ಹಿರಿಯ ನಾಗರಿಕರ ಅನುಭವಗಳು ಸಮಾಜಕ್ಕೆ ಅಗತ್ಯ: ಶಾಸಕ ರಘುಪತಿ ಭಟ್

ಉಡುಪಿ, ಅ.1: ಹಿರಿಯ ನಾಗರಿಕರ ಜೀವನದ ಅನುಭವಗಳು ಉತ್ತಮ ಸಮಾಜದ ಅಭಿವೃದ್ಧಿಗೆ ಅಗತ್ಯವಿದ್ದು, ಅವುಗಳ ಸದುಪಯೋಗ ಎಲ್ಲರಿಗೂ ದೊರೆಯಬೇಕು ಎಂದು ಉಡುಪಿ ಶಾಸಕ ಕೆ.ರಘುಪತಿ ಭಟ್ ಹೇಳಿದ್ದಾರೆ.
ಶನಿವಾರ ಉಡುಪಿ ಎಂ.ಜಿ.ಎಂ. ಕಾಲೇಜಿನ ನೂತನ ರವೀಂದ್ರ ಕಲಾ ಮಂಟಪದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಆರೋಗ್ಯ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಹಿರಿಯ ನಾಗರಿಕರ ಸಂಘಟನೆಗಳು, ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ ಹಾಗೂ ವೃದ್ಧಾಶ್ರಮಗಳು ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ವಿಶ್ವ ಹಿರಿಯ ನಾಗರಿಕರ ದಿನಾಚರಣೆವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.
ಭಾರತೀಯ ಸಂಸ್ಕೃತಿಯಲ್ಲಿ ಯಾವುದೇ ಕಾರ್ಯವನ್ನು ಮಾಡುವಾಗ ಹಿರಿಯರ ಆಶೀರ್ವಾದ ಪಡೆಯುವ ಸಂಸ್ಕೃತಿ ಇದೆ. ಹಿರಿಯರ ಅನುಭವಗಳು ಮುಂದಿನ ಪೀಳಿಗೆಗೆ ದಾರಿದೀಪವಿದ್ದಂತೆ. ಪ್ರಸ್ತುತ ಉಡುಪಿ ಜಿಲ್ಲಾ ರಜತ ಮಹೋತ್ಸವ ಕಾರ್ಯಕ್ರಮಗಳು ನಡೆಯುತ್ತಿದ್ದು, ಇದರಲ್ಲಿ ಜಿಲ್ಲೆಯ ಹಿರಿಯ ನಾಗರಿಕರ ಸಂಘಟನೆಗಳು ಅತ್ಯಂತ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿವೆ ಎಂದ ಶಾಸಕರು, ಜಿಲ್ಲೆಯ ಮುಂದಿನ ಅಭಿವೃದ್ಧಿಯ ಕುರಿತಂತೆ ಜಿಲ್ಲೆಯ ಹಿರಿಯ ನಾಗರಿಕರು ತಮ್ಮ ಸಲಹೆ, ಮಾರ್ಗದರ್ಶನಗಳನ್ನು ಜಿಲ್ಲಾಡಳಿತಕ್ಕೆ ನೀಡುವಂತೆ ತಿಳಿಸಿದರು.
ಸಮಾಜದಲ್ಲಿರುವ ಹಿರಿಯ ನಾಗರಿಕರನ್ನು ಗೌರವಿಸುವ ಮನಸ್ಥಿತಿ ಎಲ್ಲೆಡೆ ಮೂಡಬೇಕಿದೆ. ಅವರನ್ನು ಗೌರಸದೇ ಇರುವವರನ್ನು ಸಮಾಜ ಕೂಡಾ ಗೌರವ ದಿಂದ ಕಾಣದೇ ಇರುವ ಹಾಗೆ ಆಗಬೇಕಿದೆ. ಹಿರಿಯ ನಾಗರಿಕರಿಗೆ ಸಾಂತ್ವನ ಹಾಗೂ ನೆಮ್ಮದಿ ಜೀವನ ಅಗತ್ಯವಿದ್ದು, ಮಕ್ಕಳು ಇದನ್ನು ನೀಡಬೇಕು ಎಂದರು.
ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಮಾತನಾಡಿ, ಜಿಲ್ಲೆಯಲ್ಲಿ ಹಿರಿಯ ನಾಗರಿಕರ ಸಮಸ್ಯೆಗಳ ಬಗ್ಗೆ ನಿಯಮಿತವಾಗಿ ಸಭೆಗಳಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ಸಹಾಯವಾಣಿಗೆ ಬರುವ ದೂರುಗಳ ಕುರಿತು ತಕ್ಷಣ ಸ್ಪಂದಿಸಿ, ಏಕಗವಾಕ್ಷಿ ಮೂಲಕ ಸಮಸ್ಯೆಗಳನ್ನು ಬಗೆಹರಿಸಲಾಗುತ್ತಿದೆ. ಉಚಿತ ಸಹಾಯವಾಣಿ ಸಂಖ್ಯೆ 1090 ಬಗ್ಗೆ ಇನ್ನೂ ಹೆಚ್ಚಿನ ಜಾಗೃತಿ ಮೂಡಿಸಬೇಕಿದೆ ಎಂದರು.
ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಕೆ. ಉದಯ್ ಕುಮಾರ್ ಶೆಟ್ಟಿ, ಉಡುಪಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ, ವಕೀಲರ ಸಂಘದ ಅಧ್ಯಕ್ಷ ನಾಗರಾಜ್, ಹಿರಿಯ ನಾಗರಿಕರ ಜಿಲ್ಲಾ ಒಕ್ಕೂಟದ ಅಧ್ಯಕ್ಷ ಸಿ.ಎಸ್.ರಾವ್, ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟದ ಅಧ್ಯಕ್ಷೆ ಸರಳಾ ಕಾಂಚನ್, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕಿ ರತ್ನ, ಜಿಲ್ಲೆಯ ವಿವಿಧ ಹಿರಿಯ ನಾಗರಿಕ ಸಂಘಟನೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ವೀಣಾ ವಿವೇಕಾನಂದ ಸ್ವಾಗತಿಸಿದರು. ರವೀಂದ್ರ ಕಾರ್ಯಕ್ರಮ ನಿರೂಪಿಸಿದರು. ವಿಶ್ವನಾಥ್ ಹೆಗಡೆ ವಂದಿಸಿದರು.
ಇದೇ ಸಂದರ್ಭದಲ್ಲಿ ಹಿರಿಯ ನಾಗರಿಕರಿಗೆ ಉಚಿತ ಆರೋಗ್ಯ ತಪಾಸಣೆ ಯನ್ನು ಏರ್ಪಡಿಸಲಾಗಿದ್ದು, ಇಲಾಖೆ ಯಿಂದ ದೊರೆಯುವ ವಿವಿಧ ಸೌಲಭ್ಯಗಳ ಕುರಿತು ಮಾಹಿತಿ ಕಾರ್ಯಾಗಾರವನ್ನು ಸಹ ಹಮ್ಮಿಕೊಳ್ಳಲಾಗಿತ್ತು.