ಕಾಪು: ಹಲವು ಗ್ರಾಮಗಳು ಜಲಾವೃತ: ನೆರೆಯ ಭೀತಿ
ಕಾಪು : ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆ ಯಿಂದಾಗಿ ಕಾಪು ಪರಿಸರದ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ನೆರೆಯ ಭೀತಿ ಎದುರಾಗಿದೆ.
ಕಾಪು ತಾಲೂಕಿನಾದ್ಯಂತ ಮಳೆ ತೀವ್ರಗೊಂಡಿದ್ದು ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಕಾಪು, ಶಿರ್ವ, ಪಡುಬಿದ್ರಿ, ಕಟಪಾಡಿ, ಉದ್ಯಾವರ, ಇನ್ನಂಜೆ, ಬೆಳಪು, ಮಜೂರು, ಕುಂಜೂರು ಸಹಿತ ವಿವಿಧೆಡೆ ನೆರೆಯ ಭೀತಿ ಎದುರಾಗಿದೆ.
ನೆರೆ ಪೀಡಿತ ಪ್ರದೇಶಗಳಿಗೆ ಕಾಪು ತಹಶೀಲ್ದಾರ್ ಶ್ರೀನಿವಾಸ ಮೂರ್ತಿ ಕುಲಕರ್ಣಿ ಸಹಿತ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಪು ತಾಲೂಕಿನಾದ್ಯಂತ ವ್ಯಾಪಕವಾಗಿ ಮಳೆ ಸುರಿಯುತ್ತಿದೆ. ಕಾಪು ತಾಲೂಕಿನಲ್ಲಿ ಇಲ್ಲಿವರೆಗೆ ಸುಮಾರು ೧೫-೨೦ ಮನೆಗಳಿಗೆ ಹಾನಿಯುಂಟಾಗಿದ್ದು ಎನ್ಡಿಆರ್ಎಫ್ ಅನುದಾನದಲ್ಲಿ ಪರಿಹಾರ ಧನ ವಿತರಿಸಲಾಗುವುದು. ನೆರೆ ಪೀಡಿತ ಪ್ರದೇಶಗಳಲ್ಲಿ ಸಿಲುಕುವ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ತೆರಳಲು ಸೂಕ್ತ ಕ್ರಮ ವಹಿಸಲಾಗುವುದು ಎಂದು ತಹಶೀಲ್ದಾರ್ ತಿಳಿಸಿದರು.
Next Story





