ರಸ್ತೆ ಸುರಕ್ಷತಾ ನಿಯಮಗಳನ್ನು ತಪ್ಪದೇ ಪಾಲಿಸಿ: ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್

ಉಡುಪಿ, ಸೆ.14: ಜಿಲ್ಲೆಯಲ್ಲಿ ಸಾರ್ವಜನಿಕರ ಸುಗಮ ಮತ್ತು ಸುರಕ್ಷಿತ ಸಂಚಾರಕ್ಕೆ ಅಗತ್ಯವಿರುವ ರಸ್ತೆ ಸುಧಾರಣೆಯನ್ನು ಅಗತ್ಯವಿರುವ ಮೂಲಭೂತ ಕಾಮಗಾರಿಗಳನ್ನು ಕೈಗೊಂಡು ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ಮೂಲಕ ಅಪಘಾತಗಳ ಪ್ರಮಾಣವನ್ನು ಅತ್ಯಂತ ಕಡಿಮೆಗೊಳಿಸುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಅವರು ಅಧಿಕಾರಿ ಗಳಿಗೆ ಸೂಚನೆಗಳನ್ನು ನೀಡಿದ್ದಾರೆ.
ಬುಧವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.
ಜನಸಾಮಾನ್ಯರು ರಸ್ತೆಯಲ್ಲಿ ಸಂಚರಿಸುವಾಗ ರಸ್ತೆ ಸುರಕ್ಷತಾ ನಿಯಮಗಳನ್ನು ಚಾಚೂತಪ್ಪದೇ ಪಾಲಿಸಿದಾಗ ಅಪಘಾತದಿಂದ ದೂರವಿರಲು ಸಾಧ್ಯವಾಗುತ್ತದೆ. ನಿಯಮಗಳನ್ನು ಪಾಲಿಲದಿದ್ದಲ್ಲಿ ಸುರಕ್ಷಿತ ಸಂಚಾರ ಅಸಾಧ್ಯವಾಗುತ್ತದೆ ಎಂಬುದು ಪ್ರತಿಯೊಬ್ಬರ ಗಮನದಲ್ಲಿರಬೇಕು ಎಂದರು.
ಜಿಲ್ಲೆಯಲ್ಲಿ ಈಗಾಗಲೇ 30ಕ್ಕೂ ಹೆಚ್ಚು ಅಪಘಾತ ವಲಯ ಬ್ಲಾಕ್ ಸ್ಪಾಟ್ಗಳನ್ನು ಗುರುತಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿಗೆ ಸಂಬಂಧಿಸಿದ ಅಧಿಕಾರಿಗಳು ತತ್ಕ್ಷಣದಲ್ಲಿಯೇ ತಾತ್ಕಾಲಿಕ ಸುರಕ್ಷತಾ ಕಾರ್ಯ ಗಳನ್ನು ಕೈಗೊಳ್ಳುವುದರಿಂದ ಮರಣಕ್ಕೆ ಕಾರಣವಾಗುವ ಅಪಘಾತಗಳನ್ನು ತಪ್ಪಿಸಲು ಸಾಧ್ಯ. ಇದಕ್ಕೆ ಹೆಚ್ಚಿನ ಒತ್ತು ನೀಡಬೇಕು. ಮುಂದಿನ ದಿನಗಳಲ್ಲಿ ಶಾಶ್ವತ ಕಾಮಗಾರಿಗಳನ್ನು ಕೈಗೊಳ್ಳಬೇಕು. ಈ ಬಗ್ಗೆ ತೆಗೆದುಕೊಂಡ ಕಾರ್ಯಗಳ ಬಗ್ಗೆ ಜಿಲ್ಲಾ ರಸ್ತೆ ಸುರಕ್ಷತಾ ಪ್ರಾಧಿಕಾರಕ್ಕೆ ಅನುಸರಣಾ ವರದಿಯನ್ನು ಒಂದು ವಾರದೊಳಗೆ ನೀಡಬೇಕೆಂದು ಸೂಚನೆ ನೀಡಿದರು.
ಇಂದ್ರಾಳಿ ರೈಲ್ವೆ ಮೇಲ್ಸೆತುವೆ ಮೇಲಿನ ರಸ್ತೆ ಆಭಿವೃಧ್ದಿ ಕಾಮಗಾರಿಗಳನ್ನು ಅಕ್ಟೋಬರ್ 1ರಿಂದ ಪ್ರಾರಂಭಿಸಿ ಒಂದು ತಿಂಗಳ ಒಳಗೆ ಪೂರ್ಣ ಪ್ರಮಾಣ ದಲ್ಲಿ ಒಂದು ಬದಿಯ ರಸ್ತೆಯನ್ನು ಪೂರ್ಣಗೊಳಿಸಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ಕಾರ್ಯವನ್ನು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಕೈಗೊಳ್ಳಬೇಕು. ಈ ಕಾಮಗಾರಿಗೆ ಅಗತ್ಯವಿರುವ ಎಲ್ಲಾ ರೀತಿಯ ಸಹಕಾರವನ್ನು ಪೊಲೀಸ್ ಇಲಾಖೆ, ನಗರಸಭೆ ಹಾಗೂ ರೈಲ್ವೆ ಇಲಾಖೆ ಅಧಿಕಾರಿಗಳು ನೀಡಬೇಕು ಎಂದು ಸ್ಪಷ್ಟ ಸೂಚನೆ ನೀಡಿದರು.
