ಶ್ರೀಕೃಷ್ಣನ ಸಂದೇಶಗಳು ವಿಶ್ವ ಮಾನ್ಯ: ಶಾಸಕ ರಘುಪತಿ ಭಟ್

ಉಡುಪಿ : ಭಗವದ್ಗೀತೆಯ ಮೂಲಕ ಶ್ರೀಕೃಷ್ಣನು ಸಾರಿರುವ ಸಂದೇಶಗಳು ವಿಶ್ವ ಮಾನ್ಯವಾಗಿದ್ದು, ಸರ್ವ ಕಾಲಕ್ಕೂ ವಿಶ್ವಕ್ಕೆ ಅನ್ವಯವಾಗಲಿವೆ ಎಂದು ಉಡುಪಿ ಶಾಸಕ ಕೆ. ರಘುಪತಿ ಭಟ್ ಹೇಳಿದ್ದಾರೆ.
ಶುಕ್ರವಾರ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮೈಸೂರು ವಿಭಾಗ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳು ಪರ್ಯಾಯ ಶ್ರೀಕೃಷ್ಣಾಪುರ ಮಠದ ಸಹಕಾರದೊಂದಿಗೆ ಆಯೋಜಸಿದ್ದ ರಾಜ್ಯ ಮಟ್ಟದ ಕೃಷ್ಣ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.
ಸಾವಿರಾರು ವರ್ಷಗಳ ಹಿಂದೆ ಶ್ರೀಕೃಷ್ಣ ಬೋಧಿಸಿದ ಭಗವದ್ಗೀತೆಯಲ್ಲಿ ಮನುಷ್ಯನ ಸುಗಮ ಜೀವನ ವಿಧಾನ, ಆಡಳಿತ ವ್ಯವಸ್ಥೆಯ ಸಂದೇಶಗಳು ವಿಶ್ವದ ಎಲ್ಲಾ ದೇಶಗಳ ಜನತೆಗೆ ಹಾಗೂ ಎಲ್ಲಾ ಕ್ಷೇತ್ರಗಳಿಗೂ ಅನ್ವಯವಾಗುತ್ತದೆ. ವಿದೇಶಿಯರೂ ಶ್ರೀಕೃಷ್ಣನ ತತ್ವ ಸಂದೇಶಗಳ ಅಕರ್ಷಣೆಗೆ ಒಳಗಾಗಿ ಅವುಗಳನ್ನು ಅಭ್ಯಸಿಸಲು ಭಾರತಕ್ಕೆ ಆಗಮಿಸುತ್ತಿದ್ದಾರೆ ಎಂದರು.
ವಿಶೇಷ ಉಪನ್ಯಾಸ ನೀಡಿದ ನಿಟ್ಟೆ ಪದವಿ ಪೂರ್ವ ಕಾಲೇಜಿನ ಅಕ್ಷಯಾ ಗೋಖಲೆ ಮಾತನಾಡಿ, ಧರ್ಮದ ರಕ್ಷಣೆಗಾಗಿ ಅಧರ್ಮದ ವಿರುದ್ದ ಹೋರಾಡಲು ಅವತರಿಸಿದ ಶ್ರೀಕೃಷ್ಣ ಭಗವದ್ಗೀತೆಯಲ್ಲಿ ತಿಳಿಸಿದ ಸಂದೇಶಗಳನ್ನು ಅಧ್ಯಯನ ಮಾಡಿದರೆ ಜ್ಞಾನ ದೊರೆಯುತ್ತದೆ. ಪ್ರಯತ್ನ ಪಟ್ಟರೆ ಉತ್ತಮ ಫಲ ದೊರೆಯುತ್ತದೆ ಎಂಬ ಸಂದೇಶವನ್ನು ವಿದ್ಯಾರ್ಥಿಗಳು ಶೈಕ್ಷಣಿಕ ಬದುಕಿನಲ್ಲಿ ಅಳವಡಿಸಿಕೊಂಡು ಉನ್ನತ ಸಾಧನೆಗಳನ್ನು ಮಾಡಬೇಕು ಎಂದರು.
ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಅಧ್ಯಕ್ಷತೆ ವಹಿಸಿದ್ದರು. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಕಾಪು ಶಾಸಕ ಲಾಲಾಜಿ ಆರ್.ಮೆಂಡನ್, ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿ.ನ ಅಧ್ಯಕ್ಷ ಉದಯ್ಕುಮಾರ್ ಶೆಟ್ಟಿ, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಜಿ.ಪಂ. ಸಿಇಓ ಪ್ರಸನ್ನ ಹೆಚ್, ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಚೀಂದ್ರ, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್, ಜಿಲ್ಲಾ ಯಾದವ ಗೊಲ್ಲ ಸಮಾಜ ಸಂಘಧ ಅಧ್ಯಕ್ಷ ದಯಾನಂದ್ ಬಿ.ಆರ್. ಉಪಸ್ಥಿತರಿದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಕೃಷ್ಣ ಜಯಂತಿ ಅಂಗವಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳು, ನೃತ್ಯ ಸ್ಪರ್ಧೆ ಸೇರಿ ವಿವಿಧ ಕಾರ್ಯಕ್ರಮಗಳು ನಡೆದವು.







