ಬಿಬಿಎಂಪಿ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕರಿಗೆ ಅವಕಾಶ ತಪ್ಪಿಸಲು ಬೇಕಾಬಿಟ್ಟಿ ಮೀಸಲಾತಿ ಪ್ರಕಟ: ಡಿಕೆಶಿ
ಬೆಂಗಳೂರು, ಆ. 7: ‘ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಚುನಾವಣೆಗೆ ನಾವು ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಅದರ ಅಂಗವಾಗಿ ಬೆಂಗಳೂರಿನ ಎಲ್ಲ ವಿಧಾನಸಭಾ ಕ್ಷೇತ್ರಗಳ ಪ್ರವಾಸ ಮಾಡುತ್ತಿದ್ದೇನೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ.
ರವಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ರಾಜ್ಯ ಸರಕಾರ ಬಿಬಿಎಂಪಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕರಿಗೆ ಅವಕಾಶ ತಪ್ಪಿಸಲು ಬೇಕಾಬಿಟ್ಟಿಯಾಗಿ ಮೀಸಲಾತಿ ಪಟ್ಟಿ ಪ್ರಕಟಿಸಿದೆ.ಇದರ ವಿರುದ್ಧ ನಮ್ಮ ಪಕ್ಷದ ನಾಯಕರು ಪ್ರತಿಭಟಿಸಿ, ನಗರಾಭಿವೃದ್ಧಿ ಇಲಾಖೆ ಕಚೇರಿಗೆ ಬಿಜೆಪಿ ಕಚೇರಿ ಎಂದು ನಮ್ಮ ಪಕ್ಷದ ಮುಖಂಡರು ನಾಮಫಲಕ ಹಾಕಿದ್ದಾರೆ.
‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರಕಾರ ಮಾಡಿದ್ದು ತಪ್ಪು ಎಂದು ಹೇಳಬೇಕಾಗಿರುವುದು ವಿಪಕ್ಷವಾಗಿ ನಮ್ಮ ಕರ್ತವ್ಯ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಹಿಂದುಳಿದವರು ಹಾಗೂ ಮಹಿಳೆಯರಿಗೆ ನೀಡಬೇಕಾದ ಮೀಸಲಾತಿಯನ್ನು ಸರಿಯಾಗಿ ಹಂಚಿಕೆ ಮಾಡಿಲ್ಲ. ಬೊಮ್ಮನಹಳ್ಳಿ ಕ್ಷೇತ್ರದ 14 ವಾರ್ಡ್ಗಳ ಪೈಕಿ 9 ವಾರ್ಡ್ಗಳಿಗೆ ಮಹಿಳಾ ಮೀಸಲಾತಿ ನೀಡಿದ್ದಾರೆ' ಎಂದು ದೂರಿದರು.
‘ಜಯನಗರದಲ್ಲಿ 9 ವಾರ್ಡ್ಗಳ ಪೈಕಿ ಎಂಟು ವಾರ್ಡ್, ಬಿಟಿಎಂ ಲೇಔಟ್ನಲ್ಲಿ 8 ವಾರ್ಡ್ ಹಾಗೂ ಗಾಂಧಿ ನಗರದಲ್ಲಿ 7ಕ್ಕೆ 7 ವಾರ್ಡ್ಗಳಲ್ಲಿ, ಚಾಮರಾಜಪೇಟೆಯ 6 ವಾರ್ಡ್ಗಳಲ್ಲಿ ಮಹಿಳೆಯರಿಗೆ ಮೀಸಲು ನೀಡಿದ್ದಾರೆ. ಕಾಂಗ್ರೆಸ್ ಶಾಸಕರ ಕ್ಷೇತ್ರಗಳ ಒಟ್ಟು 93 ವಾರ್ಡ್ಗಳ ಪೈಕಿ 76 ಕಡೆ ಮಹಿಳೆಯರಿಗೆ ಮೀಸಲಾತಿ ನೀಡಿದ್ದಾರೆ. ಇದು ನ್ಯಾಯವೋ, ಅನ್ಯಾಯವೋ ನೀವೇ ತೀರ್ಮಾನಿಸಿ' ಎಂದು ಶಿವಕುಮಾರ್ ಖಾರವಾಗಿ ಪ್ರಶ್ನಿಸಿದರು.
‘ನೆಹರೂ ಅವರು ಅಲಹಾಬಾದ್ ಪಾಲಿಕೆ ಅಧ್ಯಕ್ಷರಾಗಿ ಕೆಲಸ ಮಾಡಿದವರು. ಕೆಂಗಲ್ ಹನುಮಂತಯ್ಯ ಅವರು ಬೆಂಗಳೂರು ಪಾಲಿಕೆ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ವಿಲಾಸ್ ರಾವ್ ದೇಶ್ ಮುಖ್ ಪಂಚಾಯ್ತಿ ಅಧ್ಯಕ್ಷರಾಗಿದ್ದರು. ಬಿ.ಡಿ ಜತ್ತಿ ಅವರೂ ಪಂಚಾಯ್ತಿ ಅಧ್ಯಕ್ಷರಾಗಿದ್ದರು. ಈಗಿನ ರಾಷ್ಟ್ರಪತಿಯವರು ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಯಾಗಿ ಕೆಲಸ ಮಾಡಿದ್ದಾರೆ. ಭವಿಷ್ಯದಲ್ಲಿ ಶಾಸಕರಾಗುವವರಿಗೆ ಇದು ಬಹುಮುಖ್ಯ ಚುನಾವಣೆ' ಎಂದು ಶಿವಕುಮಾರ್ ತಿಳಿಸಿದರು.