ಪ್ರತಿ ತಿಂಗಳು ಕಡ್ಡಾಯವಾಗಿ ರಸ್ತೆ ಸುರಕ್ಷತಾ ಸಮಿತಿಯ ಸಭೆ ನಡೆಸಲು ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಸೂಚನೆ

ಮಂಗಳೂರು: ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿಯ ಸಭೆಯನ್ನು ಪ್ರತಿ ತಿಂಗಳು ನಡೆಸಿ ಕೈಗೊಂಡ ನಿರ್ಣಯಗಳ ಬಗ್ಗೆ ಕೇಂದ್ರ ಸರಕಾರದ ರಸ್ತೆ ಸುರಕ್ಷತೆಗೆ ಸಂಬಂಧಿಸಿದ ವೆಬ್ಸೈಟ್ನಲ್ಲಿ ಮಾಹಿತಿ ನೀಡುವಂತೆ ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಸೂಚಿಸಿದರು.
ನಗರದ ಸರ್ಕ್ಯೂಟ್ ಹೌಸ್ನಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲಾ ಮಟ್ಟದ ರಸ್ತೆ ಸುರಕ್ಷತೆಯ ಬಗ್ಗೆ ಪ್ರತಿ ತಿಂಗಳು ಕಡ್ಡಾಯವಾಗಿ ಸಭೆ ನಡೆಸಬೇಕು. ಅದಕ್ಕೊಬ್ಬರು ನೋಡಲ್ ಅಧಿಕಾರಿಯನ್ನು ನಿಯೋಜಿಸಿ ಸಭೆಯಲ್ಲಿ ಚರ್ಚೆಯಾದ ಹಾಗೂ ಕೈಗೊಂಡ ನಿರ್ಣಯಗಳ ಬಗ್ಗೆ 48 ಗಂಟೆಯೊಳಗೆ ವೆಬ್ಸೈಟ್ನಲ್ಲಿ ದಾಖಲಿಸಬೇಕು ಎಂದು ಡಿಸಿ ರಾಜೇಂದ್ರ ತಿಳಿಸಿದರು.
ಬ್ಲಾಕ್ ಸ್ಪಾಟ್ (ಕಪ್ಪುಚುಕ್ಕೆ ಪ್ರದೇಶ)ಗಳಲ್ಲಿ ರಸ್ತೆ ದುರಸ್ತಿಯ ಬಗ್ಗೆ ಉಲ್ಲೇಖಿಸಿ ವಾಹನ ಸವಾರರು ನಿಧಾನವಾಗಿ ಚಲಿಸುವಂತೆ ಸೂಚಿಸುವ ನಾಮಫಲಕವನ್ನು ಅಳವಡಿಸಬೇಕು. ಗಂಭೀರ ಸ್ವರೂಪದ ಅಪಘಾತವಾಗಿ ಸಾವು ಸಂಭವಿಸಿದ ಸಂದರ್ಭಗಳಲ್ಲಿ ಆಡಿಟ್ ವರದಿ ನೀಡುವಂತೆ ಸೂಚಿಸಿದರು.
