಗಳಲ್ಲೇ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲಾಗಿದೆ. ಹೀಗಾಗಿ, ಈ ವರ್ಷ ಶಿಕ್ಷಕರ ಕೊರತೆ ಎದುರಾಗುವುದಿಲ್ಲ’ ಎಂದು ಅವರು ಸ್ಪಷ್ಟಪಡಿಸಿದರು.
‘ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಧಾನಿ ಆಗಿದ್ದಾಗ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿದರು. ಸರ್ವ ಶಿಕ್ಷಣ ಅಭಿಯಾನದ ಮೂಲಕ ದೇಶದ ಮೂಲೆಮೂಲೆಗಳಲ್ಲಿ ಶಾಲೆಗಳನ್ನು ಆರಂಭಿಸಿ ಅಕ್ಷರ ಕ್ರಾಂತಿಗೆ ನಾಂದಿ ಹಾಡಿದರು. ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಲಾಯಿತು. ಶೌಚಗೃಹಗಳ ನಿರ್ಮಾಣಕ್ಕೆ ವೇಗ ನೀಡಲಾಯಿತು. ಇದರಿಂದ ಶಾಲೆಗೆ ಬರುವ ಹೆಣ್ಣು ಮಕ್ಕಳ ಸಂಖ್ಯೆಯಲ್ಲಿ ಏರಿಕೆಯಾಯಿತು’ ಎಂದರು.
‘2014ರಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಅಧಿಕಾರ ಬಂದ ಬಳಿಕ ಮತ್ತೆ ಶಿಕ್ಷಣ ಕ್ಷೇತ್ರದ ಬೆಳವಣಿಗೆಗೆ ವಿಶೇಷ ಒತ್ತು ನೀಡಲಾಯಿತು. ನೂತನ ರಾಷ್ಟ್ರೀಯ ಶಿಕ್ಷಣ ನೀತಿ ತರಲು ಹಿರಿಯ ವಿಜ್ಞಾನ ಕಸ್ತೂರಿ ರಂಗನ್ ಅವರ ನೇತೃತ್ವದಲ್ಲಿ ಸಮಿತಿ ರಚಿಸಲಾಯಿತು. ಸುಧೀರ್ಘ ಕಾಲ ಅಧ್ಯಯನ, ಚರ್ಚೆಯ ಬಳಿಕ ರಾಷ್ಟ್ರೀಯ ಶಿಕ್ಷಣ ನೀತಿಗೆ ಒಂದು ರೂಪ ನೀಡಿ ಅಂತಿಮಗೊಳಿಸಲಾಯಿತು. ಭಾರತದ ವರ್ತಮಾನ ಮತ್ತು ಭವಿಷ್ಯಕ್ಕೆ ಅಗತ್ಯವಾಗಿರುವ ಶಿಕ್ಷಣ ನೀಡಬೇಕು. ಸಂಸ್ಕಾರ ಮತ್ತು ಭಾರತೀಯತೆಯನ್ನು ಒಳಗೊಂಡ ಶಿಕ್ಷಣ ನೀಡಲು ‘ರಾಷ್ಟ್ರೀಯ ಶಿಕ್ಷಣ ನೀತಿ-2020’ ಅನುಷ್ಟಾನಗೊಳಿಸಲಾಗುತ್ತಿದೆ’ ಎಂದು ಅವರು ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಪುಟ್ಟಣ್ಣ, ಅ. ದೇವೇಗೌಡ ಹಾಗೂ ವಿ. ಸೋಮಣ್ಣ ಪ್ರತಿಷ್ಠಾನದ ಅಧ್ಯಕ್ಷರಾದ ಶೈಲಜಾ ಸೋಮಣ್ಣ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.
ಈ ಶೈಕ್ಷಣಿಕ ವರ್ಷದಿಂದಲೇ ಅಂಗನವಾಡಿಗಳಲ್ಲಿ ‘ರಾಷ್ಟ್ರೀಯ ಶಿಕ್ಷಣ ನೀತಿ-2020’ ಪಠ್ಯಕ್ರಮ ಅನುಸಾರ ಶಿಕ್ಷಣ ನೀಡುವ ಗುರಿ ಹೊಂದಲಾಗಿದೆ. ಹಂತ ಹಂತವಾಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ‘ರಾಷ್ಟ್ರೀಯ ಶಿಕ್ಷಣ ನೀತಿ-2020’ ಅನುμÁ್ಠನಗೊಳಿಸಲಾಗುತ್ತದೆ. ಅದಕ್ಕಾಗಿ ಕೈಗೊಂಡಿರುವ ಸಿದ್ಧತೆಗಳಿಗೆ ಕೇಂದ್ರ ಶಿಕ್ಷಣ ಇಲಾಖೆಯಿಂದ ಮೆಚ್ಚುಗೆ ವ್ಯಕ್ತವಾಗಿದೆ. ರಾಜ್ಯದಲ್ಲಿ ಎನ್ಇಪಿ ಅನುμÁ್ಠನಕ್ಕಾಗಿ ಪೊಸಿಷನ್ ಪೇಪರ್ಗಳನ್ನು ಸಿದ್ಧಪಡಿಸಿ ಕೇಂದ್ರ ಶಿಕ್ಷಣ ಇಲಾಖೆಗೆ ಸಲ್ಲಿಸಲಾಗಿದೆ.
-ಬಿ.ಸಿ. ನಾಗೇಶ್, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ







