ಕೌಟುಂಬಿಕ ದೌರ್ಜನ್ಯದ ಬಗ್ಗೆ ಜಿಲ್ಲಾ ಅಧಿಕಾರಿ ವರ್ಗಕ್ಕೆ ಕಾನೂನು ಕಾರ್ಯಾಗಾರ

ಮಂಗಳೂರು, ಸೆ.27: ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ-೨೦೦೫ ಕುರಿತು ದ.ಕ.ಜಿಲ್ಲೆಯ ಪೊಲೀಸ್ ಅಧಿಕಾರಿಗಳು, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ, ಪಬ್ಲಿಕ್ ಪ್ರಾಸಿಕ್ಯೂಟರ್, ಸರಕಾರಿ ವಕೀಲರು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಸಂರಕ್ಷಣಾ ಅಧಿಕಾರಿಗಳು, ಸಖಿ ಒನ್ ಸ್ಟಾಪ್ ಸೆಂಟರ್ ಆಡಳಿತಾಧಿಕಾರಿಗಳು ಮತ್ತು ಕಾನೂನು ಸಲಹೆಗಾರರಿಗೆ ಜಿಪಂ ನೇತ್ರಾವತಿ ಸಭಾಂಗಣದಲ್ಲಿ ಕಾನೂನು ಕಾರ್ಯಾಗಾರವು ಮಂಗಳವಾರ ನಡೆಯಿತು.
ದ.ಕ.ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನಡೆದ ಕಾರ್ಯಾಗಾರವನ್ನು ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶೆ ಬಿ.ಜಿ. ಶೋಭಾ ಉದ್ಘಾಟಿಸಿದರು.
ಕೌಟುಂಬಿಕ ದೌರ್ಜನ್ಯದಿಂದ ಮಹಿಳೆಯರ ಸಂರಕ್ಷಣಾ ತಡೆ ಕಾಯ್ದೆ-೨೦೦೫ ಬಗ್ಗೆ ನ್ಯಾಯವಾದಿ ಸುಕೇಶ್ ಕುಮಾರ್ ಶೆಟ್ಟಿ ಉಪನ್ಯಾಸ ನೀಡಿದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕಿಶೋರ್ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಟಿ. ಪಾಪ ಬೋವಿ, ಮಂಗಳೂರು ನಗರ ಸಂಶೋಧನಾ ಕೇಂದ್ರದ ನಿರ್ದೇಶಕಿ ಹರಿಣಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.