ಕೊರಗರ ವೈದ್ಯಕೀಯ ವೆಚ್ಚ ಮರುಪಾವತಿ ರದ್ದುಪಡಿಸಿದ ಆದೇಶವನ್ನು ಹಿಂಪಡೆದ ಸಮಾಜ ಕಲ್ಯಾಣ ಇಲಾಖೆ

ಉಡುಪಿ, ಸೆ.21: ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ವಾಸವಾಗಿರುವ ಮೂಲನಿವಾಸಿ ಆದಿವಾಸಿ ಬುಡಕಟ್ಟು ಸಮುದಾಯಕ್ಕೆ ಸೇರಿದ ಕೊರಗ ಜನಾಂಗದವರ ವೈದ್ಯಕೀಯ ವೆಚ್ಚ ಮರುಪಾವತಿಯನ್ನು ಹಿಂಪಡೆದುಕೊಂಡ ಆ.16ರ ತನ್ನ ಆದೇಶವನ್ನು ರಾಜ್ಯ ಸರಕಾರದ ಸಮಾಜ ಕಲ್ಯಾಣ ಇಲಾಖೆ ಸೆ.14ರಂದು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆದುಕೊಂಡಿದೆ ಎಂದು ಉಡುಪಿ ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.
ಕೊರಗ ಜನಾಂಗದವರು ತೀವ್ರ ತರಹದ ಕಾಯಿಲೆಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಲ್ಲಿ ಅವರ ವೈದ್ಯಕೀಯ ವೆಚ್ಚವನ್ನು 2022-23ನೇ ಸಾಲಿನ ನಿಗದಿಪಡಿಸಿದ ಅನುದಾನದಲ್ಲಿ ವೈದ್ಯಕೀಯ ವೆಚ್ಚ ಮರುಪಾವತಿಗೆ ಒಂದು ಬಾರಿ ಮಾತ್ರ ಷರತ್ತಿಗೊಳಪಟ್ಟು ಮಂಜೂರಾತಿ ನೀಡಿ ಸರಕಾರ ಆ.16ರಂದು ಆದೇಶಿಸಿತ್ತು. ಇದೀಗ ಈ ಆದೇಶವನ್ನು ಸರಕಾರ ಹಿಂಪಡೆದಿದ್ದು, ಕೊರಗ ಜನಾಂಗದವರು ಈ ಹಿಂದಿನಂತೆ ವೈದ್ಯಕೀಯ ವೆಚ್ಚ ಪಡೆಯಲು ಅರ್ಹರಾಗಿದ್ದಾರೆ ಎಂದಿದೆ. ಇದರಿಂದಾಗಿ ಅಳಿವಿನಂಚಿನಲ್ಲಿರುವ ಕೊರಗ ಜನಾಂಗದವರು ತೀವ್ರ ತರಹದ ಕಾಯಿಲೆಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಲ್ಲಿ ಈ ಹಿಂದಿನಂತೆಯೇ ಅವರ ವೈದ್ಯಕೀಯ ವೆಚ್ಚವನ್ನು ಮರುಪಾವತಿ ಮಾಡ ಬಹುದಾಗಿದೆ ಎಂದು ರಘುಪತಿ ಭಟ್ ತಿಳಿಸಿದ್ದಾರೆ.
ಕೊರಗ ಜನಾಂಗದವರ ವೈದ್ಯಕೀಯ ವೆಚ್ಚವನ್ನು ಈ ಹಿಂದಿನಂತೆಯೇ ಸರಕಾರದ ವತಿಯಿಂದಲೇ ಮರು ಪಾವತಿಸುವಂತೆ ಕರಾವಳಿಯ ಮೂರು ಜಿಲ್ಲೆಗಳ ಶಾಸಕರ ನಿಯೋಗ ಇತ್ತೀಚೆಗೆ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತ್ತು. ಬಳಿಕ ಸದನದಲ್ಲಿ ಈ ವಿಷಯವನ್ನು ಶಾಸಕ ರಘುಪತಿ ಭಟ್ ಹಾಗೂ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಪ್ರಸ್ತಾಪಿಸಿ ವೈದ್ಯಕೀಯ ವೆಚ್ಚವನ್ನು ಮರುಪಾವತಿ ಮಾಡುವಂತೆ ಮುಖ್ಯಮಂತ್ರಿಯವರನ್ನು ಒತ್ತಾಯಿಸಿದ್ದರು.
ಕೊರಗ ಸಮುದಾಯಗಳ ಸಂಕಷ್ಟಗಳಿಗೆ ನೆರವಾಗುವ ನಿಟ್ಟಿನಲ್ಲಿ ತಕ್ಷಣದಲ್ಲಿ ಸ್ಪಂದಿಸಿ ಆದೇಶ ಹೊರಡಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಾರಿಗೆ, ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾದ ಶ್ರೀರಾಮುಲು ಅವರಿಗೆ ರಘುಪತಿ ಭಟ್ ಅಭಿನಂದನೆ ಸಲ್ಲಿಸಿದ್ದಾರೆ.







