ಪ್ರವೀಣ್ ಹತ್ಯೆ ಆರೋಪಿಗಳ ಪತ್ತೆಗೆ 5 ತಂಡಗಳ ರಚನೆ: ಎಸ್ಪಿ

ಪ್ರವೀಣ್ ನೆಟ್ಟಾರು
ಬೆಳ್ಳಾರೆ, ಜು.27: ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳ ಪತ್ತೆಗಾಗಿ ಐದು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೃಷಿಕೇಶ್ ಸೋನಾವಣೆ ತಿಳಿಸಿದ್ದಾರೆ.
ಇಂದು ಬೆಳಗ್ಗೆ ಬೆಳ್ಳಾರೆಗೆ ಭೇಟಿ ನೀಡಿದ ಎಸ್ಪಿ ಪರಿಸ್ಥಿತಿಯ ಅವಲೋಕನ ನಡೆಸಿ, ಬಂದೋಬಸ್ತ್ ವ್ಯವಸ್ಥೆಯನ್ನು ಪರಿಶೀಲಿಸಿದರು.
ಈ ಸಂದರ್ಭ ಮಾತನಾಡಿದ ಅವರು, ಆರೋಪಿಗಳ ಜಾಡು ಹಿಡಿದು ಮೂರು ತಂಡಗಳು ಈಗಾಗಲೇ ಕೇರಳ, ಮಡಿಕೇರಿ, ಹಾಸನಕ್ಕೆ ತೆರಳಿವೆ. ಕೇರಳ ಗಡಿ ಪ್ರದೇಶ ಹಾಗೂ ಪುತ್ತೂರಿನ ಸುತ್ತಮುತ್ತ ನಾಕಾಬಂದಿ ಹಾಕಿ ವಾಹನಗಳನ್ನು ಶೋಧ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ಮಂಗಳವಾರ ರಾತ್ರಿ ಬೈಕಿನಲ್ಲಿ ಬಂದ ಮೂವರು ದುಷ್ಕರ್ಮಿಗಳು ಕೊಲೆಗೈದು ಪರಾರಿಯಾಗಿದ್ದಾರೆ. ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story