ಬೆಂಗಳೂರು | ಫ್ರೀಡಂ ಪಾರ್ಕ್ ಬಿಟ್ಟು ನಗರದ ಬೇರೆಲ್ಲೂ ಪ್ರತಿಭಟನೆ ನಡೆಸಬಾರದು: ಹೈಕೋರ್ಟ್ ಆದೇಶ

ಬೆಂಗಳೂರು, ಆ.1: ನಗರದ ಸ್ವಾತಂತ್ರ್ಯ ಉದ್ಯಾನ(ಫ್ರೀಡಂ ಪಾರ್ಕ್) ಹೊರತುಪಡಿಸಿ ಬೇರಾವುದೇ ಭಾಗದಲ್ಲಿ, ರಾಜಕೀಯ ಅಥವಾ ರಾಜಕೀಯೇತರ ಸಂಘಟನೆಗಳು ಮೆರವಣಿಗೆ, ಪ್ರತಿಭಟನೆ, ಬಹಿರಂಗ ಸಭೆ ನಡೆಸದಂತೆ ನಿರ್ಬಂಧ ವಿಧಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಬೆಂಗಳೂರಿನಲ್ಲಿ ಪ್ರತಿಭಟನೆ, ಮೆರವಣಿಗೆಗೆ ನಿರ್ಬಂಧ ಸಂಬಂಧ ಹೈಕೋರ್ಟ್ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇತ್ಯರ್ಥಪಡಿಸಿದ್ದು, ನಿಯಮ ಜಾರಿಗೆ ತರುವುದು ಸರಕಾರದ ಜವಾಬ್ದಾರಿಯಾಗಿದೆ. ಆದೇಶ ಉಲ್ಲಂಘಿಸಿದವರ ವಿರುದ್ಧ ಕ್ರಮ ಮುಂದುವರಿಸಬೇಕು. ಪ್ರತಿಭಟನೆ, ಮೆರವಣಿಗೆಗೆ ಫ್ರೀಡಂ ಪಾರ್ಕ್ನಲ್ಲಿ ಮಾತ್ರ ಅವಕಾಶ ನೀಡಬೇಕು ಎಂದು ಸರಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಸೂಚನೆ ನೀಡಿದೆ.
ಹೈಕೋರ್ಟ್ ವಿಭಾಗೀಯ ಪೀಠದ ಆದೇಶದಂತೆ ಕ್ರಮಕೈಗೊಳ್ಳಲಾಗುವುದು ಎಂದು ಸರಕಾರದ ಪರ ವಕೀಲರು ಹೇಳಿದ್ದು, ಕರ್ನಾಟಕ ಪೊಲೀಸ್ ಕಾಯ್ದೆಯಡಿ ನಿಯಮ ರೂಪಿಸಲಾಗಿದೆ. ನಿಯಮ ಉಲ್ಲಂಘಿಸಿದವರ ವಿರುದ್ಧ 27 ಎಫ್ಐಆರ್ ದಾಖಲಿಸಲಾಗಿದೆ ಎಂದು ನ್ಯಾಯಪೀಠಕ್ಕೆ ರಾಜ್ಯ ಸರಕಾರ ಹೇಳಿದೆ.
‘ಸ್ವಾತಂತ್ರ್ಯ ಉದ್ಯಾನದಲ್ಲಿ ಸಂಘಟಿತ ರೂಪದಲ್ಲಿ ಪ್ರತಿಭಟನೆ, ಧರಣಿ, ಸಭೆ ನಡೆಸುವ ಮೂಲಕ ವಾಹನ ಸಂಚಾರ ಹೆಚ್ಚಿರುವ ಸಮಯದಲ್ಲಿ ಯಾವುದೇ ರೀತಿಯ ಸಮಸ್ಯೆಯಾಗದಂತೆ ಸರಕಾರ ನೋಡಿಕೊಳ್ಳಬೇಕು. ಒಂದೊಮ್ಮೆ ಅಂತಹ ಬೆಳವಣಿಗೆ ಕಂಡುಬಂದರೆ ತಕ್ಷಣವೇ ಅದಕ್ಕೆ ನಿರ್ಬಂಧ ವಿಧಿಸಬೇಕು’ ಎಂದು ನ್ಯಾಯಪೀಠ ತಾಕೀತು ಮಾಡಿದೆ.
ಕರ್ನಾಟಕ ಪೊಲೀಸ್ ಕಾಯ್ದೆ-1963ರ ಕಲಂ 103 ಮತ್ತು ಐಪಿಸಿ ಕಲಂ 188ರ ಅಡಿ ಇ–ಗೆಜೆಟೆಡ್ ನಿಯಮಗಳನ್ನು ಜಾರಿಗೊಳಿಸುವ ಹೊಣೆ ಸಂಬಂಧಪಟ್ಟ ಪೊಲೀಸ್ ಇನ್ಸ್ಪೆಕ್ಟರ್ ಮೇಲಿದೆ. ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಇನ್ಸ್ಪೆಕ್ಟರ್ ಕ್ರಮ ಕೈಗೊಳ್ಳಬಹುದು ನ್ಯಾಯಪೀಠವು ಆದೇಶದಲ್ಲಿ ತಿಳಿಸಿದೆ.
ನಗರದಲ್ಲಿ ಮೆರವಣಿಗೆ ಮತ್ತು ಪ್ರತಿಭಟನೆಗಳಿಂದ ಸಂಚಾರ ದಟ್ಟಣೆ ಪರಿಣಾಮ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರು 2022ರ ಮಾರ್ಚ್ನಲ್ಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಬರೆದಿದ್ದ ಪತ್ರದ ಅನುಸಾರ ಈ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದಾಖಲಿಸಿಕೊಳ್ಳಲಾಗಿತ್ತು.







