ಚಿತ್ರಮಂದಿರಗಳಲ್ಲಿ ನಾಡಗೀತೆ ಮೊಳಗಲಿ: ಸಿಎಂ ಬೊಮ್ಮಾಯಿಗೆ ನಟ ಝೈದ್ ಖಾನ್ ಮನವಿ
ಬೆಂಗಳೂರು, ಅ.1: ‘ರಾಜ್ಯ ವ್ಯಾಪಿ ಸಿನೆಮಾ ಮಂದಿರಗಳಲ್ಲಿ ರಾಷ್ಟ್ರಗೀತೆಯ ಜೊತೆಗೆ ನಾಡಗೀತೆಯನ್ನು ಹಾಕಬೇಕು' ಎಂದು ನಟ ಝೈದ್ ಖಾನ್ ಒತ್ತಾಯಿಸಿದ್ದು, ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಪತ್ರ ನೀಡಿದ್ದಾರೆ.
ಶನಿವಾರ ಇಲ್ಲಿನ ಆರ್ಟಿ ನಗರದಲ್ಲಿ ಮುಖ್ಯಮಂತ್ರಿಗಳ ನಿವಾಸದಲ್ಲಿ ಕನ್ನಡಪರ ಸಂಘಟನೆಗಳ ನೇತೃತ್ವದಲ್ಲಿ ಆಗಮಿಸಿ ಮನವಿ ಪತ್ರ ಸಲ್ಲಿಕೆ ಮಾಡಿದರು. ಅನಂತರ, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ದೇಶ, ನಾಡು, ನುಡಿಯ ಸಂಕೇತ ಆಗಿರುವ ರಾಷ್ಟ್ರ ಗೀತೆ ಹಾಗೂ ನಾಡಗೀತೆಗಳು ಹಿರಿಯರಿಂದ ಕಿರಿಯರವರೆಗೂ ಎಲ್ಲರ ಬಾಯಲ್ಲೂ ಮೊಳಗಬೇಕು. ನಾಡಗೀತೆಯ ಮಹತ್ವ ಇಂದಿನ ಮತ್ತು ಮುಂದಿನ ಪೀಳಿಗೆಯ ಹೃದಯದೊಳಗೆ ಇಳಿಯಬೇಕು ಎಂದರು.
ರಾಜ್ಯದ ಚಿತ್ರಮಂದಿರಗಳಲ್ಲಿ ಶೀಘ್ರದಲ್ಲಿಯೇ ನಾಡಗೀತೆಯೂ ಮೊಳಗುವಂತೆ ಮಾಡಬೇಕು ಎಂಬುದಾಗಿ ಮನವಿ ಮಾಡಿದ್ದೇವೆ. ಮುಖ್ಯಮಂತ್ರಿಗಳು ಚಲನಚಿತ್ರ ಮಂಡಳಿಯವರೊಂದಿಗೆ ಚರ್ಚಿಸಿ ಈ ಕುರಿತು ತೀರ್ಮಾನ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.
Next Story