ಸೆಪ್ಟಂಬರ್, ಅಕ್ಟೋಬರ್ ನಲ್ಲಿ ಬಿಜೆಪಿಯಿಂದ ರಾಜ್ಯದ ಆರು ಕಡೆಗಳಲ್ಲಿ ರ್ಯಾಲಿ: ಸಿಎಂ ಬೊಮ್ಮಾಯಿ

ಬೆಂಗಳೂರು, ಆ.29: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಸೂಚನೆ ಮೇರೆಗೆ ಸೆಪ್ಟಂಬರ್ ಮತ್ತು ಅಕ್ಟೋಬರ್ ತಿಂಗಳಲ್ಲಿ ಪಕ್ಷದ ಸಂಘಟನೆ, ಪ್ರವಾಸ, ಜನಸಂಪರ್ಕದ ಬಗ್ಗೆ ಚರ್ಚೆ ಮಾಡಿದ್ದು, ಆರು ಕಡೆ ದೊಡ್ಡ ರ್ಯಾಲಿಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಅವರು ಇಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರನ್ನು ಭೇಟಿ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪಕ್ಷ ಸಂಘಟನೆಯ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾರನ್ನು ದಿಲ್ಲಿಗೆ ಹೋಗಿ ಭೇಟಿಯಾಗಿ ಬಂದಿದ್ದಾರೆ. ಅಲ್ಲಿಯ ಮಾತುಕತೆ, ಸೂಚನೆಯ ಬಗ್ಗೆ ವಿವರವಾಗಿ ಚರ್ಚೆ ಮಾಡಿದ್ದೇವೆ. ನಮ್ಮ ಪ್ರಧಾನಮಂತ್ರಿ ಸೆಪ್ಟಂಬರ್ 2ರಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ಅವರು ಭೇಟಿ ನೀಡುವ ಸಂದರ್ಭದಲ್ಲಿ ಪಕ್ಷದ ವತಿಯಿಂದ ಮಾಡಬೇಕಿರುವ ಎಲ್ಲಾ ಕಾರ್ಯಕ್ರಮಗಳ ಬಗ್ಗೆ ಸುದೀರ್ಘ ವಾಗಿ ಚರ್ಚೆ ಮಾಡಿದ್ದೇವೆ. ಬಿ.ಎಸ್.ಯಡಿಯೂರಪ್ಪ, ನಳಿನ್ ಕುಮಾರ್ ಕಟೀಲು, ಅರುಣ್ ಸಿಂಗ್ ವಿವಿಧ ತಂಡಗಳಲ್ಲಿ ಪ್ರವಾಸ ಮಾಡುವ ಬಗ್ಗೆ ಚರ್ಚೆಯಾಗಿದೆ ಎಂದು ಹೇಳಿದರು.
ಬರುವ ದಿನಗಳಲ್ಲಿ ಇನ್ನೊಂದು ಸಭೆಯನ್ನು ರಾಜ್ಯ ಮಟ್ಟದ ಹಿರಿಯ ನಾಯಕರೊಂದಿಗೆ ನಡೆಸಿ, ಸೆಪ್ಟಂಬರ್ ಮತ್ತು ಅಕ್ಟೋಬರ್ ತಿಂಗಳ ಕಾರ್ಯಕ್ರಮದ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳುವ ನಿರ್ಣಯವಾಗಿದೆ. ಸೆಪ್ಟಂಬರ್ 8ರಂದು ದೊಡ್ಡಬಳ್ಳಾಪುರದಲ್ಲಿ ನಡೆಯುವ ಜನೋತ್ಸವ ಕಾರ್ಯಕ್ರಮದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಅದನ್ನು ಯಶಸ್ವಿಗೊಳಿಸಲು ಕೆಲವು ಸೂಚನೆಗಳನ್ನು ನೀಡಿದ್ದಾರೆ. ಅದನ್ನು ಕಾರ್ಯಗತ ಮಾಡಲು ಸಂಘಟಕರಿಗೆ ತಿಳಿಸಲಾಗಿದೆ. ಸಚಿವ ಡಾ.ಸುಧಾಕರ್, ಶಾಸಕರು, ಪದಾಧಿಕಾರಿಗಳು ಎಲ್ಲರೂ ಸೇರಿ ಜನೋತ್ಸವ ಯಶಸ್ವಿ ಮಾಡುತ್ತೇವೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.







