ಉಡುಪಿ: ಜು.1ರಂದು ಪತ್ರಿಕಾ ದಿನಾಚರಣೆ, ಪೋಟೊಗ್ರಫಿ ಕಾರ್ಯಾಗಾರ
ಉಡುಪಿ : ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಕೆನಾನ್ ಸಂಸ್ಥೆಯ ಸಹಭಾಗಿತ್ವದಲ್ಲಿ ಜು.೧ರಂದು ಪತ್ರಿಕಾ ದಿನಾಚರಣೆ ಹಾಗೂ ಪೋಟೊಗ್ರಫಿ ಕುರಿತು ಕಾರ್ಯಾಗಾರವೊಂದನ್ನು ಆಯೋಜಿಸಿದೆ.
ಉಡುಪಿ ಕರಾವಳಿ ಬೈಪಾಸ್ ಬಳಿ ಇರುವ ಮಣಿಪಾಲ ಇನ್ ಹೊಟೇಲ್ ಸಭಾಂಗಣದಲ್ಲಿ ಬೆಳಗ್ಗೆ ೧೦:೩೦ಕ್ಕೆ ಪತ್ರಿಕಾ ದಿನಾಚರಣೆಯನ್ನು ಉಡುಪಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್.ಉದ್ಘಾಟಿ ಸಲಿದ್ದಾರೆ. ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ಅಧ್ಯಕ್ಷತೆಯಲ್ಲಿ ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್, ಮಂಗಳೂರಿನ ಉದ್ಯಮಿ ಸುಧಾಕರ ಶೆಣೈ ಹಾಗೂ ಪತ್ರಕರ್ತ ಕಿರಣ್ ಮಂಜನಬೈಲ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಜಿಲ್ಲೆಯ ಹಿರಿಯ ಪತ್ರಕರ್ತ ಎಸ್.ಜನಾರ್ದನ ಮರವಂತೆ ಅವರನ್ನು ಪತ್ರಿಕಾ ದಿನಾಚರಣೆಯ ಅಂಗವಾಗಿ ಸನ್ಮಾನಿಸಲಾಗುವುದು. ಅದೇ ರೀತಿ ಎಸೆಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕ ಗಳಿಸಿದ ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರವನ್ನು ನೀಡಲಾಗುವುದು.
ಸಭಾ ಕಾರ್ಯಕ್ರಮದ ಬಳಿಕ ಪತ್ರಿಕಾ ಛಾಯಾಗ್ರಾಹಕ ಆಸ್ಟ್ರೋ ಮೋಹನ್ ಅವರು ‘ಛಾಯಾಚಿತ್ರ ಪತ್ರಿಕೋದ್ಯಮದಲ್ಲಿ ಆಧುನಿಕ ಕೆಮರಾಗಳ ಪಾತ್ರ‘ ಕುರಿತು ಕಾರ್ಯಾಗಾರ ನಡೆಸಿಕೊಡಲಿದ್ದಾರೆ. ಸಂಘದ ಪ್ರಕಟಣೆ ತಿಳಿಸಿದೆ.







