ಕೈದಿಗಳ ಕೂಲಿ ಮೊತ್ತ ಹೆಚ್ಚಿಸಿ ಆದೇಶ ಹೊರಡಿಸಿಲ್ಲ: ಗೃಹ ಸಚಿವ ಆರಗ ಜ್ಞಾನೇಂದ್ರ
ಬೆಂಗಳೂರು, ಜು.20: ರಾಜ್ಯದ ಕಾರಾಗೃಹಗಳಲ್ಲಿ ಸುಮಾರು 15 ಸಾವಿರ ಕೈದಿಗಳಿದ್ದಾರೆ. ಕೈದಿಗಳಿಗೆ ಕೂಲಿ ಮೊತ್ತವನ್ನು 200 ರೂ.ನಿಂದ ಸ್ವಲ್ಪ ಹೆಚ್ಚಳ ಮಾಡುವ ಕುರಿತು ಪ್ರಸ್ತಾವನೆ ಮಾಡಲಾಗಿದೆಯೇ ಹೊರತು, ಈವರೆಗೆ ಆದೇಶ ಹೊರಡಿಸಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟಪಡಿಸಿದ್ದಾರೆ.
ಈ ಸಂಬಂಧ ಟ್ವೀಟ್ಗಳನ್ನು ಮಾಡಿರುವ ಅವರು, ಜೈಲಿನಲ್ಲಿ ಪ್ರತಿ ಕೈದಿಯೂ ಕೆಲಸ ಮಾಡಬೇಕಾಗುತ್ತದೆ. ವಿವಿಧ ಕೆಲಸಗಳ ಮೂಲಕ ಕೈದಿಗಳ ಖಿನ್ನತೆ ಹೋಗಲಾಡಿಸಿ ಅವರ ಮನಃಪರಿವರ್ತನೆ ಮಾಡುವುದು ಇದರ ಉದ್ದೇಶ. ಈ ಮೂಲಕ ಇಲಾಖೆಗೆ ಆದಾಯವೂ ಬರುತ್ತಿದೆ. ಕೈದಿಯಾದ ಮಾತ್ರಕ್ಕೆ ಅವರಿಂದ ಜೀತ ಮಾಡಿಸಿಕೊಳ್ಳುವ ಹಕ್ಕು ಯಾವ ಸರಕಾರಕ್ಕೂ ಇಲ್ಲ ಎಂದು ಅವರು ಹೇಳಿದ್ದಾರೆ.
ಈ ಕಾರಣಕ್ಕಾಗಿ ಅವರಿಂದಲೇ ಬರುತ್ತಿರುವ ಲಾಭ ಬಳಸಿ ಅವರಿಗೆ ಸ್ವಲ್ಪ ಕೂಲಿ ಹೆಚ್ಚಿಸುವ ಯೋಚನೆ ಮಾಡಲಾಗಿದೆ. ಆದರೆ ಈ ಬಗ್ಗೆ ತಪ್ಪು ಸಂದೇಶ ಹರಡುವುದು ಕಂಡುಬಂದಿದೆ. ಈ ರೀತಿ ತಪ್ಪು ಸಂದೇಶ ಹರಡುವುದು ಸಮಾಜದ ಹಿತದೃಷ್ಟಿಯಿಂದ ಸರಿಯಲ್ಲ ಎಂದು ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ರಾಜ್ಯದ ಕಾರಾಗೃಹಗಳಲ್ಲಿ ಸುಮಾರು 15 ಸಾವಿರ ಕೈದಿಗಳಿದ್ದಾರೆ. ಕೈದಿಗಳಿಗೆ ಕೂಲಿ ಮೊತ್ತವನ್ನು 200 ರೂ. ನಿಂದ ಸ್ವಲ್ಪ ಹೆಚ್ಚಳ ಮಾಡುವ ಕುರಿತು ಪ್ರಸ್ತಾವನೆ ಮಾಡಲಾಗಿದೆಯೇ ಹೊರತು, ಈವರೆಗೆ ಆದೇಶ ಹೊರಡಿಸಿಲ್ಲ.@CMofKarnataka
— Araga Jnanendra (@JnanendraAraga) July 20, 2022