ಉದ್ಯೋಗ ಖಾತ್ರಿ ಯೋಜನೆಯಲ್ಲಿ ಅಕ್ರಮ ಆರೋಪ: ಸರಕಾರಕ್ಕೆ ದೂರು
![ಉದ್ಯೋಗ ಖಾತ್ರಿ ಯೋಜನೆಯಲ್ಲಿ ಅಕ್ರಮ ಆರೋಪ: ಸರಕಾರಕ್ಕೆ ದೂರು ಉದ್ಯೋಗ ಖಾತ್ರಿ ಯೋಜನೆಯಲ್ಲಿ ಅಕ್ರಮ ಆರೋಪ: ಸರಕಾರಕ್ಕೆ ದೂರು](https://www.varthabharati.in/sites/default/files/images/articles/2022/10/18/353398-1666096060.gif)
ಬೆಂಗಳೂರು, ಅ.18: ಉದ್ಯೋಗ ಖಾತ್ರಿ ಯೋಜನೆಯಡಿ ನಿರುದ್ಯೋಗಿಗಳಿಗೆ ಉದ್ಯೋಗವನ್ನು ನೀಡದೇ ಜೆಸಿಬಿ ಯಂತ್ರಗಳ ಮೂಲಕ ಕಾಮಗಾರಿಯನ್ನು ನಡೆಸಿ ಬಿಲ್ ಮಾಡಿಕೊಳ್ಳುತ್ತಿದ್ದಾರೆ. ಈ ಅನ್ಯಾಯವನ್ನು ತಡೆದು ನಿರುದ್ಯೋಗಿಗಳಿಗೆ ಕೆಲಸ ನೀಡಬೇಕು ಎಂದು ಸಾಮಾಜಿಕ ಕಾರ್ಯಕರ್ತ ಬಸವರಾಜ ಶರಣಪ್ಪ, ಪಂಚಾಯತ್ ರಾಜ್ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿಗಳಿಗೆ ಮಂಗಳವಾರ ದೂರು ಸಲ್ಲಿಸಿದ್ದಾರೆ.
ನಗರದಲ್ಲಿ ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾದಗಿರಿ ಜಿಲ್ಲೆಯ ಯಾದಗಿರಿ ತಾಲೂಕಿನ ಬಳಿಚಕ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕಾಮಗಾರಿಗಳನ್ನು ಜೆಸಿಬಿ ಯಂತ್ರಗಳನ್ನು ಬಳಕೆ ಮಾಡಿಕೊಂಡು ನಿರ್ವಹಿಸುತ್ತಿದ್ದಾರೆ. ಗ್ರಾಮಪಂಚಾಯತ್ ಪಿಡಿಓ ಅಧಿಕಾರಿಯೂ ಈ ಅಕ್ರಮದಲ್ಲಿ ಪಾಲುದಾರರಾಗಿದ್ದಾರೆ. ಕಾಮಗಾರಿಯ ಹೆಸರಿನಲ್ಲಿ ಜಾಬ್ ಕಾರ್ಡ್ಗಳನ್ನು ದುರ್ಬಳಕೆ ಮಾಡಿಕೊಂಡು, ನಿರುದ್ಯೋಗಿಗಳಿಗೆ ಅನ್ಯಾಯವೆಸಗುತ್ತಿದ್ದಾರೆ ಎಂದು ಆರೋಪಿಸಿದರು.
ಉದ್ಯೋಗ ಖಾತ್ರಿ ಯೋಜನೆಯಡಿ ನಿರ್ವಹಿಸುವ ಕಾಮಗಾರಿಗಳಲ್ಲಿ ಜೆಸಿಬಿಗಳನ್ನು ಬಳಕೆ ಮಾಡಿಕೊಳ್ಳುತ್ತಿರುವುದರಿಂದ ನಿರುದ್ಯೋಗಿಗಳಿಗೆ ಕೆಲಸ ಸಿಗುತ್ತಿಲ್ಲ. ಅಲ್ಲದೇ ಈ ಯೋಜನೆಯಲ್ಲಿ ಅಕ್ರಮಗಳನ್ನು ಮಾಡಿ ಪಂಚಾಯತ್ನ ಚುನಾಯಿತ ಪ್ರತಿನಿಧಿಗಳು ಸಾರ್ವಜನಿಕರಿಗೆ ಅನ್ಯಾಯ ಮಾಡುತ್ತಿದ್ದಾರೆ. ಹಾಗಾಗಿ ಸರಕಾರವು ಇದನ್ನು ಗಂಭೀರವಾಗಿ ಪರಿಗಣಿಸಿ, ಸೂಕ್ತ ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ಬಸವರಾಜ ಶರಣಪ್ಪ ಆಗ್ರಹಿಸಿದರು.
-----------------------------------
'ಗ್ರಾಮೀಣ ಭಾಗದಲ್ಲಿರುವ ನಿರುದ್ಯೋಗಿಗಳಿಗೆ ಉದ್ಯೋಗವನ್ನು ನೀಡಿ, ಅವರನ್ನು ಆರ್ಥಿಕವಾಗಿ ಸಬಲಗೊಳಿಸಲು ಉದ್ಯೋಗ ಖಾತ್ರಿ ಯೋಜನೆಯನ್ನು ಸರಕಾರ ಜಾರಿ ಮಾಡಿದೆ. ಆದರೆ ಅಧಿಕಾರಿಗಳು ಯೋಜನೆಯ ಮೂಲ ಉದ್ದೇಶವನ್ನು ಕಡೆಗಣಿಸುತ್ತಿದ್ದಾರೆ. ಗ್ರಾಮಪಂಚಾಯಿತಿಗಳಲ್ಲಿರುವ ಪ್ರಭಾವಿಗಳೊಂದಿಗೆ ಕೈಜೋಡಿಸಿ ಯಂತ್ರಗಳ ಮೂಲಕ ಕಾಮಗಾರಿಗಳನ್ನು ನಡೆಸಿ, ಅನುದಾನವನ್ನು ಕಬಳಿಸುತ್ತಿದ್ದಾರೆ'.
- ಬಸವರಾಜ ಶರಣಪ್ಪ, ಸಾಮಾಜಿಕ ಕಾರ್ಯಕರ್ತ