ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಿ: ಸಿಇಒ ಪ್ರಸನ್ನ

ಉಡುಪಿ, ಸೆ.22: ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ಪಚ್ಛವಾಗಿ ಇಟ್ಟುಕೊಂಡಾಗ ಮಾತ್ರ ನಾವುಗಳು ಆರೋಗ್ಯವಂತರಾಗಿ ಇರಲು ಸಾಧ್ಯ. ಇದಕ್ಕಾಗಿ ಗ್ರಾಮೀಣ ಪ್ರದೇಶಗಳ ಪ್ರತಿ ಮನೆಯ ಸುತ್ತಲೂ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಉಡುಪಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್. ಹೇಳಿದ್ದಾರೆ.
ಗುರುವಾರ ಮಣಿಪಾಲದ ಜಿಲ್ಲಾಪಂಚಾಯತ್ ಸಭಾಂಗಣದಲ್ಲಿ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯ ೨ನೇ ಹಂತದ ದ್ರವ ತ್ಯಾಜ್ಯ ನಿರ್ವಹಣೆ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.
ಸಾಮಾನ್ಯವಾಗಿ ಸಾಂಕ್ರಾಮಿಕ ರೋಗಗಳು ರೋಗವಾಹಕಗಳಾದ ಸೊಳ್ಳೆ ಸೇರಿದಂತೆ ಕೀಟಜನ್ಯಗಳಿಂದ ಹರಡುತ್ತವೆ. ಇವುಗಳ ಸಂತಾನೋತ್ಪತ್ತಿಗೆ ನಿಂತ ನೀರೇ ಪ್ರಮುಖ ಕಾರಣವಾಗಿದೆ. ಆದ್ದರಿಂದ ನಮ್ಮ ಮನೆಯ ಸುತ್ತಮುತ್ತಲಿನ ಪರಿಸರದಲ್ಲಿ ಮನೆ ಬಳಕೆಯ ತ್ಯಾಜ್ಯ ನೀರು ಎಲ್ಲೆಂದರಲ್ಲಿ ನಿಲ್ಲದಂತೆ ಇಂಗುಗುಂಡಿಗಳ ನಿರ್ಮಾಣ ಮಾಡಬೇಕು ಎಂದರು.
ಸರಕಾರಿ ಶಾಲೆ, ಅಂಗನವಾಡಿ, ಆರೋಗ್ಯ ಕೆಂದ್ರಗಳಲ್ಲಿ ತ್ಯಾಜ್ಯ ನೀರನ್ನು ಇಂಗುಗುಂಡಿಗಳಲ್ಲಿ ಇಂಗಿಸುವ ಕಾಮಗಾರಿಗಳನ್ನು ಸ್ವಚ್ಚ ಭಾರತ್ ಮಿಷನ್ ಅನುದಾನದ ಬಳಕೆಯೊಂದಿಗೆ ನಿರ್ಮಾಣ ಮಾಡಲು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮುಂದಾಗಬೇಕು ಎಂದರು.
ನದಿ ಹಾಗೂ ಸಮುದ್ರ ತಟದಲ್ಲಿರುವ ಮನೆಗಳ ಶೌಚಾಲಯದ ನೀರು ಸಮುದ್ರ ಹಾಗೂ ನದಿಗಳನ್ನು ಸೇರದಂತೆ ಗುಂಡಿಗಳ ನಿರ್ಮಾಣ ಮಾಡಬೇಕು. ಆದರೆ ಅವುಗಳನ್ನು ನೇರವಾಗಿ ನದಿ, ಸಮುದ್ರಕ್ಕೆ ಬಿಡುತ್ತಿರುವುದು ಗ್ರಾಮೀಣ ಭಾಗದಲ್ಲಿ ಕಂಡುಬರುತ್ತಿದೆ. ಈ ಬಗ್ಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಸಂಬಂದಿಸಿದ ಮನೆ/ಕಟ್ಟಡಗಳ ಮಾಲಕರಿಗೆ ಪಂಚಾಯತ್ರಾಜ್ ಕಾಯ್ದೆ ಅನ್ವಯ ನೋಟಿಸ್ ನೀಡಿ ಸರಿಪಡಿಸುವ ಕಾರ್ಯವಾಗ ಬೇಕು. ಒಂದೊಮ್ಮೆ ಅವರು ಇದಕ್ಕೆ ಸ್ಪಂದಿಸದೇ ಇದ್ದಲ್ಲಿ ಅವರುಗಳ ಮೇಲೆ ಕಾನೂನು ಅಡಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದರು.
ಗ್ರಾಪಂಗಳ ವ್ಯಾಪ್ತಿಯಲ್ಲಿ ಬರುವ ಕಡಲತೀರಗಳ ಅಭಿವೃಧ್ದಿಯನ್ನು ಕೈಗೊಳ್ಳುವ ಮೂಲಕ ಪ್ರವಾಸಿಗರನ್ನು ಆರ್ಕಸುವಂತಾಗಬೇಕು. ಇದಕ್ಕೆ ಅನುಗುಣ ವಾಗಿ ಅಗತ್ಯವಿರುವ ಎಲ್ಲಾ ರೀತಿಯ ಮೂಲಭೂತ ಸೌಕರ್ಯ ಗಳನ್ನು ಕಲ್ಪಿಸಲು ಯೋಜನೆಗಳನ್ನು ರೂಪಿಸಲು ಮುಂದಾಗಿ ಎಂದವರು ಕರೆ ನೀಡಿದರು.
ಸಭೆಯಲ್ಲಿ ಜಿಪಂನ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಹಾಗೂ ವಿವಿಧ ಗ್ರಾಪಂಗಳ ಪಂಚಾಯತ್ ಅಭಿವೃಧ್ದಿ ಅಧಿಕಾರಿಗಳು ಉಪಸ್ಥಿತರಿದ್ದರು.







