ಭೀಮಾ ಕೋರೆಗಾಂವ್ ಪ್ರಕರಣ: ಶಾಶ್ವತ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವರವರ ರಾವ್
![ಭೀಮಾ ಕೋರೆಗಾಂವ್ ಪ್ರಕರಣ: ಶಾಶ್ವತ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವರವರ ರಾವ್ ಭೀಮಾ ಕೋರೆಗಾಂವ್ ಪ್ರಕರಣ: ಶಾಶ್ವತ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವರವರ ರಾವ್](https://www.varthabharati.in/sites/default/files/images/articles/2022/06/30/340819-1656611602.jpg)
ವರವರ ರಾವ್ (PTI)
ಹೊಸದಿಲ್ಲಿ: ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಆರೋಪಿಯಾಗಿರುವ ಸಾಮಾಜಿಕ ಕಾರ್ಯಕರ್ತ ವರವರ ರಾವ್ ಅವರು ವೈದ್ಯಕೀಯ ಕಾರಣಗಳಿಗಾಗಿ ಶಾಶ್ವತ ಜಾಮೀನು ಕೋರಿ ಗುರುವಾರ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು bar&bench ವರದಿ ಮಾಡಿದೆ.
ಜುಲೈ 11 ರಂದು ಅರ್ಜಿಯ ವಿಚಾರಣೆ ನಡೆಸುವುದಾಗಿ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಜೆಬಿ ಪರ್ದಿವಾಲಾ ಅವರ ರಜಾಕಾಲದ ಪೀಠ ತಿಳಿಸಿದೆ.
ಎಪ್ರಿಲ್ 13 ರಂದು ವೈದ್ಯಕೀಯ ಕಾರಣಗಳಿಗಾಗಿ ಶಾಶ್ವತ ಜಾಮೀನು ಕೋರಿ ಸಲ್ಲಿಸಿದ ಮನವಿಯನ್ನು ತಿರಸ್ಕರಿಸಿದ ಬಾಂಬೆ ಹೈಕೋರ್ಟ್ನ ಆದೇಶವನ್ನು ರಾವ್ ಪ್ರಶ್ನಿಸಿದ್ದರು. ಬಳಿಕ, ನ್ಯಾಯಾಲಯವು ರಾವ್ ಅವರ ತಾತ್ಕಾಲಿಕ ಜಾಮೀನನ್ನು ಮೂರು ತಿಂಗಳವರೆಗೆ ವಿಸ್ತರಿಸಿದ್ದು, ಆದ್ದರಿಂದ ಅವರು ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು .
ಅವರು ನರ ಸಂಬಂಧಿತ ಕಾಯಿಲೆಗಳು, ಲಕ್ಷಣರಹಿತ ಪಾರ್ಕಿನ್ಸನ್ ಕಾಯಿಲೆಯಿಂದ ಉಂಟಾಗುವ ಹೊಟ್ಟೆ ನೋವಿನಿಂದ ಕೂಡ ಬಳಲುತ್ತಿದ್ದಾರೆ ಎಂದು ವರದಿಯಾಗಿದೆ.
2018 ರಲ್ಲಿ ಪುಣೆ ಸಮೀಪದ ಭೀಮಾ ಕೋರೆಗಾಂವ್ ಗ್ರಾಮದಲ್ಲಿ ಜಾತಿ ಹಿಂಸಾಚಾರವನ್ನು ಹುಟ್ಟುಹಾಕಲು ಸಂಚು ರೂಪಿಸಿದ ಆರೋಪದ ಮೇಲೆ UAPA ಕಾಯಿದೆಯಡಿಯಲ್ಲಿ ಪ್ರಕರಣ ದಾಖಲಾದ 16 ಹೋರಾಟಗಾರರಲ್ಲಿ ರಾವ್ ಕೂಡಾ ಒಬ್ಬರು. ಕಳೆದ ವರ್ಷ ಫೆಬ್ರವರಿಯಲ್ಲಿ ವೈದ್ಯಕೀಯ ಕಾರಣಗಳಿಗಾಗಿ ಅವರಿಗೆ ಜಾಮೀನು ನೀಡಲಾಗಿತ್ತು.