ಧಮ್, ತಾಕತ್ತಿದ್ದರೆ ಸುರತ್ಕಲ್ ಟೋಲ್ ತೆರವುಗೊಳಿಸಲಿ: ರಮೇಶ್ ಕಾಂಚನ್

ಉಡುಪಿ, ಅ.16: ಕೇಂದ್ರ ಮತ್ತು ರಾಜ್ಯ ಸರಕಾರಕ್ಕೆ ಧಮ್ ಹಾಗೂ ತಾಕತ್ತಿದ್ದರೆ ಸುರತ್ಕಲ್ ಟೋಲ್ ಗೇಟನ್ನು ತೆರವುಗೊಳಿಸಿ ತೋರಿಸಲಿ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಸವಾಲು ಹಾಕಿದ್ದಾರೆ.
ಸಂಸದ ನಳಿನ್ ಕುಮಾರ್ ಕಟೀಲ್ ಒಂದು ತಿಂಗಳಿನಲ್ಲಿ ಸುರತ್ಕಲ್ ಟೋಲ್ ಗೇಟ್ ವಿಲೀನಗೊಳಿಸಲಾಗುವು ದೆಂದು ಹೇಳಿದ್ದರು. ಆದರೆ ನುಡಿದಂತೆ ನಡೆಯದೆ ಜನರಿಗೆ ದ್ರೋಹ ಎಸಗಿದ್ದಾರೆ. ಅ.18ರಂದು ಜನರೇ ಸೇರಿ ಟೋಲ್ ತೆರವುಗೊಳಿಸುವ ಹೋರಾಟ ಹಮ್ಮಿಕೊಂಡಿರುವಾಗ ಪೊಲೀಸರನ್ನು ದುರ್ಬಳಕೆ ಮಾಡಿಕೊಂಡು ಹೋರಾಟಗಾರರ ಮನೆ ಮನೆಗೆ ತೆರಳಿ ರಾತ್ರೋ-ರಾತ್ರಿ ನೋಟಿಸ್ ನೀಡಲಾಗಿದೆ. ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ಅವರ ಮನೆಗೂ ಪೊಲೀಸರು ಭೇಟಿ ನೀಡಿದ್ದಾರೆ. ಪ್ರಜಾಪ್ರಭುತ್ವ ದೇಶದಲ್ಲಿ ಜನ ವಿರೋಧಿ ನೀತಿಯ ವಿರುದ್ಧ ಪ್ರತಿಭಟನೆ ನಡೆಸುವುದು ನಾಗರಿಕರ ಹಕ್ಕು. ಅದನ್ನು ಬಿಜೆಪಿ ನೇತೃತ್ವದ ಸರಕಾರ ಕಸಿದುಕೊಳ್ಳಲು ಯತ್ನಿಸುತ್ತಿದೆ. ಅದರೊಂದಿಗೆ ಅಕ್ರಮವಾಗಿ ಕಾರ್ಯಚರಿಸುತ್ತಿರುವ ಸುರತ್ಕಲ್ ಟೋಲ್ ಗೇಟ್ಗೆ ಬೆಂಬಲ ನೀಡುತ್ತಿದೆ ಎಂದು ಅವರು ಹೇಳಿಕೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.





