ಗಣೇಶ ಹಬ್ಬದಲ್ಲಿ ಮಾರ್ಗಸೂಚಿಗಳನ್ನು ಪಾಲಿಸಲು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಸೂಚನೆ
ಸಾರ್ವಜನಿಕ ಗಣೇಶೋತ್ಸವ ಸಮಿತಿಗಳ ಆಯೋಜಕರ ಸಭೆ

ಡಾ. ರಾಜೇಂದ್ರ
ಮಂಗಳೂರು, ಆ.26: ಈ ಬಾರಿಯ ಗಣೇಶ ಹಬ್ಬವನ್ನು ರಾಜ್ಯ ಸರಕಾರ ಹಾಗೂ ಹೈಕೋರ್ಟ್ ಹೊರಡಿಸಿರುವ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಜಿಲ್ಲೆಯ ಗಣೇಶೋತ್ಸವ ಸಮಿತಿಗಳ ಮುಖಂಡರಿಗೆ ಸಲಹೆ ನೀಡಿದ್ದಾರೆ.
ದ.ಕ.ಜಿಲ್ಲಾಧಿಕಾರಿಯ ಕಚೇರಿ ಸಭಾಂಗಣದಲ್ಲಿ ಈ ಬಗ್ಗೆ ಶುಕ್ರವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಾರ್ವಜನಿಕವಾಗಿ ಗಣೇಶೋತ್ಸವ ಆಚರಿಸುವ ಸಮಿತಿಗಳು ಆಯಾ ವ್ಯಾಪ್ತಿಯ ಪೊಲೀಸ್ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಪಂನಿಂದ ಅನುಮತಿ ಪಡೆಯಬೇಕು. ಈ ಸಂದರ್ಭ ಸೌಹಾರ್ದ ಹಾಗೂ ಸಾಮಾಜಿಕ ಸ್ವಾಸ್ಥ್ಯ ಕದಡುವಂತಹ ಬರಹಗಳ ಬ್ಯಾನರ್ ಅಥವಾ ಫ್ಲೆಕ್ಸ್ಗಳನ್ನು ಅಳವಡಿಸಬಾರದು. ನಗರ ಸ್ಥಳೀಯ ಸಂಸ್ಥೆಗಳು ಅಥವಾ ಪೊಲೀಸ್ ಇಲಾಖೆಯ ಅನುಮತಿ ಪಡೆದು ಶುಭಕೋರುವ ಬ್ಯಾನರ್ ಅಥವಾ ಫ್ಲೆಕ್ಸ್ಗಳನ್ನು ಅಳವಡಿಸಿಕೊಳ್ಳಬಹುದಾಗಿದೆ. ಮಳೆಗಾಲದಲ್ಲಿ ಗಾಳಿಮಳೆಗೆ ಹಾನಿಯಾಗದಂತಹ ಪೆಂಡಾಲ್ಗಳನ್ನು ಹಾಕಬೇಕು, ಅಲ್ಲಿ ವಿದ್ಯುತ್ ಅವಘಡಗಳಾಗದಂತೆ ಎಚ್ಚರ ವಹಿಸಬೇಕು, ವಿದ್ಯುತ್ ಸಂಪರ್ಕ ಪಡೆಯಲು ತಾತ್ಕಾಲಿಕ ಅನುಮತಿ ಪಡೆಯಬೇಕು. ಬೃಹತ್ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವ ಸಮಿತಿಗಳು ಕಡ್ಡಾಯವಾಗಿ ಸಿಸಿಟಿವಿಯನ್ನು ಅಳವಡಿಸಿಕೊಳ್ಳಬೇಕು, ಜನಸಂದಣಿಯಾದಂತೆ ಎಚ್ಚರವಹಿಸಬೇಕು. ಸಾರ್ವಜನಿಕರ ಓಡಾಟಕ್ಕೆ ಅನುಕೂಲವಾಗುವಂತೆ ನೋಡಿಕೊಳ್ಳಬೇಕು. ಆ ಪೆಂಡಾಲ್ಗಳಲ್ಲಿ ಕಾರ್ಯಕರ್ತರನ್ನೇ ಕಾವಲಿಗೆ ನಿಯೋಜಿಸಿಕೊಳ್ಳಬೇಕು ಎಂದು ಡಿಸಿ ಸಲಹೆ ನೀಡಿದರು.
ಧ್ವನಿವರ್ಧಕಗಳನ್ನು ಬಳಸುವ ಮುನ್ನ ಸಂಬಂಧಪಟ್ಟವರಿಂದ ಅನುಮತಿ ಪಡೆಯಬೇಕು. ನ್ಯಾಯಾಲಯದ ಆದೇಶದಂತೆ ರಾತ್ರಿ 10 ಗಂಟೆಯ ನಂತರ ಧ್ವನಿವರ್ಧಕಗಳನ್ನು ಬಳಸಬಾರದು. ವಿದ್ಯುತ್ ಅಲಂಕಾರ, ಬೆಳಕಿನ ವ್ಯವಸ್ಥೆಯಲ್ಲಿ ಯಾವುದೇ ಲೋಪದೋಷ ಆಗದಂತೆ ಆಯೋಜಕರು ಗಮನ ಹರಿಸಬೇಕು. ವಿಸರ್ಜನೆ ಮೆರವಣಿಗೆಯಲ್ಲಿ ವಿದ್ಯುತ್ ತಂತಿಗಳು ಅಥವಾ ಕೇಬಲ್ಗಳು ಇರದಿರುವ ಬಗ್ಗೆ ಖಚಿತ ಪಡಿಸಿಕೊಂಡ ನಂತರ ಮೆರವಣಿಗೆ ನಡೆಸಬೇಕು ಎಂದು ಡಿಸಿ ಸೂಚಿಸಿದರು.
ಪ್ಲಾಸ್ಟ್ರ್ ಆಫ್ ಪ್ಯಾರಿಸ್ ಸಹಿತ ಪರಿಸರಕ್ಕೆ ಹಾನಿಯಾಗುವಂತಹ ಪ್ರತಿಮೆಗಳನ್ನು ಬಳಸಬಾರದು. ಶುದ್ಧ ಮಣ್ಣಿನಿಂದ ಮಾಡಿದ ಗಣಪನನ್ನೇ ಬಳಸುವಂತೆ ಸೂಚಿಸಿದ ಡಿಸಿ, ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಸರಕಾರ ಮತ್ತು ನ್ಯಾಯಾಲಯದ ಆದೇಶವನ್ನು ಪಾಲಿಸಿ ಗಣೇಶೋತ್ಸವ ಆಚರಿಸುವಂತೆ ಸಲಹೆ ನೀಡಿದರು.
ವೇದಿಕೆಯಲ್ಲಿ ದ.ಕ.ಜಿಪಂ ಸಿಇಒ ಡಾ.ಕುಮಾರ್, ಜಿಲ್ಲಾ ಎಸ್ಪಿ ಋಷಿಕೇಶ್ ಭಗವಾನ್ ಸೋನಾವಣೆ, ಮಹಾನಗರ ಪಾಲಿಕೆಯ ಆಯುಕ್ತ ಅಕ್ಷಯ್ ಶ್ರೀಧರ್, ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಅಂಶುಕುಮಾರ್, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಉಪಸ್ಥಿತರಿದ್ದರು.