ದ್ವಿಚಕ್ರ ವಾಹನ ಸವಾರರು ಜೀವದ ಸುರಕ್ಷತಾ ದೃಷ್ಟಿಯಿಂದ ಐಎಸ್ಐ ಚಿನ್ಹೆಯುಳ್ಳ ಹೆಲ್ಮೆಟ್ ಧರಿಸಲು ಜಾಗೃತಿ ಮೂಡಿಸಬೇಕು. ಶಾಲೆ ಹಾಗೂ ಕಾಲೇಜುಗಳ ಬಸ್ಗಳ ಪರ್ಮಿಟ್ ಮತ್ತು ಆ ವಾಹನಗಳ ಸ್ಥಿತಿಗತಿಗಳ ಬಗ್ಗೆ ತಪಾಸಣೆ ನಡೆಸಬೇಕು. ಆಯಾ ಬಸ್ಗಳಲ್ಲಿ ಸಂಬಂಧಿಸಿದ ಶಾಲೆಗಳ ಹೆಸರು, ಅಪಾಯಕಾರಿ ಚಾಲನೆ ಕಂಡುಬಂದರೆ ಸಂಪರ್ಕಿಸಬೇಕಾದವರ ದೂರವಾಣಿ ಸಂಖ್ಯೆಯನ್ನು ಸ್ಪಷ್ಟವಾಗಿ ನಮೂದಿಸಬೇಕು. ಈ ಕುರಿತು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಾರಿಗೆ ಉಪಾಯುಕ್ತರೇ ಖುದ್ದಾಗಿ ಶಾಲೆ-ಕಾಲೇಜುಗಳ ಬಸ್ಗಳನ್ನು ಪರಿಶೀಲಿಸಬೇಕು ಎಂದರು.
ಶಾಲಾ ವಿದ್ಯಾರ್ಥಿಗಳನ್ನು ಕರೆದೊಯ್ಯುವ ಆಟೋಗಳಲ್ಲಿ ಐದು ಮಕ್ಕಳ ಪ್ರಯಾಣಕ್ಕೆ ಮಾತ್ರ ಅವಕಾಶವಿದೆ. ಈ ಮಿತಿಯನ್ನು ಮೀರಿ ಹೆಚ್ಚು ಮಕ್ಕಳೊಂದಿಗೆ ಪ್ರಯಾಣಿಸಿದಲ್ಲಿ ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಫುಟ್ಪಾತ್ಗಳ ಮೇಲೆ ವಾಹನಗಳು ಚಲಿಸದಂತೆ ನಿಗಾ ವಹಿಸಬೇಕು. ಕಟ್ಟಡ ನಿರ್ಮಾಣ ಸಂದರ್ಭ ರಸ್ತೆ ಬದಿಗಳಲ್ಲಿ ಹಾಕಲಾದ ಕಟ್ಟಡ ನಿರ್ಮಾಣ ಸಾಮಗ್ರಿಗಳಿಂದ ಅಪಘಾತ ಸಂಭವಿಸಿದಲ್ಲಿ ಆ ಕಟ್ಟಡದ ಮಾಲಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಡಿಸಿ ಸೂಚಿಸಿದರು.
ಸಭೆಯಲ್ಲಿ ದ.ಕ.ಜಿಪಂ ಸಿಇಒ ಡಾ.ಕುಮಾರ್, ಜಿಲ್ಲಾ ಎಸ್ಪಿ ಋಷಿಕೇಷ್ ಭಗವಾನ್ ಸೋನಾವಣೆ, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಮಂಗಳೂರು ಸಹಾಯಕ ಆಯುಕ್ತ ಮದನ್ ಮೋಹನ್, ಮಂಗಳೂರು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಾರಿಗೆ ಉಪಾಯುಕ್ತ ಶಂಕರ್, ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಲಿಂಗೇಗೌಡ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸುಧಾಕರ್, ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ್ ಶೆಟ್ಟಿ, ಪುತ್ತೂರು ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಶ್ರೀನಾಥ್ ಅಜಿಲ, ಬಂಟ್ವಾಳ ಸಹಾಯಕ ಪ್ರಾದೇಶಿಕ ಸಾರಿಗೆ ಇಲಾಖೆಯ ಅಧೀಕ್ಷಕ ಸಚಿನ್ ತಾಳೇಕರ್, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಜಂಟಿ ನಿರ್ದೇಶಕ ರಮೇಶ್, ಸಂಚಾರ ಸಲಹಾ ಸಮಿತಿಯ ಸದಸ್ಯ ಜಿ.ಕೆ. ಭಟ್ ಮತ್ತಿತರರು ಉಪಸ್ಥಿತರಿದ್ದರು.







