10 ದಿನದೊಳಗೆ ರಾ.ಹೆದ್ದಾರಿ ಸಮಸ್ಯೆಗಳನ್ನು ಸರಿಪಡಿಸಿ: ಉಡುಪಿ ಡಿಸಿ ಕೂರ್ಮಾರಾವ್

ಉಡುಪಿ : ಜಿಲ್ಲೆಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 66 ಅಲ್ಲದೇ 169 ಮತ್ತು 169ಎಯಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆಯಾಗಿರುವ ಎಲ್ಲಾ ರಸ್ತೆಗಳ ಮೂಲಭೂತ ಸಮಸ್ಯೆಗಳನ್ನು ಇನ್ನು 10 ದಿನಗಳ ಒಳಗೆ ಸಂಪೂರ್ಣವಾಗಿ ಬಗೆಹರಿಸಿ, ಈ ಕುರಿತ ಸಂಪೂರ್ಣ ವರದಿಯನ್ನು ನೀಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಶುಕ್ರವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಜಿಲ್ಲಾಡಳಿತ ಸೂಚಿಸುವ ಯಾವುದೇ ಸಭೆಗಳಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಸಭೆಗೂ ಸಹ ಗೈರುಹಾಜರಾಗುತ್ತಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿ, ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟೋಲ್ ಸಂಗ್ರಹ ಮತ್ತು ಇತರೆ ಕಾರ್ಯಗಳನ್ನು ಸುಗಮವಾಗಿ ಮಾಡಲು ಜಿಲ್ಲಾಡಳಿತದ ನೆರವು ಬೇಕಿದ್ದಲ್ಲಿ, ಜಿಲ್ಲಾಡಳಿತ ನೀಡುವ ಎಲ್ಲಾ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಮತ್ತು ಪ್ರಸ್ತುತ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಂಡು ಬರುತ್ತಿರುವ ಎಲ್ಲಾ ಸಮಸ್ಯೆಗಳನ್ನು ಇನ್ನು 10 ದಿನದ ಒಳಗೆ ಸಂಪೂರ್ಣವಾಗಿ ಬಗೆಹರಿಸಿ, ಈ ಸಮಸ್ಯೆಗಳನ್ನು ಸರಿಪಡಿಸಿದ ದಿನಾಂಕ ಮತ್ತು ಸಮಯವನ್ನು ಒಳಗೊಂಡ ಛಾಯಾಚಿತ್ರಗಳು ಹಾಗೂ ವರದಿಯನ್ನು ಸಲ್ಲಿಸಬೇಕು. ಮುಂದಿನ ಸಭೆಗೆ ಹಾಗೂ ಜಿಲ್ಲಾಡಳಿತ ಸೂಚಿಸುವ ಎಲ್ಲಾ ಸಭೆಗಳಿಗೆ ಎನ್.ಎಚ್. ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರುವಂತೆ ಎಚ್ಚರಿಕೆ ನೀಡಿದರು.
ರಾಷ್ಟ್ರೀಯ ಹೆದ್ದಾರಿ ಪಕ್ಕದ ಚರಂಡಿಗಳಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗಲು ತೊಂದರೆ ಇರುವ ಅಡೆತಡೆಗಳನ್ನು ತಕ್ಷಣವೇ ಸರಿಪಡಿಸಬೇಕು. ತುರ್ತು ಅಗತ್ಯವಿರುವ ಕಡೆಗಳಲ್ಲಿ ತಕ್ಷಣವೇ ಬೀದಿದೀಪಗಳನ್ನು ಅಳವಡಿಸ ಬೇಕು. ಹೆದ್ದಾರಿ ಪಕ್ಕದಲ್ಲಿ ನೀರು ಹರಿಯಲು ಮತ್ತು ಸುಗಮ ಸಂಚಾರಕ್ಕೆ ತಡೆ ಉಂಟು ಮಾಡುವ ಗಿಡಗಳನ್ನು ಕೂಡಲೇ ತೆರವುಗೊಳಿಸಬೇಕು. ಪ್ಲೈಓವರ್ಗಳ ಮೇಲೆ ನೀರು ನಿಲ್ಲದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.
ಹೆದ್ದಾರಿಯಲ್ಲಿ ಅವೈಜ್ಞಾನಿಕ ಕಾಮಗಾರಿಯ ಕಾರಣ ಅಪಘಾತಗಳು ಸಂಭವಿಸಿ, ಸಾವು ಸಂಭವಿಸಿದ್ದಲ್ಲಿ ಸಂಬಂಧಪಟ್ಟ ಹೆದ್ದಾರಿ ಅಧಿಕಾರಿಗಳ ಮೇಲೆ ಕೇಸು ದಾಖಲಿಸುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದರು.