ನಗರ ವ್ಯಾಪ್ತಿಯಲ್ಲಿ ವಾಹನಗಳ ಸಂಚಾರಕ್ಕೆ ಅನುಕೂಲವಾಗುವ ರೀತಿಯಲ್ಲಿ ಸೂಚನಾ ಫಲಕಗಳನ್ನು ಅಗತ್ಯವಿರುವ ಕಡೆಗಳಲ್ಲಿ ಅಳವಡಿಸಬೇಕು. ಹಾಗೂ ಹಂಪ್ಸ್, ಕ್ಯಾಟ್ ಐ , ಪಾದಚಾರಿ ಮಾರ್ಗದ ಲೈನ್ಗಳು ಸೇರಿದಂತೆ ಎಲ್ಲಾ ಸೂಚನೆಗಳನ್ನು ತಪ್ಪದೇ ಅಳವಡಿಸಬೇಕು ಎಂದು ಸೂಚನೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚೀಂದ್ರ ಮಾತನಾಡಿ, ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಹಿಂದೆಯೇ ಅಪಘಾತ ವಲಯ ಸ್ಥಳಗಳನ್ನು ಗುರುತಿಸಲಾಗಿದೆ. ಅಗತ್ಯವಿರುವ ವೈಜ್ಞಾನಿಕ ಕಾರ್ಯಗಳನ್ನು ಮತ್ತು ಮೇಲ್ದರ್ಜೆ ಗೇರಿಸುವ ಕಾಮಗಾರಿಗಳು ಆಗದೇ ಇರುವ ಬಗ್ಗೆ ಸಮಿತಿಯ ಗಮನಕ್ಕೆ ತಂದ ಅವರು, ಮುಂದಿನ ದಿನಗಳಲ್ಲಿ ಈ ಬಗ್ಗೆ ಕ್ರಮ ಕೈಗೊಳ್ಳದಿದ್ದಲ್ಲಿ ಅಂತಹ ಸ್ಥಳದಲ್ಲಿ ಅಪಘಾತಗಳು ನಡೆದಲ್ಲಿ ಸಂಬಂದಿಸಿದ ಅಧಿಕಾರಿಗಳನ್ನು ಸಹ ಪ್ರಕರಣಗಳಲ್ಲಿ ಸಹ ಅಪರಾಧಿಗಳನ್ನಾಗಿಸುವುದಾಗಿ ಎಚ್ಚರಿಕೆ ನೀಡಿದರು.
ಜಿಲ್ಲೆಯಲ್ಲಿ ಜನವರಿಯಿಂದ ಈವರೆಗೆ ರಸ್ತೆ ನಿಯಮಗಳ ಉಲ್ಲಂಘನೆಯ 42,944 ಪ್ರಕರಣಗಳಲ್ಲಿ 1.96 ಕೋಟಿ ರೂ.ಗಳಿಗೂ ಅಧಿಕ ದಂಡವನ್ನು ಸಂಗ್ರಹಸಲಾಗಿದೆ ಎಂದ ಎಸ್ಪಿ ಅವರು, ವಾಹನ ಸವಾರರು ಸೀಟ್ಬೆಲ್ಟ್, ಹೆಲ್ಮೆಟ್ ಸೇರಿದಂತೆ ಅಗತ್ಯ ಸುರಕ್ಷತಾ ಸಾಧನಗಳನ್ನು ತಪ್ಪದೇ ಬಳಕೆ ಮಾಡಬೇಕು. ಇದರಿಂದ ಸುರಕ್ಷಿತವಾಗಿರಲು ಸಾಧ್ಯ ಎಂದರು.
ಸಭೆಯಲ್ಲಿ ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ರವಿಕುಮಾರ್, ಪ್ರಾದೇಶಿಕ ಸಾರಿಗೆ ಅಧಿಕಾರಿ ರವಿಶಂಕರ್, ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ., ರಾಷ್ಟ್ರೀಯ ಹೆದ್ದಾರಿ ಅಭಿಯಂತರ ನಾಗರಾಜ್ ಹಾಗೂ ಇತರರು ಉಪಸ್ಥಿತರಿದ್ದರು.








