ಉಡುಪಿ: ಮೀನುಗಾರರ ಸಹಕಾರ ಸಂಘಗಳಿಗೆ ತರಬೇತಿ ಶಿಬಿರ
ಉಡುಪಿ, ಜೂ.28: ರಾಜ್ಯ ಸಹಕಾರ ಮಹಾಮಂಡಳ, ಜಿಲ್ಲಾ ಸಹಕಾರ ಯೂನಿಯನ್ ವತಿಯಿಂದ ಸಹಕಾರ ಇಲಾಖೆ ಆಶ್ರಯದಲ್ಲಿ ಜಿಲ್ಲೆಯ ಎಲ್ಲ ಪ್ರಾಥಮಿಕ ಮೀನುಗಾರರ ಸಹಕಾರ ಸಂಘಗಳ ಅಧ್ಯಕ್ಷರು, ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಆಡಳಿತ ನಿರ್ವಹಣಾ ತರಬೇತಿ ಶಿಬಿರವನ್ನು ಮಂಗಳವಾರ ಉಡುಪಿಯ ಜಗನ್ನಾಥ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ ಮಾತನಾಡಿ, ಆಡಳಿತ ಮಂಡಳಿ ತೆಗೆದುಕೊಂಡ ನಿರ್ಧಾರವನ್ನು ಸಿಇಒ ಅವರು ವ್ಯವಸ್ಥಿತವಾಗಿ ಅನುಷ್ಠಾನಗೊಳಿಸುವ ಮೂಲಕ ಸಂಘದ ಏಳಿಗೆಗೆ ಕಾರಣವಾಗುತ್ತಾರೆ. ಈ ನಿಟ್ಟಿನಲ್ಲಿ ತರಬೇತಿ ಅತ್ಯಂತ ಅವಶ್ಯಕವಾಗಿದ್ದು, ಯಾರು ಸಹ ಗೈರಾಗದೆ ತರಬೇತಿಯನ್ನು ಪಡೆದುಕೊಳ್ಳುವುದು ಉತ್ತಮ ಎಂದರು.
ಶಿಬಿರವನ್ನು ಜಿಲ್ಲಾ ಸಹಕಾರ ಸಂಘ ಉಪ ನಿಬಂಧಕ ಲಕ್ಷ್ಮೀನಾರಾಯಣ ಜೆ.ಎನ್. ಉದ್ಘಾಟಿಸಿದರು. ಆಡಳಿತ ಮಂಡಳಿ ಸದಸ್ಯರಾದ ಕಟಪಾಡಿ ಶಂಕರ ಪೂಜಾರಿ, ಶ್ರೀಧರ ಪಿ. ಎಸ್., ಅಶೋಕ್ ಕುಮಾರ್ ಶೆಟ್ಟಿ ಬೆಳ್ಳಂಪಳ್ಳಿ, ಹರೀಶ್ ಕಿಣಿ, ಮನೋಜ್. ಎಸ್. ಕರ್ಕೇರ, ಮಲ್ಪೆ ಯಾಂತ್ರಿಕೃತ ದೋಣಿ ಮೀನುಗಾರರ ಸಂಘದ ಅಧ್ಯಕ್ಷ ರಾಮಚಂದ್ರ ಕುಂದರ್ ಉಪಸ್ಥಿತರಿದ್ದರು.
ಮೀನು ಮಾರಾಟ ಮಹಾಮಂಡಳ ವ್ಯವಸ್ಥಾಪಕ ನಿರ್ದೇಶಕ ಹರೀಶ್ ಕುಮಾರ್ ಮೀನುಗಾರರಿಗೆ ಮಹಾಮಂಡಳದಿಂದ ದೊರಕುವ ಸೌಲಭ್ಯಗಳ ಕುರಿತು ಹಾಗು ಸಹಕಾರಿ ಯೂನಿಯನ್ ವಕೀಲ ಶ್ರೀಧರ ಪಿ. ಎಸ್. ಸಹಕಾರ ಸಂಘಗಳಲ್ಲಿ ದಾಖಲೆ ಪತ್ರಗಳನ್ನು ಇಡುವ ಕ್ರಮದ ಬಗ್ಗೆ ಉಪನ್ಯಾಸ ನೀಡಿದರು.