ಹೆದ್ದಾರಿ ಸಮಸ್ಯೆಗಳ ಬಗ್ಗೆ ಜಿಲ್ಲಾಡಳಿತ ಮತ್ತು ಸಾರ್ವಜನಿಕರು ಸಲ್ಲಿಸುವ ದೂರುಗಳನ್ನು ದಾಖಲಿಸಿ ಅವುಗಳಿಗೆ ಕಾಲಮಿತಿಯಲ್ಲಿ ಪರಿಹಾರ ಒದಗಿಸ ಬೇಕು. ಇದಕ್ಕಾಗಿ ದೂರು ನಿರ್ವಹಣಾ ವ್ಯವಸ್ಥೆಯನ್ನು ಅಳವಡಿಸಿಕೊಂಡು, ಅದರಲ್ಲಿ ದೂರುಗಳಿಗೆ ಸಂಬಂಧಪಟ್ಟ ಎಲ್ಲಾ ವಿವರಗಳನ್ನು ದಾಖಲಿಸಬೇಕು. ನಿಗದಿತ ಅವಧಿಯೊಳಗೆ ಸಮಸ್ಯೆಗಳನ್ನು ಬಗೆಹರಿಸದ ಸಿಬ್ಬಂದಿಗಳ ವೇತನ ಮತ್ತು ಭತ್ಯೆಗಳನ್ನು ತಡೆ ಹಿಡಿಯುವಂತೆ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಅವರು ತಿಳಿಸಿದರು.
ಹೆದ್ದಾರಿಯಲ್ಲಿನ ಸಮಸ್ಯೆಗಳ ಪರಿಹಾರಕ್ಕೆ ಹೆಚ್ಚಿನ ಸಿಬ್ಬಂದಿ ಮತ್ತು ಯಂತ್ರೋಪಕರಣಗಳನ್ನು ಅಳವಡಿಸಿಕೊಂಡು ಜಿಲ್ಲಾಡಳಿತ ಸೂಚಿಸುವ ಕಾಲಮಿತಿಯಲ್ಲಿ ಸಮಸ್ಯೆಗಳನ್ನು ಬಗೆಹರಿಸಬೇಕು. ಕುಂದಾಪುರದ ಸಂಗಂ ಜಂಕ್ಷನ್ನಲ್ಲಿ ಸೂಕ್ತ ಚರಂಡಿ ವ್ಯವಸ್ಥೆ ಕಲ್ಪಿಸಿ ನೀರು ಹರಿದು ಹೋಗಲು ವ್ಯವಸ್ಥೆ ಹಾಗೂ ವಾಹನ ಸಂಚಾರಕ್ಕೆ ಅನುಕೂಲವಾಗುವಂತೆ ಬೀದಿದೀಪದ ವ್ಯವಸ್ಥೆ ಮಾಡಬೇಕು. ಸಾಲಿಗ್ರಾಮ ಬಳಿಯ ಸರ್ವಿಸ್ ರಸ್ತೆ ಕಾಮಗಾರಿ ಸೇರಿದಂತೆ ಬಾಕಿ ಇರುವ ಎಲ್ಲಾ ಅಪೂರ್ಣ ಕಾಮಗಾರಿಗಳನ್ನು ಶೀಘ್ರದಲ್ಲಿ ಮುಕ್ತಾಯ ಗೊಳಿಸಬೇಕು. ಮಳೆ ನಿಂತ ಕೂಡಲೇ ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯ ಎಲ್ಲಾ ರಸ್ತೆಗಳ ದುರಸ್ಥಿ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಈಗಾಗಲೇ ಕೈಗೊಂಡಿರುವ ಕುಡಿಯುವ ನೀರಿನ ಪೈಪ್ಲೈನ್ ಕಾಮಗಾರಿಗಳಿಗೆ ರೈಲ್ವೆ ಮತ್ತು ರಾಷ್ಟ್ರೀಯ ಹೆದ್ದಾರಿ ಇಲಾಖೆಗಳಿಂದ ಅಗತ್ಯ ಸಹಕಾರ ನೀಡುವಂತೆ ಜಿಲ್ಲಾಧಿಕಾರಿ ಸೂಚನೆಗಳನ್ನು ನೀಡಿದರು.
ಸಭೆಯಲ್ಲಿ ಎಎಸ್ಪಿ ಸಿದ್ದಲಿಂಗಪ್ಪ, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಲಿಂಗೇಗೌಡ, ನವಯುಗ ಮತ್ತು ಐಆರ್ಬಿಯ ಇಂಜನಿಯರ್ಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.








